ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಅಪಾಯ ಸ್ಥಿತಿಯಲ್ಲಿರುವ ಮರಗಳ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಬಿಎ ವ್ಯಾಪ್ತಿಯ ಎಲ್ಲಾ ಇಲಾಖೆಗಳೊಂದಿಗೆ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಪಾಯ ಸ್ಥಿತಿಯಲ್ಲಿರುವ ಮರಗಳನ್ನು ಗುರುತಿಸಿ, ಅವುಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯ ವಿಭಾಗದ ಅಧಿಕಾರಿಗಳಿಗೆ ನಿರ್ದೇಶಿಸಿದರು.
ನಗರದಲ್ಲಿ ಸಿಗ್ನಲ್ಗಳಿಗೆ ಅಡ್ಡಿಯಾಗಿರುವ, ಪಾದಚಾರಿ ಮಾರ್ಗಗಳಲ್ಲಿ ನಾಗರಿಕರ ತಲೆಗೆ ತಾಗುವ ಸಂಭವ ಇರುವ, ರಸ್ತೆಗಳಿಗೆ ವಾಲಿಕೊಂಡಿರುವ ಹಾಗೂ ವಿದ್ಯುತ್ ದೀಪಗಳಿಗೆ ಅಡ್ಡಿಯಾಗಿರುವ ಮರದ ರೆಂಬೆಗಳು/ ಕೊಂಬೆಗಳನ್ನು ಕೂಡಲೇ ಕತ್ತರಿಸಿ ತೆರವುಗೊಳಿಸಬೇಕು. ಜೊತೆಗೆ ಪಾದಚಾರಿ ಮಾರ್ಗಗಳಲ್ಲಿ ಬಿದ್ದಿರುವ ಮರದ ದಿಂಡಿಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸೂಚಿಸಿದರು.
ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ‘ಮಾರ್ಕ್ಸ್’ ಮೂಲಕ ರಸ್ತೆ ಕತ್ತರಿಸಲು ಸಲ್ಲಿಸಿರುವ ಅರ್ಜಿಗಳಿಗೆ ತಕ್ಷಣ ಅನುಮತಿ ನೀಡಬೇಕು. ಅನುಮತಿ ನೀಡಿದ ನಂತರ ಸಂಬಂಧಿತ ಇಲಾಖೆಗಳು ರಸ್ತೆ ಕತ್ತರಿಸುವ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಬಳಿಕ ರಸ್ತೆ ಪುನರ್ ನಿರ್ಮಾಣ ಕಾರ್ಯವನ್ನು ಗುಣಮಟ್ಟದೊಂದಿಗೆ ನಿರ್ವಹಿಸಬೇಕು ಎಂದು ಸೂಚಿಸಿದರು.
ಪಾದಚಾರಿ ಮೇಲ್ಸೇತುವೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಆಯಾ ನಗರ ಪಾಲಿಕೆಗಳಲ್ಲಿ ಪ್ರಸ್ತುತ ನಿರ್ಮಾಣ ಸಾಧ್ಯವಿರುವ ಮೇಲ್ಸೇತುವೆಗಳನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬಸ್ ತಂಗುದಾಣಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಬಾಕಿ ಇರುವ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದರು.
ಮುಂಗಾರು ಮಳೆ ಪ್ರಾರಂಭವಾಗುವ ಮುನ್ನವೇ ಸಂಚಾರಿ ಪೊಲೀಸ್ ವಿಭಾಗವು ರಸ್ತೆಗಳಲ್ಲಿ ನೀರು ನಿಲ್ಲುವ ಸ್ಥಳಗಳ ಪಟ್ಟಿಯನ್ನು ಸಲ್ಲಿಸಿದ್ದು, ಅದರನ್ವಯ ಸ್ಥಳ ಪರಿಶೀಲನೆ ನಡೆಸಿ ಎಲ್ಲಾ ಪ್ರದೇಶಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಮಳೆನೀರು ನಿಲ್ಲದಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಹೊರ ವರ್ತುಲ ರಸ್ತೆಯಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್. ಪುರಂ ವರೆಗಿನ ಮೇಲ್ಸೇತುವೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಬೇಕು. ಮೇಲ್ಸೇತುವೆಗಳಿಂದ ನೀರು ಗ್ರೇಡ್ ಮಟ್ಟದ ರಸ್ತೆಗೆ ಸೋರುತ್ತಿರುವುದರಿಂದ ಸರ್ವಿಸ್ ರಸ್ತೆಗಳು ಹಾನಿಗೊಳಗಾಗುತ್ತಿವೆ. ಆದ್ದರಿಂದ ಮಳೆನೀರು ಸೋರದಂತೆ ಸಮರ್ಪಕ ಪೈಪ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಆಯಾ ನಗರ ಪಾಲಿಕೆಗಳಲ್ಲಿ ತಕ್ಷಣ ಟೋಯಿಂಗ್ ಕಾರ್ಯಾಚರಣೆ ಪ್ರಾರಂಭಿಸಬೇಕು. ಕೆ-100ರಲ್ಲಿ ಜಲಮಂಡಳಿಯ ಕೊಳಚೆ ನೀರು ಹರಿದುಬರುವುದನ್ನು ಪರಿಣಾಮಕಾರಿಯಾಗಿ ತಡೆಯಬೇಕು ಎಂದರು.
ಮೆಟ್ರೋ ನಿಲ್ದಾಣಗಳಲ್ಲಿ ಹಾಗೂ ಸುತ್ತಮುತ್ತ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಲಾಸ್ಟ್ ಮೈಲ್ ಕನೆಕ್ಟಿವಿಟಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
ಆಯಾ ನಗರ ಪಾಲಿಕೆಗಳಲ್ಲಿ ಪಾದಚಾರಿ ಮಾರ್ಗಗಳ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.
ವೈಟ್ ಟಾಪಿಂಗ್ ಕಾಮಗಾರಿಗಳು ನಡೆಯುತ್ತಿರುವ ಕಡೆ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಕಾಮಗಾರಿಗಳಿಗೆ ವೇಗ ನೀಡಬೇಕು ಎಂದರು.
ಸಭೆಯಲ್ಲಿ ವಿಶೇಷ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್, ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್ ಹಾಗೂ ಡಾ: ರಾಜೇಂದ್ರ ಕೆ.ವಿ., ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ, ಅಪರ ಆಯುಕ್ತರಾದ ಲತಾ ಆರ್., ದಲ್ಜಿತ್ ಕುಮಾರ್, ನವೀನ್ ಕುಮಾರ್ ರಾಜು, ಪ್ರಧಾನ ಅಭಿಯಂತರರಾದ ಬಿ.ಎಸ್. ಪ್ರಹ್ಲಾದ್ ಹಾಗೂ ಅಗ್ನಿಶಾಮಕ, ಜಲಮಂಡಳಿ, ಬೆಸ್ಕಾಂ, ಮೆಟ್ರೋ, ರೈಲ್ವೆ, ಗೇಲ್ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
