ಬೆಂಗಳೂರು:ಭಾರತೀಯ ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಮತ್ತು ಪದೋನ್ನತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ರಾಜ್ಯವನ್ನು ಪ್ರತಿನಿಧಿಸುವ ಎಲ್ಲ ಸಂಸದರಿಗೆ ಆಗ್ರಹಿಸಿದ್ದಾರೆ.
ಈ ಕುರಿತಂತೆ ಪತ್ರವನ್ನು ಬರೆದಿರುವ ಬಿಳಿಮಲೆ, ಪ್ರಸ್ತುತ ರೈಲ್ವೆ ನೇಮಕಾತಿ ಹಾಗೂ ಪದೋನ್ನತಿ ಪರೀಕ್ಷೆಗಳು ಕನ್ನಡ ಭಾಷೆಯಲ್ಲಿ ಲಭ್ಯವಿಲ್ಲದಿರುವುದರಿಂದ ಕನ್ನಡ ಭಾಷಾಭಿಮಾನಿಗಳಲ್ಲಿ ಹಾಗೂ ಅಭ್ಯರ್ಥಿಗಳಲ್ಲಿ ತೀವ್ರ ಅಸಮಾಧಾನವನ್ನು ಉಂಟು ಮಾಡಿದೆ. ರಾಜ್ಯ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶವು ಅಭ್ಯರ್ಥಿಗಳ ಮೂಲಭೂತ ಸಾಂವಿಧಾನಿಕ ಹಕ್ಕಾಗಿದ್ದು, ಇದು ಸಮಾನ ಅವಕಾಶಗಳ ಸಿದ್ಧಾಂತಕ್ಕೆ ಅನುಗುಣವಾಗಿದೆ ಎಂದಿದ್ದಾರೆ.
ಇತ್ತೀಚೆಗೆ ರೈಲ್ವೆ ಇಲಾಖೆಯು ಕರ್ನಾಟಕದಲ್ಲಿ ನಡೆಸುತ್ತಿದ್ದ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ದೊರಕದೇ ಇರುವ ಕುರಿತು ತೀವ್ರ ಪ್ರತಿಭಟನೆ ಬಂದ ಕಾರಣ ರೈಲ್ವೆ ಇಲಾಖೆಯು ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದು ಕನ್ನಡಿಗರ ತಾತ್ಕಾಲಿಕ ಗೆಲುವಾದರೂ ಸಹ ಇದನ್ನು ಶಾಶ್ವತ ಪರಿಹಾರವೆಂದು ಭಾವಿಸಲು ಬರುವುದಿಲ್ಲವೆಂದಿರುವ ಬಿಳಿಮಲೆ, ರಾಜ್ಯದ ಎಲ್ಲ ಸಂಸದರು ಒಗ್ಗಟಾಗಿ ಸಂಸತ್ತಿನಲ್ಲಿ ಈ ವಿಷಯವನ್ನು ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ಸಚಿವಾಲಯದ ಗಮನಕ್ಕೆ ತಂದು ಕ್ರಮಕ್ಕೆ ಆಗ್ರಹಿಸಬೇಕೆಂದಿದ್ದಾರೆ.
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ನಡೆಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ಸಂಸದರು ಒತ್ತಾಯಿಸಬೇಕೆಂದಿರುವ ಬಿಳಿಮಲೆ, ಕನ್ನಡಿಗರ ಭಾಷಾ ಹಕ್ಕುಗಳ ದೃಷ್ಠಿಯಿಂದ ಈ ಕ್ರಮ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
