ಬೆಂಗಳೂರು, ನ.18: ಮೇಕೆದಾಟು ಯೋಜನೆಗೆ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು.
ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ. ಡಿಪಿಆರ್ ಅನ್ನು ಪರಿಸ್ಕರಿಸಿ ಸಲ್ಲಿಸಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು.
ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲು ತಯಾರು ಮಾಡಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ಅನ್ನು ಚಾಲ್ತಿ ದರಗಳಿಗೆ ಪರಿಸ್ಕರಿಸಿ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ ಎಂದರು.
ತುಮಕೂರಿಗೆ ಮೆಟ್ರೋ ಸಾಧ್ಯತೆಗಳ ಬಗ್ಗೆ ಅಧ್ಯಯನ:
ತುಮಕೂರು ಮೆಟ್ರೋ ಮಾರ್ಗ ಸಾಧ್ಯತೆಗಳ ಬಗ್ಗೆ ತಿಳಿಯಲು ಮುಂದಾಗಿದ್ದೇವೆ. ಇದರಲ್ಲಿ ಟೀಕೆ ಮಾಡುವಂತಹದ್ದು ಏನಿದೆ? ನಮ್ಮ ಗೃಹ ಸಚಿವರು ಸೇರಿದಂತೆ ಕೆಲವರು ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಮೆಟ್ರೋ ಮಾರ್ಗ ಮಾಡಲು ಯಾವೆಲ್ಲಾ ಮಾರ್ಗಗಳಿವೆ ಎಂದು ಅಧ್ಯಯನ ಮಾಡಬೇಕಿದೆ ಎಂದು ತಿಳಿಸಿದರು.
