ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ʼಕರ್ತವ್ಯʼ ಮೊಬೈಲ್ ಅಪ್ಲಿಕೇಷನ್ ಮೂಲಕ ದೈನಂದಿನ ಹಾಜರಾತಿಯನ್ನು ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAAMS) ತಂತ್ರಾಂಶದಲ್ಲಿ ದಾಖಲಿಸುವ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆ ಅಭಿವೃದ್ಧಿ ಪಡಿಸಿರುವ ಈ ಮೊಬೈಲ್ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಂಡು. ದೈನಂದಿನ ಹಾಜರಾತಿಯನ್ನು ತಂತ್ರಾಂಶದಲ್ಲಿ ನಮೂದಿಸಲು ಅಧಿಕಾರಿಗಳು ಹಾಗೂ ನೌಕರರು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
2025-26ನೇ ಸಾಲಿನ ಆಯವ್ಯವದಲ್ಲಿ ಘೋಷಿಸಿದ್ದಂತೆ ಮೇ 1ರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದೈನಂದಿನ ಹಾಜರಾತಿಯನ್ನು ʼಕರ್ತವ್ಯʼ ಸೌಲಭ್ಯದ ಮೂಲಕ ನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
