ಬೆಂಗಳೂರು: 2026-27ನೇ ಬಜೆಟ್ ವಿವಿಧ ಇಲಾಖೆಗಳಲ್ಲಿನ 56 ಸಾವಿರ ಹುದ್ದೆಗಳ ನೇಮಕಾತಿ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಒಳಗೊಂಡ ಸಮಗ್ರ ಬಜೆಟ್ ಆಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಯುವಕರಿಗೆ ಆತಂಕವಿತ್ತು. 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ತಿರ್ಮಾನ ಮಾಡಿದ್ದಾರೆ. ರೈತ ಸಮುದಾಯಕ್ಕೆ 30 ಸಾವಿರ ಕೋಟಿ ರೂ. ಸಾಲ ನೀಡುವ ತೀರ್ಮಾನ ಮಾಡಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ 15000 ಹುದ್ದೆ, ಪೊಲೀಸ್ ಇಲಾಖೆಯಲ್ಲಿ 8 ಸಾವಿರ ಹುದ್ದೆಗಳು ಹಾಗೂ ಆರೋಗ್ಯ ಇಲಾಖೆಯಲ್ಲಿ 2500 ಹುದ್ದೆಗಳ ನೇಮಕಾತಿ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು ಎಂಬುದನ್ನು ಬಜೆಟ್ನಲ್ಲಿ ತಿಳಿಸಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿರುವುದು ಒಳ್ಳೆಯ ತೀರ್ಮಾನ. ತಂತ್ರಜ್ಞಾನ ಬಳಸಿ ರಾಜ್ಯಕ್ಕೆ ಸೀಮಿತವಾಗಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಮಾಡಬಹುದು ಎಂದು ಹೇಳಿದರು.
ಸಾಲದ ಬಜೆಟ್ ಎಂದು ಪ್ರತಿಭಟಿಸಿರುವ ಬಿಜೆಪಿಯ ನಡೆಯ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಸರ್ಕಾರ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡಿದೆ. ನಿಯಮದಂತೆ ಸಾಲ ಶೇ. 25 ರೊಳಗಿದ್ದೇವೆ. ಕೇಂದ್ರ ಸರ್ಕಾರ ಇದನ್ನು ಮೀರಿದೆ. ಈ ವಿಚಾರದಲ್ಲಿ, ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.
