ಬೆಂಗಳೂರು: ಶ್ರೀ ಮೈಲಾರ ಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಟ್ರಸ್ಟಿ ಮತ್ತು ಪ್ರಧಾನ ಅರ್ಚಕರು ಮಾನ್ಯ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ ರಿಟ್ ಅರ್ಜಿಯನ್ನು ದಾಖಲಿಸಿರುವ ಕಾರಣ ನ್ಯಾಯಾಲಯವು ಅನುವಂಶಿಕ ಟ್ರಸ್ಟಿಗಳಿಂದ ನಿರ್ವಹಿಸಲ್ಪಡುತ್ತಿರುವ ದೇವಸ್ಥಾನದ ವ್ಯವಸ್ಥಾಪನೆಯಲ್ಲಿ ಸರ್ಕಾರವು ಹಸ್ತಕ್ಷೇಪ ಮಾಡಲು ಅವಕಾಶವಿರುವುದಿಲ್ಲ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಶ್ರೀ ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ ಪ್ರಾಧಿಕಾರವನ್ನು ರಚಿಸಲು ಸಾಧ್ಯವಾಗಿರುವುದಿಲ್ಲ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನಸಭಾ ಶಾಸಕರಾದ ಕೃಷ್ಣ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕು ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ದೇವಸ್ಥಾನ ಹಾಗೂ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ದೇವರ ಗುಡ್ಡ ಗ್ರಾಮದಲ್ಲಿರುವ ಶ್ರೀ ಮಾಲತೇಶ ದೇವಸ್ಥಾನಗಳಿಗೆ ಜಂಟಿಯಾಗಿ ಪ್ರಾಧಿಕಾರವನ್ನು ರಚಿಸಲು ಸರ್ಕಾರವು ಆದೇಶ ಹೊರಡಿಸಿ ರೂ. 5 ಕೋಟಿಗಳ ಅನುದಾನವನ್ನು ಘೋಷಿಸಿತ್ತು.
ಆದರೆ ಶ್ರೀ ಮೈಲಾರ ಲಿಂಗೇಶ್ವರ ದೇವಸ್ಥಾನವು ಅನುವಂಶಿ ಟ್ರಸ್ಟಿಗಳಿಂದ ನಿರ್ವಹಿಸಲ್ಪಡುತ್ತಿರುವ ದೇವಸ್ಥಾನದ ವ್ಯವಸ್ಥಾಪನೆಯಲ್ಲಿ ಸರ್ಕಾರವು ಹಸ್ತಕ್ಷೇಪ ಮಾಡಲು ಅವಕಾಶವಿರುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿರುವುದರಿಂದ ಈ ದೇವಸ್ಥಾನಗಳಿಗೆ ಪ್ರಾಧಿಕಾರವನ್ನು ರಚಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
