ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ (ಕೆಎಸ್ಎಪಿಸಿಸಿ) ರೂಪಿಸಲಾಗಿದ್ದು, ಇದರ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ವಿತರೀತ ಬಿಸಿ ಮತ್ತು ಬೆಂಗಳೂರಿನ ಮೇಲೆ ಅದರ ಪರಿಣಾಮ ಕುರಿತ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕ್ರಿಯಾ ಯೋಜನೆಯನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾರಿಗೆ ತರಲು ಪರಿಸರ ಇಲಾಖೆ ವ್ಯಾಪ್ತಿಗೆ ಒಳಪಡುವ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ -ಎಂಪ್ರಿ ಕ್ರಮ ಕೈಗೊಂಡಿದೆ ಎಂದರು.
ಜಿಲ್ಲಾ ಪಂಚಾಯತ್ ಕಚೇರಿಗಳ ಸಹಯೋಗದೊಂದಿಗೆ ಕೆಎಸ್ಎಪಿಸಿಸಿ ಅನುಷ್ಠಾನ ಮತ್ತು ಅದರ ಪ್ರಗತಿಯ ಕುರಿತು ಜಿಲ್ಲಾ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕರ್ನಾಟಕದ ಎಲ್ಲಾ 31 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದೂ ತಿಳಿಸಿದರು.
ಹವಾಮಾನ-ಚೇತರಿಕೆಗೆ ಸಂಬಂಧಿಸಿದಂತೆ ಉತ್ತಮ ರೂಢಿಗಳ ಮಾಹಿತಿಯನ್ನು ಹಂಚಿಕೊಳ್ಳಲು ಏಪ್ರಿಲ್ 2025 ರಲ್ಲಿ ಸಮರ್ಪಿತ ರೇಡಿಯೋ ಕಾರ್ಯಕ್ರಮ “ಹವಮಾನ ಮಿತ್ರ” ಪ್ರಾರಂಭಿಸಲಾಗಿದ್ದು, ಈವರೆಗೆ 24 ಕಾರ್ಯಕ್ರಮಗಳನ್ನು ಆಕಾಶವಾಣಿಯಲ್ಲಿ ಪ್ರಸಾರ ಮಾಡಲಾಗಿದೆ. ಈ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನಗಳು ನಡೆದಿವೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಬೆಂಗಳೂರಿನ ಶ್ವಾಸತಾಣಗಳ ರಕ್ಷಣೆಗೆ ಕ್ರಮ: ಈಶ್ವರ ಖಂಡ್ರೆ
ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ಇಂದು ಋತುಮಾನಗಳೇ ಬದಲಾಗುತ್ತಿವೆ. ಇದನ್ನು ಮನಗಂಡು ನಾನು ಅರಣ್ಯ ಸಚಿವನಾದ ಬಳಿಕ ಹಸಿರುಹೊದಿಕೆಯನ್ನು ಹೆಚ್ಚಿಸಲು ಸಕಲ ಪ್ರಯತ್ನ ಮಾಡುತ್ತಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ರಾಜ್ಯದ ಎಲ್ಲೆಡೆ ಅದರಲ್ಲೂ ಬೆಂಗಳೂರು ನಗರದಲ್ಲಿ ಹಸಿರುಹೊದಿಕೆ ಹೆಚ್ಚಿಸಲು ಶ್ರಮಿಸುತ್ತಿದ್ದೇನೆ. ಕಳೆದ 3 ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 11 ಕೋಟಿ ಸಸಿಗಳನ್ನು ನೆಡಲಾಗಿದೆ. ಈ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಮಾಹಿತಿಯನ್ನು ಅರಣ್ಯ ಇಲಾಖೆಯ ವೆಬ್ ಸೈಟ್ ನಲ್ಲಿ ಹಾಕುವ ಮೂಲಕ ಪಬ್ಲಿಕ್ ಡೊಮೈನ್ ನಲ್ಲಿ ಮಾಹಿತಿ ಹಾಕಲಾಗಿದೆ ಎಂದರು.
ಬೆಂಗಳೂರು ನಗರದ ಕೊತ್ತನೂರು, ಕಾಡುಗೋಡಿ, ಬಿ.ಎಂ. ಕಾವಲ್, ತುರಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಆಗಿದ್ದ ಸುಮಾರು 10 ಸಾವಿರ ಕೋಟಿ ರೂ. ಬೆಲೆ ಬಾಳುವ 250 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದೆ. ಒತ್ತುವರಿ ತೆರವು ಮಾಡಿದ ಜಾಗದಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ನೆಡುತೋಪು ನಿರ್ಮಾಣ ಮಾಡಲಾಗಿದ. ಈ ಮೂಲಕ ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣ (ಲಂಗ್ಸ್ ಸ್ಪೇಸ್) ಉಳಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಅದೇ ರೀತಿ ಈ ಹಿಂದೆ ಕೈಗಾರಿಕೆಯ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ.ಗೆ ಪೀಣ್ಯ ಪ್ಲಾಂಟೇಷನ್ ನಲ್ಲಿ ಸುಮಾರು 400 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ನೀಡಲಾಗಿತ್ತು. ಎಚ್.ಎಂ.ಟಿ. ಇಲ್ಲಿ 160 ಎಕರೆ ಅರಣ್ಯ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಇನ್ನೂ ಅಲ್ಲಿ 280 ಎಕರೆ ಅರಣ್ಯ ಉಳಿದಿದ್ದು, ಇದನ್ನು ಮರಳಿ ಇಲಾಖೆಗೆ ಪಡೆದು ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣವನ್ನು ಉಳಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾನೂನು ಹೋರಾಟ ನಡೆಯುತ್ತಿದೆ. ಪ್ರಸ್ತುತ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ.
ಇದರ ಜೊತೆಗೆ ಜಾರಕಬಂಡೆ ಪ್ರದೇಶದಲ್ಲಿ ಭಾರತೀಯ ವಾಯುಪಡೆಗೆ 444 ಎಕರೆ ಭೂಮಿಯನ್ನು ನೀಡಲಾಗಿತ್ತು. 1980ರ ಕಾಯಿದೆ ರೀತ್ಯ ಅರಣ್ಯ ಭೂಮಿಯನ್ನು ಯಾರಿಗೂ ನೀಡಲು ಅವಕಾಶವಿಲ್ಲ. ಹೀಗಾಗಿ 2017ರಲ್ಲಿ ಅಂದಿನ ಜಿಲ್ಲಾಧಿಕಾರಿ ಈ ಭೂ ಮಂಜೂರಾತಿ ರದ್ದು ಮಾಡಿದ್ದಾರೆ. ಈಗ ಆ ಅರಣ್ಯ ಭೂಮಿಯನ್ನು ಮರಳಿ ಇಲಾಖೆಗೆ ಪಡೆದು ಹಸಿರು ತಾಣ ಉಳಿಸಲು ಕ್ರಮ ಕೈಗೊಳ್ಳಲಾಗಿದೆ.
ಏರ್ ಶೋ ನಡೆಯುವ ಭೂಮಿಯೂ ಅರಣ್ಯ:ಈಶ್ವರ ಖಂಡ್ರೆ
ಬೆಂಗಳೂರಿನಲ್ಲಿ ಪ್ರತಿ 2 ವರ್ಷಗಳಿಗೊಮ್ಮೆ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನ ಏರ್ ಶೋ ನಡೆಯುವ ಗಂಟಿಗಾನಹಳ್ಳಿಯಲ್ಲಿರುವ ಯಲಹಂಕ ವಾಯುನೆಲೆ ಕೂಡ ಅರಣ್ಯ ಭೂಮಿಯಾಗಿದೆ. ಗಂಟಿಗಾನಹಳ್ಳಿ ಗ್ರಾಮದ 159 ಎಕರೆ ಪ್ರದೇಶ ಸರ್ಕಾರಿ ಕಾಯ್ದಿಟ್ಟ ಅರಣ್ಯ ಪ್ರದೇಶವಾಗಿದ್ದು, ವಾಯುಪಡೆ ತೀರುವಳಿ ಪ್ರಸ್ತಾವನೆ ಸಲ್ಲಿಸಿ, ಪರ್ಯಾಯ ಭೂಮಿ ನೀಡಿದರೆ ಈ ಪ್ರದೇಶವನ್ನು ಪಡೆಯದಿದ್ದರೆ, ಅದನ್ನು ಅರಣ್ಯ ಇಲಾಖೆಗೆ ಹಿಂಪಡೆಯಲು ಕ್ರಮ ವಹಿಸಲಾಗುವುದು ಎಂದರು.
ಭಾರತೀಯ ವಾಯುಪಡೆ ಈ ಪ್ರದೇಶವನ್ನು ಪ್ರಸ್ತುತ ರನ್ ವೇ ಅಗಿ ಉಪಯೋಗಿಸುತ್ತಿದೆ. ಆದರೆ ಆರ್ಟಿಸಿ ಮತ್ತು ಮ್ಯುಟೇಶನ್ ಅರಣ್ಯ ಇಲಾಖೆಯ ಹೆಸರಿನಲ್ಲಿದೆ. ಈ ಜಮೀನು ಕೂಡ ಭೂ ಪರಿವರ್ತನೆ ಆಗಿಲ್ಲ. ಹೀಗಾಗಿ ಅರಣ್ಯ ಭೂಮಿಯನ್ನೂ ತೆರವು ಮಾಡಿಸಲಾಗುವುದು ಎಂದರು.
ಮೇನಲ್ಲಿ ವಿಶ್ವಗುರು ಬಸವಣ್ಣ ಜೈವಿಕ ಉದ್ಯಾನಕ್ಕೆ ಶಂಕುಸ್ಥಾಪನೆ:ಈಶ್ವರ ಖಂಡ್ರೆ
ಇದೆಲ್ಲದರ ಜೊತೆಗೆ ಬೆಂಗಳೂರು ಉತ್ತರ ತಾಲೂಕು ಮಾದಪ್ಪನಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ವಿಶ್ವಗುರು ಬೃಹತ್ ಜೈವಿಕ ಉದ್ಯಾನ ನಿರ್ಮಾಣ ಮಾಡಲು ಸರ್ಕಾರ ಸಂಕಲ್ಪ ಮಾಡಿದ್ದು, ಸಚಿವ ಸಂಪುಟದ ಅನುಮೋದನೆಯೂ ಆಗಿದೆ. ಮುಂದಿನ ತಿಂಗಳು ಮಾನ್ಯ ಮುಖ್ಯಮಂತ್ರಿಗಳಿಂದ ಇದಕ್ಕೆ ಶಂಕುಸ್ಥಾಪನೆ ಮಾಡಿಸಲಾಗುವುದು. ಇದು ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತರದ ಅತಿ ದೊಡ್ಡ ಉದ್ಯಾನವಾಗಲಿದೆ. ಇದು ಶತಮಾನದ ಸಾಧನೆ ಎಂದರೂ ತಪ್ಪಾಗಲಾರದು ಎಂದರು.
ಹಸಿರೇ ಉಸಿರು ಎಂಬುದನ್ನು ಎಲ್ಲರೂ ಮನಗಾಣಬೇಕು. ಬೆಂಗಳೂರಿಗರಲ್ಲಿ ಹಸಿರು ಕಲ್ಪನೆ ಹೆಚ್ಚಬೇಕು. ಇಲ್ಲವಾದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದರು.
ಹಿಂದೆ ಧರ್ಮೋ ರಕ್ಷತಿ ರಕ್ಷಿತಃ ಎಂದು ಹೇಳುತ್ತಿದ್ದರು. ಇಂದು ನಾವು ವೃಕ್ಷೋ ರಕ್ಷತಿ ರಕ್ಷಿತಃ ಎಂದು ಹೇಳಬೇಕು. ಕಾರಣ ಮರಗಳಿದ್ದರೆ ನಮ್ಮ ಬದುಕು ಎಂದ ಅವರು, ಇಂದಿನ ವಿಚಾರ ಸಂಕಿರಣದಲ್ಲಿ ಹೊರಹೊಮ್ಮುವ ಸಲಹೆಗಳ ವರದಿ ನೀಡಿದಲ್ಲಿ, ಬೆಂಗಳೂರಿನ ಹಿತದೃಷ್ಟಿಯಿಂದ ಅದನ್ನು ಅನುಷ್ಠಾನ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಕಾಡಮಿ ಅಧ್ಯಕ್ಷೆ ಆಯೇಶಾ ಖಾನಂ, ಕಾರ್ಯದರ್ಶಿ ಸಹನ.ಎಂ ಮತ್ತಿತರರು ಪಾಲ್ಗೊಂಡಿದ್ದರು.
