ಸಮಗ್ರ ಸುದ್ದಿ

ಇಬ್ಲೂರು ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಿ : ಮಹೇಶ್ವರ್ ರಾವ್

Share

ಬೆಂಗಳೂರು:ಹೊರ ವರ್ತುಲ ರಸ್ತೆಯ ಇಬ್ಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಬಿಎ ವ್ಯಾಪ್ತಿಯಲ್ಲಿ ಸುರಕ್ಷಾ-75 ಜಂಕ್ಷನ್‌ಗಳ ಅಭಿವೃದ್ಧಿ ಹಾಗೂ ವೈಟ್ ಟಾಪಿಂಗ್ ಕಾರ್ಯಗಳಿಗೆ ಸಂಬಂಧಿಸಿದಂತೆ ಇಂದು ಜಿಬಿಎ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಗರದ ಹೊರ ವರ್ತುಲ ರಸ್ತೆಯ ಇಬ್ಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣ ಮಾಡಿದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಡಿಪಿಆರ್ ಸಿದ್ಧಪಡಿಸಿ, ತ್ವರಿತಗತಿಯಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಸಮಗ್ರ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುರಕ್ಷಾ-75 ಯೋಜನೆಯಡಿ ಇಬ್ಲೂರು ಜಂಕ್ಷನ್ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಸಂಚಾರಿ ಪೊಲೀಸ್ ವಿಭಾಗದೊಂದಿಗೆ ಸಮನ್ವಯ ಮಾಡಿಕೊಂಡು ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಜೊತೆಗೆ, ಜಂಕ್ಷನ್ ಬಳಿಯಿರುವ ಖಾಲಿ ಜಾಗವನ್ನು ಪಾಲಿಕೆ ವಶಕ್ಕೆ ಪಡೆದು ಸಂಚಾರ ದಟ್ಟಣೆ ನಿವಾರಣೆಗೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಸಮನ್ವಯ ಮಾಡಿಕೊಂಡು ಕೆಲಸ ಮಾಡಿ:

ಸುರಕ್ಷಾ-75 ಯೋಜನೆಯಡಿ 32 ಜಂಕ್ಷನ್‌ಗಳಿಗೆ ಸಂಬಂಧಿಸಿದಂತೆ ಸಂಚಾರಿ ಪೊಲೀಸ್ ವಿಭಾಗದೊಂದಿಗೆ ಸಮನ್ವಯ ಸಭೆ ನಡೆಸಿ ಜಿಎಫ್‌ಸಿಗಳನ್ನು ಅಂತಿಮಗೊಳಿಸಿ ಆಯಾ ನಗರ ಪಾಲಿಕೆಗಳಿಗೆ ನೀಡಲಾಗಿದೆ. ಈ ಪೈಕಿ 10 ಜಂಕ್ಷನ್‌ಗಳಲ್ಲಿ ಕೆಲಸ ಪ್ರಾರಂಭಿಸಲಾಗಿದ್ದು, ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಳಿದ ಜಂಕ್ಷನ್ ಗಳಗನ್ನು ಕೂಡಾ ಸಂಚಾರಿ ಪೊಲೀಸ್ ಸಮನ್ವಯದೊಂದಿಗೆ, ತ್ವರಿತಗತಿಯಲ್ಲಿ ಕೈಗೆತ್ತಿಕೊಂಡು, ಪೂರ್ಣಗೊಳಿಸಲು ಸೂಚಿಸಿದರು.

ಮೆಟ್ರೋ ಮಾರ್ಗ ಇರುವ ಕಡೆಗಳಲ್ಲಿ ಪಾಲಿಕೆ, ಮೆಟ್ರೋ ಹಾಗೂ ಸಂಚಾರಿ ಪೊಲೀಸ್ ವಿಭಾಗದ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ವಿನ್ಯಾಸಗಳನ್ನು ಅಂತಿಮಗೊಳಿಸಿಕೊಂಡು ತ್ವರಿತಗತಿಯಲ್ಲಿ ಕೆಲಸ ಪ್ರಾರಂಭಿಸಲು ಸೂಚನೆ ನೀಡಿದರು.

ಸಮಸ್ಯೆ ಬಗೆಹರಿಸಿ ಕಾಮಗಾರಿಗೆ ವೇಗ ನೀಡಿ:

ನಗರದಲ್ಲಿ ಹಲವಾರು ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಜಲಮಂಡಳಿ ಪೈಪ್‌ಲೈನ್/ಒಳಚರಂಡಿ ಕಾಮಗಾರಿ ಹಾಗೂ ಸಂಚಾರಿ ಪೊಲೀಸ್ ವಿಭಾಗದಿಂದ ಅನುಮತಿ ಪಡೆಯಬೇಕಿರುವ ಕಾಮಗಾರಿಗಳಿಗೆ ಕೂಡಲೇ ಅನುಮತಿ ಪಡೆದು ಕಾಮಗಾರಿಗಳಿಗೆ ವೇಗ ನೀಡಿ, ಕಾಲಮಿತಿಯೊಳಗಾಗಿ ಕೆಲಸ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್, ಕೆ.ಎನ್. ರಮೇಶ್, ಡಾ. ರಾಜೇಂದ್ರ ಕೆ.ವಿ., ಮುಖ್ಯ ಅಭಿಯಂತರರು, ಬಿ-ಸ್ಮೈಲ್, ಜಲಮಂಡಳಿ, ಬೆಸ್ಕಾಂ, ಮೆಟ್ರೋ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page