ಬೆಳಗಾವಿ: ಮಾನಸಿಕ ಆರೋಗ್ಯ ಸಂಸ್ಥೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯ ಪರಿಭಾಷೆಯೊಳಗೆ ಸೇರಿಸಲು ಹಾಗೂ ಇತರೆ ವೈದ್ಯಕೀಯ ಸಂಸ್ಥೆಗಳ ನೊಂದಣಿಯನ್ನು ಸರಳಗೊಳಿಸುವ ಉದ್ದೇಶದಿಂದ ರೂಪಿಸಲಾದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಿ, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ಅನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಪ್ರಸ್ತುತ ಖಾಸಗಿ ವೈದ್ಯಕೀಯ ಸಂಸ್ಥೆಗಳು ಈ ಅಧಿನಿಯಮದಡಿ ಸೇರ್ಪಡೆಗೊಂಡಿರಲಿಲ್ಲ, ಇದರಿಂದಾಗಿ ಕೆಲವು ನಿಯಮಗಳನ್ನು ಪಾಲಿಸುವುದರಲ್ಲಿ ತೊಡಕಿತ್ತು. ಹೀಗಾಗಿ ಮಾನಸಿಕ ಆರೋಗ್ಯ ಸಂಸ್ಥೆಗಳನ್ನೂ ಕೂಡ ಅಧಿನಿಯಮದಡಿ ಖಾಸಗಿ ವೈದ್ಯಕೀಯ ಸಂಸ್ಥೆಯ ಪರಿಭಾಷೆಯೊಳಗೆ ಸೇರ್ಪಡೆಗೊಳಿಸಲಾಗುತ್ತಿದೆ.
ಅಲ್ಲದೆ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಕೆಪಿಎಂಇ ಸಮಿತಿಯಡಿ ನೊಂದಣಿ ಮತ್ತು ಪರವಾನಗಿ ಪಡೆಯುವ ನಿಟ್ಟಿನಲ್ಲಿ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದವು. ಹೀಗಾಗಿ ತಾತ್ಕಾಲಿಕ ನೊಂದಣಿ ಪ್ರಮಾಣ ಪತ್ರ ಮಂಜೂರು ಮಾಡಲು ಅಥವಾ ನವೀಕರಣ ಮಾಡುವುದು ಸೇರಿದಂತೆ ವಿವಿಧ ಪ್ರಕ್ರಿಯೆಗಳ ಸರಳೀಕರಣಕ್ಕಾಗಿ ಈ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುತ್ತಿದೆ.
ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪ್ರಾಧಿಕಾರಕ್ಕೆ ನಾಮನಿರ್ದೇಶನ ಮಾಡಲು ವಿಧೇಯಕದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ಖಾಸಗಿ ಕ್ಲಿನಿಕ್ಗಳಿಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣೆ ಪತ್ರ ನೀಡುವುದನ್ನು ಕಡ್ಡಾಯಗೊಳಿಸಿದ್ದು, ಇದರಿಂದ ಸಣ್ಣ ಪುಟ್ಟ ಖಾಸಗಿ ಕ್ಲಿನಿಕ್ಗಳಿಗೂ ತೊಂದರೆಯಾಗುತ್ತಿದೆ. ಇದನ್ನು ಸಡಿಲಗೊಳಿಸುವಂತೆ ಶಾಸಕರುಗಳಾದ ಡಾ. ಶಿವರಾಜ್ ಪಾಟೀಲ್, ಡಾ. ಶ್ರೀನಿವಾಸ್ ಸೇರಿದಂತೆ ಹಲವರು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, ಆಸ್ಪತ್ರೆ ಸೇರಿದಂತೆ ವಿವಿಧ ಬಗೆಯ ವಾಣಿಜ್ಯ ಕಟ್ಟಡಗಳಲ್ಲಿ ಅಗ್ನಿ ಆಕಸ್ಮಿಕದಿಂದ ಜೀವ ಹಾನಿ ಅಥವಾ ಆಸ್ತಿ ಹಾನಿಯಾಗದಂತೆ ತಡೆಗಟ್ಟುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆ ಈ ನಿಯಮ ರೂಪಿಸಿದೆ. ಹೀಗಾಗಿ ನಿಯಮಗಳನ್ನು ಸಡಿಲಗೊಳಿಸುವ ಅಧಿಕಾರವ್ಯಾಪ್ತಿ ಆರೋಗ್ಯ ಇಲಾಖೆಗೆ ಬರುವುದಿಲ್ಲ ಎಂದರು.ಸದನದ ಸದಸ್ಯರುಗಳ ಚರ್ಚೆಯ ಬಳಿಕ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಲಾಯಿತು.
