ಬೆಂಗಳೂರು:ಅಲೆಮಾರಿ-ಅರೆ ಅಲೆಮಾರಿ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದರು.
ವಿಧಾನಪರಿಷತ್ತಿನ ಅಧಿವೇಶನದಲ್ಲಿಂದು ಸದಸ್ಯರಾದ ಪಿ.ಹೆಚ್. ಪೂಜಾರ್ ಅವರ ಪರವಾಗಿ ಎನ್.ರವಿ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ನಿಗಮದ ಎಲ್ಲಾ ಯೋಜನೆಗಳನ್ನು ಆನ್ಲೈನ್ ಮೂಲಕ ಅರ್ಜಿ ಕರೆದು ವಿವಿಧ ಹಂತಗಳಲ್ಲಿ ವ್ಯಾಪಕ ಪ್ರಚಾರ ನೀಡಲಾಗುತ್ತಿದೆ. ಇದರಿಂದಾಗಿ ಎಲ್ಲಾ ವಿವಿಧ ಯೋಜನೆಗಳಲ್ಲಿ ನಿಗಧಿತ ಗುರಿಗಿಂತ ಐದರಿಂದ ಹತ್ತು ಪಟ್ಟು ಹೆಚ್ಚು ಅರ್ಜಿಗಳು ಸ್ವೀಕೃತವಾಗುತ್ತಿವೆ ಎಂದರು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025ರ ಸೆಪ್ಟೆಂಬರ್ ಮಾಹೆಯಲ್ಲಿ ಅಲೆಮಾರಿ / ಅರೆ ಅಲೆಮಾರಿ ಸಮುದಾಯವೂ ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ ವಾಸವಿರುವ ಎಲ್ಲಾ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗಿದೆ. ಆಯೋಗದಿಂದ ಸರ್ಕಾರಕ್ಕೆ ಇನ್ನೂ ವರದಿ ಸಲ್ಲಿಕೆಯಾಗಿರುವುದಿಲ್ಲ ಎಂದು ತಿಳಿಸಿದರು.
