ದಾವಣಗೆರೆ : ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಳಿವಯಸ್ಸಿನಲ್ಲಿಯೂ ಅತ್ಯಂತ ಕ್ರೀಯಾಶೀಲ:
ಶಾಮನೂರು ಶಿವಶಂಕರಪ್ಪ ಅವರು ದೇಶ ಕಂಡಂತಹ ಹಿರಿಯ ಶಾಸಕ, ಮಾಜಿ ಮಂತ್ರಿ ಹಾಗೂ ದಾವಣಗೆರೆಯ ನಗರಸಭೆ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಖಜಾಂಚಿಯಾಗಿ ಸುಧೀರ್ಘ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅವರ ಜನ್ಮದಿನಾಚರಣೆಯಲ್ಲಿ ಹಾಗೂ ದಾಲ್ ಮಿಲ್ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದು, ಶ್ರೀಯುತರು ಶತಾಯುಷಿಗಳಾಗುತ್ತಾರೆ ಎಂಬ ನಂಬಿಕೆಯಿತ್ತು. ಅವರ ಅಗಲಿಕೆಯಿಂದ ನಾಡಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ತಮ್ಮ ಇಳಿವಯಸ್ಸಿನಲ್ಲಿಯೂ ಅತ್ಯಂತ ಕ್ರೀಯಾಶೀಲರಾಗಿದ್ದರು ಎಂದರು.
ವೀರಶೈವ ಮಹಾಸಭಾದ ರಾಷ್ಟ್ರಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆನು. ಬಿಜಾಪುರದ ಅಕ್ಕಮಹಾದೇವಿ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜಗದ್ಗುರು ಬಸವಣ್ಣನವರ ಛಾಯಾಚಿತ್ರ ಕಡ್ಡಾಯಗೊಳಿಸುವ ತೀರ್ಮಾನವನ್ನು ಅಭಿನಂದಿಸಲು ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.
ಜನಮನ್ನಣೆಗೆ ಪಾತ್ರರಾಗಿದ್ದ ನಾಯಕ:
ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಿಲ್ಲದಿದ್ದರೂ, ಆ ಕ್ಷೇತ್ರದಲ್ಲಿ ಜನಮನ್ನಣೆಗೆ ಪಾತ್ರರಾಗಿದ್ದರಲ್ಲದೇ, ಆರು ಬಾರಿ ಸತತವಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಸದಾ ಚೈತನ್ಯಶೀಲರಾಗಿದ್ದ ಶಾಮನೂರು ಶಿವಶಂಕರಪ್ಪನವರು ಮುಂದಿನ ಚುನಾವಣೆಯಲ್ಲಿಯೂ ಭಾಗವಹಿಸುವ ಹುರುಪನ್ನು ತೋರಿದ್ದರು. ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರುವಾಗಿದ್ದರು ಎಂದರು.
ಬಡವರು, ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಲು ಟ್ರಸ್ಟ್ ಮೂಲಕ ನೆರವಾಗುವ ಕೊಡುಗೈದಾನಿಯಾಗಿದ್ದರು. ಪ್ರತಿಯೊಬ್ಬರಿಗೂ ಹುಟ್ಟು ಆಕಸ್ಮಿಕ, ಆದರೆ ಸಾವು ಖಚಿತ, ಈ ನಡುವಿನ ಪಯಣದಲ್ಲಿ ಬದುಕಿನ ಸಾರ್ಥಕತೆ ಕಂಡುಕೊಳ್ಳುವುದು ಮುಖ್ಯ. ದು:ಖದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ನಿಜಕ್ಕೂ ಸಾರ್ಥಕ ಎಂದರು.
ಬಾಪೂಜಿ ವಿದ್ಯಾಸಂಸ್ಥೆ ಮೂಲಕ ಶೈಕ್ಷಣಿಕ ಕ್ರಾಂತಿ:
ಕೇವಲ ಜವಳಿ ಕೇಂದ್ರವಾಗಿದ್ದ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಬಾಪೂಜಿ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಸಹಸ್ರಾರು ಬದುಕಿಗೆ ದಾರಿದೀಪವಾಗಿದ್ದರು. ಉದ್ಯಮಿಯಾಗೀ, ಕೈಗಾರಿಕೋದ್ಯಮಿಯಾಗೀ, ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾಗಿ, ರಾಜಕಾರಣಿಯಾಗಿ ಸುದೀರ್ಘ ಸೇವೆ ಸಲ್ಲಿಸಿರುವುದು ಶ್ಲಾಘನೀಯ ಎಂದರು.
ಶಾಮನೂರು ಶಿವಶಂಕರಪ್ಪ ಅವರಿಂದ ಶಿಕ್ಷಣ, ಧಾರ್ಮಿಕ, ವ್ಯಾಪಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
ಶಾಮನೂರು ಶಿವಶಂಕರಪ್ಪ ಅವರು ಹೃದಯ ಶ್ರೀಮಂತಿಕೆ ವ್ಯಕ್ತಿತ್ವ ಹೊಂದಿದ್ದವರು. ಅವರು ಶಿಕ್ಷಣ, ಧಾರ್ಮಿಕ ಕ್ಷೇತ್ರ, ವ್ಯಾಪಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ ಮಾಡಿದ್ದಾರೆ. ಅವರ ಆದರ್ಶಗಳು ಸದಾ ಜೀವಂತವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಇಷ್ಟು ದೊಡ್ಡ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನ್ನ ಭಾಗ್ಯ. ಅನೇಕ ಪರಮ ಪೂಜ್ಯ ಜಗದ್ಗುರುಗಳ ಸಂಗಮದಲ್ಲಿ ನಮ್ಮ ಎಲ್ಲಾ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಶರಣರ ಗುಣವನ್ನು ಮರಣದಲ್ಲಿ ಕಾಣಬೇಕು ಎಂದು ಹಿರಿಯರು ಹೇಳಿದ್ದಾರೆ. ಶರಣರಿಗೆ ಮರಣವೇ ಮಹಾನವಮಿ ಎಂದು ಕೇಳಿದ್ದೇವೆ. ಮನುಷ್ಯನಿಗೆ ಬದುಕು ಶಾಶ್ವತವಲ್ಲ. ಆದರೆ ಬಿಟ್ಟು ಹೋಗುವ ಕೆಲಸಗಳಷ್ಟೇ ಶಾಶ್ವತ ಎಂದರು.
ಯೋಗಿ ಎಂದು ಕರೆಸಿಕೊಳ್ಳುವುದಕ್ಕಿಂತ ಉಪಯೋಗಿ ಎಂದು ಕರೆಸಿಕೊಳ್ಳುವುದು ಬಹಳ ಮುಖ್ಯ. ನನ್ನ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಡುವಣ ಭಾಂದವ್ಯ ಬೇರೆ. ಅವರು ಎಷ್ಟು ದಿನ ಶಾಸಕರಾಗಿದ್ದರೋ ಅಷ್ಟೂ ದಿನ ಅವರೊಂದಿಗೆ ಸಹೋದ್ಯೋಗಿಯಾಗಿ ಕೆಲಸ ಮಾಡಿದ್ದೇನೆ. ಒಬ್ಬ ವ್ಯಕ್ತಿ ಹಿಂದೆ ಎಷ್ಟು ಜನ ಇದ್ದಾರೆ ಎಂಬುದಕ್ಕಿಂತ, ಎಷ್ಟು ಜನರ ಬದುಕನ್ನು ಬದಲಿಸಿದ್ದಾರೆ ಎಂಬುದು ಮುಖ್ಯ. ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರ ಬದುಕೇ ದೊಡ್ಡ ಸಾಕ್ಷಿಗುಡ್ಡೆ. ಅವರು ನಮ್ಮನ್ನು ಅಗಲಿದ್ದರೂ ಅವರ ಆದರ್ಶಗಳು ನಮ್ಮೊಂದಿಗೆ ಜೀವಂತವಾಗಿವೆ ಎಂದರು.
ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ. 95 ವರ್ಷದವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ ಶಾಮನೂರು ಶಿವಶಂಕರಪ್ಪ ಅವರು ಇಡೀ ಭಾರತದಲ್ಲಿ ದಾಖಲೆ ಬರೆದಿದ್ದಾರೆ. ಕೋವಿಡ್ ಸಮಯದಲ್ಲಿ ಹತ್ತಾರು ಕೋಟಿ ಹಣ ವೆಚ್ಚ ಮಾಡಿ ಈ ಭಾಗದ ಜನರಿಗೆ ಉಚಿತ ಲಸಿಕೆ ಹಾಕಿಸಿದರು. ದೇಶದಲ್ಲಿ ಯಾರೂ ಮಾಡದ ತೀರ್ಮಾನ, ಸೇವೆಯನ್ನು ಅವರು ಮಾಡಿದರು. ಅಧಿಕಾರಕ್ಕಿಂತ ಆದರ್ಶ ಬಹಳ ದೊಡ್ಡದು ಎಂದು ಅವರು ತಮ್ಮ ಜೀವನದ ಮೂಲಕ ಸಾರಿದ್ದಾರೆ ಎಂದು ಸ್ಮರಿಸಿದರು.
