ಸಮಗ್ರ ಸುದ್ದಿ

ಕೆ.ಆರ್.ಐ.ಡಿ.ಎಲ್ ಕಾಮಗಾರಿಗಳ ಪ್ರಗತಿ ಪರಿಶೀಲನೆ|ಕಾಮಗಾರಿ ವಿಳಂಬವಾದಲ್ಲಿ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

Share

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಇಂದು ಪರಿಶೀಲಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೆ ಬರುವ ಜಿಲ್ಲೆಗಳಿಂದ ಸಭೆಗೆ ಬಂದಿದ್ದ ಕೆ.ಆರ್.ಐ.ಡಿ.ಎಲ್ ಇಂಜಿನಿಯರ್ ಗಳೊಂದಿಗೆ ಚರ್ಚಿಸಿದ ಸಚಿವರು ಕಾಮಗಾರಿಗಳಲ್ಲಿ ಆಗುತ್ತಿರುವ ವಿಳಂಬ ಹಾಗೂ ಲೋಪಗಳನ್ನು ಗಂಭೀರವಾಗಿ ಪರಿಗಣಿಸಿ ಕೆ.ಆರ್.ಐ.ಡಿ.ಎಲ್ ಎಂಜಿನಿಯರುಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇಂಜನಿಯರುಗಳು ವೃತ್ತಿಯಲ್ಲಿ ಬದ್ಧತೆಯಿಂದ ಜವಾಬ್ದಾರಿಗಳನ್ನು ನಿರ್ವಹಿಸದಿದ್ದಲ್ಲಿ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಸೂಚಿಸಿದರು.

ಗ್ರಾಮೀಣ ನೀರು ಸರಬರಾಜು ಇಲಾಖೆ ಮೂಲಕ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರದೇಶದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿ ಸಾಮೂಹಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವಲ್ಲಿ ಆಗಿರುವ ವಿಳಂಬದ ಬಗ್ಗೆ ಸಚಿವರು ಪ್ರಸ್ತಾಪ ಮಾಡಿ ಮೇ ಮೊದಲ ವಾರದಲ್ಲಿ ಶೌಚಗೃಹಗಳನ್ನು ನಿರ್ಮಾಣ ಮಾಡಿ ಬಳಕೆಗೆ ಸಿದ್ಧಪಡಿಸದಿದ್ದಲ್ಲಿ ಸಂಬಂಧಿಸಿದ ಇಂಜಿನಿಯರ್ ಗಳನ್ನು ಅಮಾನತ್ತು ಮಾಡಲಾಗುವುದು ಎಂದು ಕಟ್ಟೆಚ್ಚರ ನೀಡಿದರು.

ರಸ್ತೆ ಹಾಗೂ ಕಟ್ಟಡ ನಿರ್ಮಾಣದಲ್ಲಿ ಬದಲಾಗಿರುವ ತಾಂತ್ರಿಕ ನೈಪುಣ್ಯತೆಗಳನ್ನು ಬಳಸಿಕೊಂಡು ಪರಿಸರಸ್ನೇಹಿ ಸಾಮಗ್ರಿಗಳನ್ನು ಬಳಸಿಕೊಳ್ಳುವಲ್ಲಿ ಕೆ.ಆರ್.ಐ.ಡಿ.ಎಲ್ ಚಿಂತಿಸಬೇಕು, ಅಗತ್ಯಬಿದ್ದಲ್ಲಿ ತಜ್ಞರ ಸಮಿತಿಯನ್ನು ರಚಿಸಿ ಮಾರ್ಗದರ್ಶನ ಪಡೆಯುವಂತೆ ಸೂಚಿಸಿದರು.

ವಿಡಿಯೊ ಸಂವಾದದ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ನಳಿನ್ ಅತುಲ್ ಪಾಲ್ಗೊಂಡಿದ್ದರು. ಸಭೆಯಲ್ಲಿ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಎಂ.ಬಿ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.


Share

You cannot copy content of this page