ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲವಾಗುವ ಮಹತ್ವದ ವಿಷಯವಾಗಿ, ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ ನಡೆಸಿದರು.
ಈ ವೇಳೆ 2025-26ನೇ ಸಾಲಿನ ಬೆಲೆ ಬೆಂಬಲ ಯೋಜನೆ (MSP) ಅಡಿಯಲ್ಲಿ ತೊಗರಿ (Tur/Arhar) ಖರೀದಿ ಅವಧಿಯನ್ನು ವಿಸ್ತರಿಸುವ ಕುರಿತು ರಾಜ್ಯ ಸರ್ಕಾರದಿಂದ ಸಲ್ಲಿಸಲಾದ ಪ್ರಸ್ತಾವನೆ ಬಗ್ಗೆ ವಿವರವಾದ ಚರ್ಚೆ ನಡೆಯಿತು.
ರಾಜ್ಯದಲ್ಲಿ ತೊಗರಿ ಉತ್ಪಾದನೆ ಹೆಚ್ಚಿನ ಪ್ರಮಾಣದಲ್ಲಿರುವ ಹಿನ್ನೆಲೆಯಲ್ಲಿ, ಈಗಾಗಲೇ 98,610 ರೈತರು ನೋಂದಾಯಿಸಿಕೊಂಡಿದ್ದರೂ, ಅಂದಾಜು 12,834 ರೈತರು ಮಾತ್ರ ಯೋಜನೆಯ ಪ್ರಯೋಜನ ಪಡೆದಿದ್ದು, ಹೆಚ್ಚಿನ ರೈತರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಸಚಿವರು ವಿವರಿಸಿದರು.
ಮಾರುಕಟ್ಟೆಯಲ್ಲಿ ತೊಗರಿ ಬೆಲೆಗಳು ಕನಿಷ್ಠ ಬೆಂಬಲ ಬೆಲೆಯ ಸಮೀಪದಲ್ಲೇ ಇರುವುದರಿಂದ, ರೈತರ ಹಿತದೃಷ್ಟಿಯಿಂದ ಖರೀದಿ ಅವಧಿ ವಿಸ್ತರಣೆ ಅತ್ಯಾವಶ್ಯಕ ಎಂದು ಚಲುವರಾಯಸ್ವಾಮಿಯವರುತಿಳಿಸಿದರು..
ಈ ಹಿನ್ನೆಲೆದಲ್ಲಿ, 31.03.2026 ರಂದು ಮುಕ್ತಾಯಗೊಳ್ಳುವ ಖರೀದಿ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರದ ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ.
ಕೇಂದ್ರ ಸಚಿವರು ರಾಜ್ಯದ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿ, ಭರವಸೆ ನೀಡಿ ಒಂದು ತಿಂಗಳ ಖರೀದಿ ಪ್ರಕ್ರಿಯೆಯ ಕಾಲಾವಧಿಯನ್ನು ವಿಸ್ತರಿಸಿದರು. ಈ ಕ್ರಮದಿಂದ ರಾಜ್ಯದ ಸಾವಿರಾರು ರೈತರಿಗೆ ಲಾಭವಾಗುವ ಜೊತೆಗೆ ತೊಗರಿ ಬೆಲೆ ಸ್ಥಿರತೆ ಕಾಪಾಡಲು ಸಹಕಾರಿಯಾಗಲಿದೆ.
ಇನ್ನೂ ಬೆಂಬಲ ಬೆಲೆ ಯೋಜನೆಯಡಿ ಕಡಲೇ ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಈಗಾಗಲೇ 7.43 ಲಕ್ಷ ಕ್ವಿಂಟಾಲ್ ಖರೀದಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಕಡಲೆ ಧಾರಣೆಯ ಬದಲಾವಣೆಯಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಇನ್ನೂ 58 ಸಾವಿರ ಕ್ವಿಂಟಾಲ್ ಖರೀದಿಗೆ ಅನುಮತಿ ನೀಡಲು ಹಾಗೂ ಖರೀದಿ ಕಾಲವಾಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸುವಂತೆ ಕೋರಲಾದ ಮನವಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಕಡಲೇ ಖರೀದಿ ಪ್ರಕ್ರಿಯೆ ಮುಂದುವರೆಸಲಾಗುವುದು.
ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ 59 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೂರ್ಯಕಾಂತಿ ಬಿತ್ತನೆಯಾಗಿದ್ದು, ಹಿಂಗಾರು ಹಂಗಾಮಿನ MSP ದರದಂತೆ ಕ್ವಿಂಟಾಲ್ ಗೆ 7721ರೂ ನಂತೆ 11 ಸಾವಿರ ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗಾಗಿ ಪ್ರಸ್ತಾವನೆ ಸಲ್ಲಿಸುವುದಾಗಿ ಮಾನ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕೇಂದ್ರ ಸಚಿವರಿಗೆ ವಿನಂತಿಸಿದರು.
ಸಭೆಯಲ್ಲಿ ಸಹಕಾರ ಇಲಾಖೆ ಕಾರ್ಯದರ್ಶಿ ಶೆಟ್ಟಣ್ಣನವರು.ಕೃಷಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಮಾರಾಟ ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹೆಚ್.ಪ್ರಸನ್ನ, ಕೃಷಿ ಇಲಾಖೆ ನಿರ್ದೇಶಕ ಡಾ.ಜಿ.ಟಿ.ಪುತ್ರ ಉಪಸ್ಥಿತರಿದ್ದರು.
