ಸಮಗ್ರ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರು ಮೊದಲಿಂದಲೂ ಸಾಮಾಜಿಕ ನ್ಯಾಯದ ಪರ – ಡಾ.ಜಿ.ಪರಮೇಶ್ವರ್

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಆ ಸಿದ್ಧಾಂತದ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಇದರಲ್ಲಿ ಹೊಸದೇನು ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಮೇಲೆ ಬದ್ಧರಾಗಿದ್ದಾರೆ. ಹಿಂದಿನಿಂದಲೂ ಕೂಡ ಸಾಮಾಜಿಕ ನ್ಯಾಯದ ಪರವಾಗಿದ್ದಾರೆ. ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಹೊಸದಾಗಿ ಇವತ್ತು ಮಾಡುತ್ತಿಲ್ಲ ಎಂದರು.

ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಆವಕಾಶವಿಲ್ಲ. ಅದಕ್ಕೆ ಅವಕಾಶ ಕೊಡುವುದೂ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮೊಬೈಲ್ ಬ್ಯಾನ್ ವಿಚಾರದ ಕುರಿತು ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ ವಿದ್ಯಾಭ್ಯಾಸದ ಮೇಲೆ ಬೇರೆ ರೀತಿಯ ಪರಿಣಾಮ ಬೀರುತ್ತಿದೆ. ಬಹಳಷ್ಟು ದೇಶಗಳಲ್ಲಿ ಅಧ್ಯಯನ ನಡೆಸಿ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಚಿಂತನೆ ಹರಿಸಿದ್ದಾರೆ. ಇದರ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ತೀರ್ಮಾನ ಮಾಡುತ್ತಾರೆ ಎಂದರು.

ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಅಕ್ರಮ ಬಾಂಗ್ಲಾ ವಲಸಿಗರ ಬಂಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಂತರಿಕ ಭದ್ರತಾ ವಿಭಾಗದವರು ಅಲರ್ಟ್ ಮಾಡಿದ್ದಾರೆ. ಕಳೆದ ಒಂದು ತಿಂಗಳಿಂದ ಪ್ರತಿ ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಕಾಫಿ ತೋಟ, ಕಟ್ಟಡಗಳಲ್ಲಿ ಕೆಲಸ ಮಾಡುತ್ತಾರೆ ಎಂಬುದನ್ನು ಕೂಡ ವಿಪಕ್ಷದವರು ಹೇಳಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಪ್ರತಿ ಪೊಲೀಸ್ ಠಾಣೆ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ದಲಿತ ಮುಖ್ಯಮಂತ್ರಿ ಕೂಗು ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದೆಲ್ಲ ವಿರೋಧ ಪಕ್ಷದವರು ಮಾಡುತ್ತಿರುವ ಕೆಲಸ. ವಿರೋಧ ಪಕ್ಷದವರು ತಮ್ಮ ವಿಚಾರಗಳನ್ನು ಮುಚ್ಚಿಟ್ಟುಕೊಳ್ಳಲು ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆಡಳಿತ ಮಾಡುತ್ತಿಲ್ಲವೇ? ಕಳೆದ ಹನ್ನೆರಡು ದಿನಗಳಿಂದ ಬಜೆಟ್ ಕುರಿತು ವಿವಿಧ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಕೂಗು ವಿಚಾರವನ್ನು ವಿರೋಧ ಪಕ್ಷದವರು ಸುಮ್ಮನೆ ಹೊರಗೆ ತರುತ್ತಿದ್ದಾರೆ ಎಂದ ಅವರು, ದಲಿತ ಸಿಎಂ ಕಾಂಗ್ರೆಸ್ ಪಕ್ಷದವರೆ ಮಾಡಬೇಕಲ್ಲ.? ಇನ್ಯಾರು ಮಾಡುತ್ತಾರೆ. ಸಂದರ್ಭ ಬಂದಾಗ ಹೈಕಮಾಂಡ್ ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ವಿಚಾರದ ಕುರಿತು ಮಾತನಾಡಿ, ಕೆ.ಹೆಚ್.ರಂಗನಾಥ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಯೂನಿವರ್ಸಿಟಿ, ಕಾಲೇಜುಗಳಲ್ಲಿ ನಡೆಯುತ್ತಿದ್ದ ಚುನಾವಣೆ ವೇಳೆ ಘರ್ಷಣೆಗಳು ನಡೆದವು. ಆ ಕಾರಣಕ್ಕಾಗಿ ವಿದ್ಯಾರ್ಥಿ ಚುನಾವಣೆಗಳನ್ನು ನಿಷೇಧಿಸಿದರು. ಚುನಾವಣೆ ತಂದರೆ ವಿದ್ಯಾರ್ಥಿಗಳ ನಡುವೆ ಗುಂಪುಗಳಾಗಿ ಹೊಡೆದಾಡಿಕೊಳ್ಳುತ್ತಾರೆ ಎಂಬ ಕಾರಣದಿಂದ. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಸಿಂಡಿಕೇಟ್ ಚುನಾವಣೆಯನ್ನು ಬ್ಯಾನ್ ಮಾಡಲಾಯಿತು. ಈಗ ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕೆಂಬ ಒತ್ತಡ ಬರುತ್ತಿದೆ. ಈ ಬಗ್ಗೆ ಕ್ಯಾಬಿನೆಟ್ ಏನು ನಿರ್ಧಾರ ಮಾಡುತ್ತದೆ ನೋಡಬೇಕು ಎಂದು ಹೇಳಿದರು.


Share

You cannot copy content of this page