ಬೆಂಗಳೂರು : ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಪುಣ್ಯತಿಥಿಯಂದು ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗುತ್ತಿದೆ. ಕೆಂಗಲ್ ಹನುಮಂತಯ್ಯನವರು ಒಬ್ಬ ದಕ್ಷ ಆಡಳಿತಗಾರರಾಗಿದ್ದು, ಕರ್ನಾಟಕದ ಎರಡನೇ ಮುಖ್ಯಮಂತ್ರಿಯಾಗಿದ್ದರು. ಸ್ವಾತಂತ್ರ್ಯನಂತರವಿದ್ದ ಸಮಸ್ಯೆಗಳನ್ನು ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಎದುರಿಸಿದರು.
ವಿಧಾನಸೌಧದ ಭವ್ಯ ಕಟ್ಟಡ ನಿರ್ಮಾಣಕ್ಕೆ ಅವರು ರೂವಾರಿಯಾಗಿದ್ದರೂ, ಕಟ್ಟಡದ ಉದ್ಘಾಟನೆಯ ವೇಳೆಗೆ ಅವರು ಅಧಿಕಾರದಲ್ಲಿರಲಿಲ್ಲ. ಜನಪ್ರತಿನಿಧಿಯಾಗಿ ಪ್ರಮಾಣಿಕ ಜನರ ಸೇವೆ ಸಲ್ಲಿಸುವುದು ಅತಿಮುಖ್ಯ ಎಂದು ವಿಧಾನಸೌಧದ ಕಟ್ಟಡದ ಪೂರ್ವಭಾಗದಲ್ಲಿ’ ಜನರ ಕೆಲಸ ದೇವರ ಕೆಲಸ’ ಎಂದು ಕೆತ್ತಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಕೆಂಗಲ್ ಹನುಮಂತಯ್ಯ ಅವರ ಸೇವೆಯನ್ನು ಸರ್ಕಾರ ಸ್ಮರಿಸುತ್ತಿದೆ. ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು.
*ಉಪಮುಖ್ಯಮಂತ್ರಿ ಅವರಿಂದ ಉಪಹಾರ ಕೂಟ*:
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಮುಖ್ಯಮಂತ್ರಿಗಳನ್ನು ಮಂಗಳವಾರ ಉಪಹಾರಕ್ಕೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ನನ್ನ ಮನೆಯಲ್ಲಿ ಉಪಹಾರದ ಸಂದರ್ಭದಲ್ಲಿ ಉಪಮುಖ್ಯಮಂತ್ರಿಯವರು ಆಗಮಿಸಿದ್ದಾಗ, ಮಂಗಳವಾರ ತಮ್ಮ ನಿವಾಸದಲ್ಲಿ ಬೆಳಗಿನ ಉಪಹಾರಕ್ಕೆ ಆಹ್ವಾನವನ್ನು ನೀಡಿದ್ದಾರೆಯೇ ಹೊರತು, ಈ ಬಗ್ಗೆ ಯಾವುದೇ ದೂರವಾಣಿ ಕರೆ ಬಂದಿಲ್ಲ ಆದರೆ ಉಪಹಾರಕ್ಕೆ ಆಹ್ವಾನ ಬಂದರೆ ,ಮಂಗಳವಾರದ ಉಪಹಾರ ಕೂಟಕ್ಕೆ ತೆರಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
