ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರಪಾಲಿಕೆ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ 2025-26 ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸಬೇಕಾಗಿದ್ದು, ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಈಗಾಗಲೇ ರೂಪಿಸಲಾಗಿರುವ ಕಾರ್ಯಯೋಜನೆಯ 2ನೇ ಭಾಗವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ 2025-26 ರ *ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ 38 ಉದ್ಯಾನವನ ಹಾಗೂ 11 ಆಟದ ಮೈದಾನಗಳ ಸ್ವಚ್ಛತೆ ಮಾಡಲಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.
ವಿಧಾನಸಭಾ ಕ್ಷೇತ್ರವಾರು ಶುಚಿಗೊಳಿಸಲಾದ ಪಾರ್ಕ್ ಗಳ ಸಂಖ್ಯೆ ವಿವರ:
ಶಾಂತಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ 3, ಸಿ. ವಿ. ರಾಮನ್ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ- 14, ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-5, ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-5,
ಚಿಕ್ಕಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-7, ಶಿವಾಜಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-5 ಸೇರಿದಂತೆ ಒಟ್ಟು 38 ಪಾರ್ಕ್ ಗಳ ಸ್ವಚ್ಛತೆ ಮಾಡಲಾಗಿದೆ.
ಆಟದ ಮೈದಾನಗಳ ಸಂಖ್ಯೆ ವಿವರ:
ಶಾಂತಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-7, ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-1, ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ-1,
ಶಿವಾಜಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿ-2 ಸೇರಿದಂತೆ ಒಟ್ಟು 11 ಆಟದ ಮೈದಾನಗಳ ಸ್ವಚ್ಛತೆ ಮಾಡಲಾಗಿದೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಗರೀಕರು, ವಯೋವೃದ್ಧರು, ಮಕ್ಕಳು, ಮಹಿಳೆಯರು ವಾಯುವಿಹಾರಕ್ಕೆ, ನಡಿಗೆಗೆ ಉದ್ಯಾನವನಗಳಿಗೆ ಹೆಚ್ಚಾಗಿ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಹೋಗುತ್ತಾರೆ. ಉದ್ಯಾನವನದಲ್ಲಿ ಸ್ವಚ್ಛತೆ ಹಾಗೂ ಉತ್ತಮ ವಾತಾವರಣ ನಿರ್ಮಿಸಿ, ವಿಶ್ರಾಂತಿಗಾಗಿ ಕುಳಿತುಕೊಳ್ಳಲು ಆಸನಗಳ ಸ್ವಚ್ಛತೆ ಕಾಪಾಡುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನದ 2ನೇ ಭಾಗವಾಗಿ ಪಾರ್ಕ್ ಗಳನ್ನು ಆಯ್ಕೆ ಮಾಡಿಕೊಂಡು ಒಟ್ಟು 38 ಪಾರ್ಕ್ ಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.
ಅದೇ ರೀತಿಯಲ್ಲಿ ಮಕ್ಕಳು, ಕ್ರೀಡಾರ್ಥಿಗಳ ಆಟದ ಮೈದಾನಗಳಿಗೆ ಆಟೋಟಕ್ಕಾಗಿ ಅನುಕೂಲಕರ ವಾತಾವರಣ ಹಾಗೂ ನೈರ್ಮಲ್ಯ ಕಾಪಾಡುವ ಸಲುವಾಗಿ ಮೈದಾನಗಳನ್ನು ಸ್ವಚ್ಛಗೊಳಿಸಲು ಯೋಜನೆ ರೂಪಿಸಿ ಶುಚಿಗೊಳಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಮೇಲುಸ್ತುವಾರಿಯಲ್ಲಿ ನಡೆದ ಈ ಸ್ವಚ್ಛತಾ ಅಭಿಯಾನದಲ್ಲಿ ಡಿಜಿಎಂ ಭೀಮೇಶ್ ನಾಯಕ್, ಆಯಾಯ ವಿಭಾಗಗಳ ಎಜಿಎಂ ಗಳು, ಪೌರಕಾರ್ಮಿಕರು, ಆಟೋ ಟಿಪ್ಪರ್ ಸಿಬ್ಬಂದಿಗಳು ಭಾಗಿಯಾಗಿದ್ದರು.
