ಬೆಂಗಳೂರು:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ತಾಪಮಾನದ ಪ್ರತಿಕೂಲ ಪರಿಣಾಮಗಳನ್ನು ತಡೆಗಟ್ಟಲು ಮತ್ತು ತಗ್ಗಿಸಲು ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಶುದ್ಧವಾದ ಕುಡಿಯುವ ನೀರು ಜನರಿಗೆ ಪೂರೈಕೆಯಾಗುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು, ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿಗಳಿಗೆ ತಮ್ಮ ಕೆಲಸಗಳಿಗಾಗಿ ಭೇಟಿ ನೀಡುವ ಜನರಿಗೆ ಹಾಗೂ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ (ಗ್ರಂಥಾಲಯ) ಭೇಟಿ ನೀಡುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಹಾಗೂ ಆಸನ ವ್ಯವಸ್ಥೆ ಮಾಡಬೇಕು. ಸರ್ಕಾರಿ ಶಾಲೆಗಳು, ಅಂಗನವಾಡಿ ಮತ್ತು ಕೂಸಿನ ಮನೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಶುದ್ಧವಾದ ಕುಡಿಯುವ ನೀರು ಲಭ್ಯವಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.
ಅಂಗನವಾಡಿ ಮತ್ತು ಕೂಸಿನ ಮನೆಗಳಲ್ಲಿ ಮಕ್ಕಳಿಗೆ ಬಿಸಿಲಿನ ತಾಪಮಾನದ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಆವರಣವು ತಂಪಾಗಿರುವಂತೆ ನೋಡಿಕೊಳ್ಳಬೇಕು, ಸಭೆಗಳು, ಶಿಬಿರ, ಸಮುದಾಯ ಅರಿವು ಕಾರ್ಯಕ್ರಮಗಳು, ಸಮೀಕ್ಷೆ ಇತ್ಯಾದಿ ಜನರು ಸೇರುವಂತಹ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಬಿಸಿಲಿನ ತಾಪ ಕಡಿಮೆ ಇರುವಂತಹ ಬೆಳಗಿನ ಅಥವಾ ಸಂಜೆಯ ಅವಧಿಯಲ್ಲಿ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ತಾಪಮಾನದ ಪ್ರತಿಕೂಲ ಪರಿಣಾಮಗಳನ್ನು ತಡೆಗಟ್ಟಲು ಮತ್ತು ತಗ್ಗಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಜನರಲ್ಲಿ ವ್ಯಾಪಕವಾದ ಅರಿವು ಮೂಡಿಸಬೇಕು, ತಿಳುವಳಿಕೆ ಭಿತ್ತಿಪತ್ರಗಳನ್ನು ಎಲ್ಲಾ ಗ್ರಾಮ ಪಂಚಾಯತಿಗಳು ದೊಡ್ಡ ಅಳತೆಯಲ್ಲಿ ಮುದ್ರಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವ ಮೂಲಕ ಸಾರ್ವಜನಿಕರಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಬೇಕು ಎಂಬ ನಿರ್ದೇಶನವನ್ನು ನೀಡಿದ್ದಾರೆ.
