ಸಮಗ್ರ ಸುದ್ದಿ

ಲೋಕಾಯುಕ್ತ ಸಂಸ್ಥೆಗೆ ನಲವತ್ತರ ಸಂಭ್ರಮ|ಆಡಳಿತದಲ್ಲಿ ಪಾರದರ್ಶಕತೆ ಮತ್ತು ಭ್ರಷ್ಟಾಚಾರ ಮುಕ್ತ ಸಮಾಜಕ್ಕೆ ಲೋಕಾಯುಕ್ತ ಸಂಸ್ಥೆಯ ಪಾತ್ರ ಅನನ್ಯ – ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್

Share

ಬೆಂಗಳೂರು : ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸಾಮಾನ್ಯ ಜನರ ಹಕ್ಕುಗಳ ರಕ್ಷಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ದೇಶಕ್ಕೇ ಮಾದರಿಯಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಅಭಿಪ್ರಾಯಪಟ್ಟರು.

ಇಂದು ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಲೋಕಾಯುಕ್ತ ಸಂಸ್ಥೆಗೆ ನಲವತ್ತರ ಸಂಭ್ರಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆಯು ಕಳೆದ 40 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಈ ಸಂಸ್ಥೆಯು ನಾಗರಿಕರ ಆಶಾಕಿರಣವಾಗಿದೆ ಎಂದು ಅವರು ಬಣ್ಣಿಸಿದರು.

ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಲೋಕಾಯುಕ್ತದಂತಹ ಸಂಸ್ಥೆಗಳ ಪಾತ್ರ ದೊಡ್ಡದಿದೆ. ತಳಮಟ್ಟದ ಜನರಿಗೂ ನ್ಯಾಯ ಸಿಗುವಂತಾಗಲು ಈ ಸಂಸ್ಥೆಯು ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಲೋಕಾಯುಕ್ತ ಸಂಸ್ಥೆಯು ತಾಂತ್ರಿಕವಾಗಿ ಮತ್ತು ಕಾನೂನಾತ್ಮಕವಾಗಿ ಮತ್ತಷ್ಟು ಬಲಗೊಳ್ಳಬೇಕಿದೆ. ತನಿಖಾ ಪ್ರಕ್ರಿಯೆಗಳಲ್ಲಿ ವಿಳಂಬವಾಗದಂತೆ ನೋಡಿಕೊಳ್ಳುವುದು ನ್ಯಾಯದಾನದ ದೃಷ್ಟಿಯಿಂದ ಅತಿ ಅಗತ್ಯ ಎಂದು ಅವರು ಸಲಹೆ ನೀಡಿದರು.

ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಲೋಕಾಯುಕ್ತ ಸಂಸ್ಥೆಯು ಅತ್ಯಂತ ಪ್ರಬಲವಾದ ಮತ್ತು ಸ್ವಾಯತ್ತವಾದ ಇತಿಹಾಸವನ್ನು ಹೊಂದಿದೆ. ಇದನ್ನು ಕಾಪಾಡಿಕೊಂಡು ಹೋಗುವುದು ಕೇವಲ ಸರ್ಕಾರದ ಜವಾಬ್ದಾರಿಯಷ್ಟೇ ಅಲ್ಲ, ಸಮಾಜದ ಹೊಣೆಗಾರಿಕೆಯೂ ಆಗಿದೆ ಎಂದು ಅವರು ತಿಳಿಸಿದರು.

ಭ್ರಷ್ಟಾಚಾರ ಎಂಬ ಪಿಡುಗನ್ನು ಬೇರುಸಹಿತ ಕಿತ್ತೆಸೆಯಲು ಕೇವಲ ಶಿಕ್ಷೆಯೊಂದೇ ಸಾಲದು, ನೈತಿಕ ಮೌಲ್ಯಗಳ ಜಾಗೃತಿಯೂ ಆಗಬೇಕು. ಲೋಕಾಯುಕ್ತ ಸಂಸ್ಥೆಯು ಕೇವಲ ದಂಡಿಸುವ ಸಂಸ್ಥೆಯಾಗದೆ, ಜನರಲ್ಲಿ ಜಾಗೃತಿ ಮೂಡಿಸುವ ವೇದಿಕೆಯೂ ಆಗಲಿ ಎಂದು ಆಶಯ ವ್ಯಕ್ತಪಡಿಸಿ, ಸಂಸ್ಥೆಯ ಭವಿಷ್ಯದ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.

ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವುದೇ ಲೋಕಾಯುಕ್ತದ ಪರಮ ಗುರಿ : ಲೋಕಾಯುಕ್ತ ಬಿ.ಎಸ್. ಪಾಟೀಲ್

ಕರ್ನಾಟಕದ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಮಾತನಾಡಿ, ಸಾರ್ವಜನಿಕ ಸೇವೆಯಲ್ಲಿ ಪ್ರಾಮಾಣಿಕತೆ ತರುವುದು ಮತ್ತು ಆಡಳಿತ ಯಂತ್ರದಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವುದೇ ಲೋಕಾಯುಕ್ತ ಸಂಸ್ಥೆಯ ಮೂಲ ಉದ್ದೇಶ ಎಂದು ಪ್ರತಿಪಾದಿಸಿದರು.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯು 1984ರಲ್ಲಿ ಸ್ಥಾಪನೆಯಾದಾಗಿನಿಂದಲೂ ಭ್ರಷ್ಟಾಚಾರದ ವಿರುದ್ಧ ರಾಜಿ ಇಲ್ಲದ ಹೋರಾಟ ನಡೆಸುತ್ತಾ ಬಂದಿದೆ. ಇಂದು ಈ ಸಂಸ್ಥೆಯು 40 ವರ್ಷಗಳನ್ನು ಪೂರೈಸಿರುವುದು ಅದರ ಸ್ಥಿರತೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಅವರು ಸ್ಮರಿಸಿದರು.

ಜಿಲ್ಲಾ ಪ್ರವಾಸಗಳು ಮತ್ತು ಲೋಕ್ ಅದಾಲತ್‍ಗಳ ಮೂಲಕ ನಾವು ಹಳ್ಳಿಗಾಡಿನ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ. ಸರ್ಕಾರದ ಸೌಲಭ್ಯಗಳು ಅರ್ಹರಿಗೆ ತಲುಪದಿದ್ದಾಗ ಅಥವಾ ವಿಳಂಬವಾದಾಗ ಹಸ್ತಕ್ಷೇಪ ಮಾಡಿದವರ ಮೇಲೆ ಕ್ರಮಕೈಗೊಂಡು ಜನರಲ್ಲಿ ನಂಬಿಕೆ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಭ್ರಷ್ಟಾಚಾರ ಕೇವಲ ಹಣದ ವ್ಯವಹಾರವಲ್ಲ, ಸಾರ್ವಜನಿಕ ಕೆಲಸಗಳನ್ನು ವಿಳಂಬ ಮಾಡುವುದು ಕೂಡ ಒಂದು ರೀತಿಯ ಭ್ರಷ್ಟಾಚಾರವೇ ಆಗಿದೆ. ಅಧಿಕಾರಿಗಳು ಸೇವಾ ಮನೋಭಾವದಿಂದ ಕೆಲಸ ಮಾಡಿದರೆ ಲೋಕಾಯುಕ್ತಕ್ಕೆ ದೂರುಗಳು ಬರುವ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.

ಲೋಕಾಯುಕ್ತ ಸಂಸ್ಥೆಗೆ ಪೊಲೀಸ್ ವಿಭಾಗದ ಮರುಸೇರ್ಪಡೆಯಾದ ನಂತರ ತನಿಖೆಗಳು ಹೆಚ್ಚು ವೇಗ ಪಡೆದುಕೊಂಡಿವೆ. ಈ ಶಕ್ತಿಯನ್ನು ಬಳಸಿಕೊಂಡು ಸಮಾಜದಲ್ಲಿನ ಅನ್ಯಾಯದ ವಿರುದ್ಧ ನಿರಂತರವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.

ನಾವು ಕೇವಲ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಸಂಸ್ಥೆಯಾಗದೆ, ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಮಾರ್ಗದರ್ಶಕನಾಗಿ ಕೆಲಸ ಮಾಡುತ್ತಿದ್ದೇವೆ. ಪ್ರತಿಯೊಬ್ಬ ಸರ್ಕಾರಿ ನೌಕರನು ತಾನು ಜನರ ಸೇವಕ ಎಂಬ ಭಾವನೆಯಿಂದ ಕೆಲಸ ಮಾಡಿದಾಗ ಮಾತ್ರ ಲೋಕಾಯುಕ್ತದ ಆಶಯ ಈಡೇರಲು ಸಾಧ್ಯ ಎಂದು ಬಿ.ಎಸ್. ಪಾಟೀಲ್ ಅವರು ಕರೆ ನೀಡಿದರು.

ನ್ಯಾಯಮೂರ್ತಿ ಎ.ಡಿ. ಕೋಶಲ್ ಅವರು ಮೊದಲ ಲೋಕಾಯುಕ್ತರಾಗಿದ್ದರು. ನ್ಯಾಯಮೂರ್ತಿ ಎನ್. ವೆಂಕಟಾಚಲ ಮತ್ತು ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರ ಅವಧಿಯಲ್ಲಿ ಸಂಸ್ಥೆಯು ಸಾರ್ವಜನಿಕರಲ್ಲಿ ಹೆಚ್ಚಿನ ನಂಬಿಕೆ ಗಳಿಸಿತ್ತು ಎಂದರು.

ಲೋಕಾಯುಕ್ತ 1986 ಎಲ್ಲಕ ಸ್ಥಾಪನೆಯಾಗಿ ಈವರೆಗೆ ಈ ಸಂಸ್ಥೆಯಲ್ಲಿ ದಾಖಲಾದ ಒಟ್ಟು 1,75,126 ಪ್ರಕರಣಗಳಲ್ಲಿ 1,51,233 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಪ್ರಸ್ತುತ ಲೋಕಾಯುಕ್ತದಲ್ಲಿ ಒಟ್ಟು 40,648 ಪ್ರಕರಣಗಳು ಬಾಕಿ ಇವೆ ಎಂದರು.

ಪ್ರಸ್ತುತ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಸೇರಿ ಇತ್ತೀಚಿನ ಅವಧಿಯಲ್ಲಿ 24,085 ಪ್ರಕರಣಗಳನ್ನು ವಿಲೇವಾರಿ ಮಾಡುವ ಮೂಲಕ ಹೆಚ್ಚಿನ ವೇಗ ನೀಡಲಾಗುತ್ತಿದೆ. ಲೋಕಾಯುಕ್ತದ ಕ್ರಮದ ಮೂಲಕ ರಾಜ್ಯದ ಸುಮಾರು 40,299 ಕೆರೆಗಳ ಸಮೀಕ್ಷೆ ನಡೆಸಲಾಗಿದ್ದು, 9,825 ಕೆರೆಗಳ ಒತ್ತುವರಿಯನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದೆ. ಕಲುಷಿತ ನೀರು ಸೇವನೆಯಿಂದ ಸಂಭವಿಸಿದ ಸಾವುಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.

ಯಾದಗಿರಿ ಮತ್ತು ಕಲಬುರಗಿಯಲ್ಲಿ ಸ್ಥಗಿತಗೊಂಡಿದ್ದ ನೂರಾರು ಆರ್.ಒ ಘಟಕಗಳನ್ನು ದುರಸ್ತಿ ಮಾಡಿಸಲು ಸರ್ಕಾರದಿಂದ 14.50 ಕೋಟಿ ರೂ. ಬಿಡುಗಡೆ ಮಾಡಿಸಲಾಗಿದೆ. 43 ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿ ಲೋಪಗಳನ್ನು ಪತ್ತೆಹಚ್ಚಲಾಗಿದೆ ಹಾಗೂ ಆರ್.ಟಿ.ಓ ಚೆಕ್‍ ಪೋಸ್ಟ್ ಗಳಲ್ಲಿ ಲೆಕ್ಕವಿಲ್ಲದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಕ್ಟೋರಿಯಾ ಮತ್ತು ಕಿದ್ವಾಯಿ ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ಸಿಗುವಂತೆ ಕ್ರಮ ವಹಿಸಲಾಗಿದೆ.

ಸರ್ಕಾರಿ ಕೆಲಸದಲ್ಲಿ ಅಧಿಕಾರಿಗಳ ದಕ್ಷತೆ ಹೆಚ್ಚಿಸಲು ‘ಸಿಸ್ಟಮಿಕ್ ಟ್ರಾನ್ಸ್‍ಫರ್ಮೇಷನ್’ ಕುರಿತು ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ನಿಯತಕಾಲಿಕವಾಗಿ ಜಿಲ್ಲೆಗಳಿಗೆ ಭೇಟಿ ನೀಡುವ ಮೂಲಕ ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸುತ್ತಿದ್ದಾರೆ ಎಂದರು.

ಉಪ ಲೋಕಾಯುಕ್ತ ಕೆ ಎನ್ ಪಣೀಂದ್ರ ಮಾತನಾಡಿ ನಾವು ಇಂದು ಕೇವಲ 40 ವರ್ಷದ ಆಚರಣೆ ಮಾಡುತ್ತಿಲ್ಲ. ಬದಲಾಗಿ, ನ್ಯಾಯದ ಪರವಾಗಿ ಹೋರಾಡುತ್ತಿರುವ ಸಂಸ್ಥೆ ಹುಟ್ಟಿ-ಬೆಳೆದ ಪರಿಯನ್ನು ಮೆಲುಕು ಹಾಕುತ್ತಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಲೋಕಾಯುಕ್ತದ ವತಿಯಿಂದ ಹೊರತರಲಾಗುತ್ತಿರುವ ಮ್ಯಾಗಜೀನ್ ಬಿಡುಗಡೆ ಮಾಡಲಾಯಿತು.

ಜನಪ್ರತಿನಿದಿಗಳ ಆಸ್ತಿ ಘೋಷಣೆಯ ವ್ಯವಸ್ಥೆಯನ್ನು ಆನ್-ಲೈನ್ ಮಾಡಲಾಗಿದ್ದು, ಈ ನೂತನ ವ್ಯವಸ್ಥೆಗೆ ಸಹ ಚಾಲನೆ ನೀಡಲಾಯಿತು. ಲೋಕಾಯುಕ್ತ ಸಂಸ್ಥೆ ಹುಟ್ಟಿದಾಗಿನಿಂದ ಈವರೆಗೆ ಲೋಕಯುಕ್ತರಾಗಿ ಹಾಗೂ ಉಪ ಲೋಕಯುಕ್ತರಾಗಿ ಸೇವೆ ಸಲ್ಲಿಸಿದ ಹಲವರಿಗೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಅರವಿಂದ ಕುಮಾರ್, ಉಪ ಲೋಕಾಯುಕ್ತ ಬಿ. ವೀರಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.


Share

You cannot copy content of this page