ನವದೆಹಲಿ :𝗣𝗠𝗞𝗦𝗬 ಹಾಗೂ 𝗥𝗥𝗥 ಯೋಜನೆಗಳ ಅಡಿಯಲ್ಲಿ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸಲ್ಲಿಸಿರುವ ₹𝟯𝟬𝟱𝟮 ಕೋಟಿ ಮೊತ್ತದ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ದೊರಕಿಸಿಕೊಡುವಂತೆ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ *ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.
ಇಂದು ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಕಿಂಜರಾಪು ರಾಮ್ ಮೋಹನ್ ನಾಯ್ಡು ಹಾಗೂ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ಅವರು ಮಹತ್ವದ ಮಾತುಕತೆ ನಡೆಸಿದರು.
ಕೇಂದ್ರ ಸರ್ಕಾರದ 𝗣𝗠𝗞𝗦𝗬 ಮತ್ತು 𝗥𝗥𝗥 ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರದಿಂದ ಸುಮಾರು ₹𝟯𝟬𝟱𝟮 ಕೋಟಿ ಮೊತ್ತದ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ. 𝟲𝟬 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ. 𝟰𝟬 ರಷ್ಟು ಅನುದಾನ ಒದಗಿಸಬೇಕಿದೆ.
ಈಗಾಗಲೇ ನಮ್ಮ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಸಕ್ತ ಆಯವ್ಯಯದಲ್ಲಿ ರಾಜ್ಯದ ಪಾಲಿನ ಶೇ. 𝟰𝟬 ರಷ್ಟು ಅನುದಾನವನ್ನು ಮೀಸಲಿಟ್ಟಿದ್ದಾರೆ. ಆದರೆ, ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಲ್ಲಿಸಲಾಗಿರುವ ಪ್ರಸ್ತಾವನೆಗಳು ಕೇಂದ್ರ ಜಲಶಕ್ತಿ ಮಂತ್ರಾಲಯದ ವಿವಿಧ ಹಂತಗಳಲ್ಲಿ ಬಾಕಿಯಿವೆ. ಇವುಗಳಿಗೆ ಶೀಘ್ರವೇ ಅಗತ್ಯ ಅನುಮೋದನೆ ದೊರಕಿಸಿಕೊಡುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವರು ವಿವರಿಸಿದರು.
ರಾಯಚೂರು, ಬೆಂಗಳೂರು ಮತ್ತು ಕಲಬುರ್ಗಿ ವಿಮಾನ ನಿಲ್ದಾಣಗಳ ಕುರಿತು ಚರ್ಚೆ
ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಚಿವ ಎನ್.ಎಸ್ ಭೋಸರಾಜು ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿಯಾಗಿ, ರಾಜ್ಯದ ವಿಮಾನಯಾನ ವಲಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.
ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಭಾಗದ ಆರ್ಥಿಕ ಪ್ರಗತಿಗೆ ಮುನ್ನುಡಿ ಬರೆಯಲಿರುವ ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಗಳ ಬಗ್ಗೆ, ಕಲಬುರ್ಗಿಗೆ ಉಡಾನ್ ಯೋಜನೆ ಅಡಿಯಲ್ಲಿ ವಿಮಾನಯಾನ ಮರುಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಕಲಬುರ್ಗಿಗೆ ವಿಮಾನಯಾನ ಮರು ಪ್ರಾರಂಭಿಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸಂಬಂಧಪಟ್ಟ ವಿಮಾನ ಸಂಸ್ಥೆಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ. ಬಿ. ಜಯಚಂದ್ರ, ಸಂಸದ ಕುಮಾರ ನಾಯಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಕೆ. ಪವಿತ್ರ ಅವರು ಉಪಸ್ಥಿತರಿದ್ದರು.
