ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 144 BS-VI ನಗರ ಸಾರಿಗೆ ಡೀಸೆಲ್ ಬಸ್ಸುಗಳನ್ನು ರೂ.62.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್. ಕೆ.ಪಾಟೀಲ್ ತಿಳಿಸಿದರು.
ಇಂದು ಮುಖ್ಯಮಂತ್ರಿ ಯವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು
ನೇರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿಷಯವಾಗಿ ಇಂದಿನ ಸಭೆಯಲ್ಲಿ ಚರ್ಚೆ ಮುಂದುವರೆದಿದ್ದು, ಸ್ವಲ್ಪ ಕಾಲ ವಿವರವಾಗಿ ಚರ್ಚೆ ನಡೆಸಲಾಗಿದೆ, ಆದರೂ ಇನ್ನಷ್ಟು ಸಚಿವರುಗಳು ಮಾತನಾಡಲು ಬಾಕಿ ಇರುವುದರಿಂದ ಆದರೆ ಪೂರ್ಣವಾದ ಚರ್ಚೆ ಆಗಿಲ್ಲ, ಈ ವಿಷಯದ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಂದುವರಿದ ತೀವ್ರ ಚರ್ಚೆಗಾಗಿ ಸಭೆ ಸೇರಲು ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಸಮಯವನ್ನು ನಿಗದಿಪಡಿಸಲು ಸಚಿವ ಸಂಪುಟ ತೀರ್ಮಾನಿಸಿತು ಎಂದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಾಪ್ತಿಯ ವಿರಿಜಾ, ದೇವರಾಯ, ಆರ್.ಬಿ.ಎಲ್.ಎಲ್ ಮತ್ತು ಬಂಗಾರದೊಡ್ಡಿ ನಾಲೆಗಳ ವಿತರಣಾ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ರೂ.60.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಬೀದರ್ ಜಿಲ್ಲೆಯಲ್ಲಿ ಮಾಂಜ್ರಾ ನದಿಗೆ ಅಡ್ಡಲಾಗಿ ಭಾಲ್ಕಿ ತಾಲ್ಲೂಕಿನಲ್ಲಿ ನಿರ್ಮಿಸಿರುವ ಜೀರಗಿಯಾಳ್, ಮಾಣಿಕೇಶ್ವರ ಮತ್ತು ಚಂದಾಪುರ ಹಾಗೂ ಔರಾದ್ ತಾಲ್ಲೂಕಿನಲ್ಲಿ ನಿರ್ಮಿಸಿರುವ ಹಾಲ್ಹಳ್ಳಿ ಒಟ್ಟು ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ಗಳ ಪುನಶ್ಚೇತನ ಕಾಮಗಾರಿಗಳನ್ನು ರೂ.151.70 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಈಗಾಗಲೇ ಗ್ರೇಟರ್ ಬೆಂಗಳೂರು ಕಾಯ್ದೆ, 2025ರಲ್ಲಿ ಕಲ್ಪಿಸಿರುವ ಅವಕಾಶಗಳಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಜಾಹೀರಾತುಗಳಿಗೆ ಶುಲ್ಕಗಳನ್ನು ಪಾವತಿಸಿಕೊಂಡು ಅನುಮತಿ ನೀಡಲು Karnataka Municipalities Act, 1964 and The Karnataka Municipal Corporations Act, 1976 ಕಾಯ್ದೆಗೆ ತಿದ್ದುಪಡಿ ತರಲು The Karnataka Municipalities and Certain Other Law (Amendment) Bill, 2026 ಗೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಯಂ ಆಗಿ ಅಥವಾ ಗುತ್ತಿಗೆ ಆಧಾರದ ಮೇಲೆ ಅಥವಾ ತಾತ್ಕಾಲಿಕ ಆಧಾರದ ಮೇಲೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವೈದ್ಯರು ಮತ್ತು ನೌಕರರುಗಳ ಸೇವೆಯನ್ನು ಅತ್ಯವಶ್ಯಕ ಸೇವೆಯೆಂದು ಪರಿಗಣಿಸುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ಸಭೆ ನಡೆಸಿ ಚರ್ಚಿಸಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲು ಸಚಿವ ಸಂಪುಟ ತೀರ್ಮಾನಿಸಿತು.
ರಾಜ್ಯ ಅಪರಾಧ ದಾಖಲಾತಿ ವಿಭಾಗ / ಪೊಲೀಸ್ ಗಣಕ ವಿಭಾಗಕ್ಕೆ ರಾಜ್ಯದಲ್ಲಿ ಪರಸ್ಪರ ಕಾರ್ಯನಿರ್ವಹಿಸಬಹುದಾದ ಅಪರಾಧ ನ್ಯಾಯ ವ್ಯವಸ್ಥೆ ಐ.ಸಿ.ಜೆ.ಎಸ್ (Inter-operable Criminal Justice System) ಹಾಗೂ ಐ.ಟಿ ಸೇವೆಗಳ ಅನುಷ್ಠಾನಕ್ಕೆ ವಿವಿಧ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ಗಳನ್ನು ರೂ.227.58 ಕೋಟಿಗಳ ವೆಚ್ಚದಲ್ಲಿ ಪೊಲೀಸ್ ಆಧುನೀಕರಣ ಯೋಜನೆಯಡಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
