ಸಮಗ್ರ ಸುದ್ದಿ

ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ-ಸಿಎಂ ಸಿದ್ದರಾಮಯ್ಯ

Share

ಬೆಂಗಳೂರು: ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ  ನೀಡಿ ಬೆಳಗಿನ ಉಪಹಾರ ಸೇವಿಸಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ:

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು, ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ ರೂ. 1900 ರಿಂದ 2100 ರೂ.ವರೆಗೆ ಇರುವುದರಿಂದ ಡಿಸ್ಟಲರಿ ಕಂಪನಿಗಳು, ಎಂ.ಎಸ್.ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು, ಪಶು ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.

ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ರಾಜ್ಯ ಸಂಸದರ ಸಭೆ:

ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶು ಆಹಾರ 4 ರಿಂದ 5 ಲಕ್ಷ ಟನ್  ಹಾಗೂ 7 ರಿಂದ 10 ಲಕ್ಷದ ಎಥನಾಲ್ ಗಾಗಿ ಬಳಸುತ್ತಾರೆ.  ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು. ಎಥನಾಲ್ ಹಾಗೂ ಎಂ ಎಸ್ ಪಿ, ಎಫ್ ಆರ್ ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು  ಮುಂದೂಡ ಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು.

ಹೈ ಕಮಾಂಡ್ ಭೇಟಿ:

ಹೈ ಕಮಾಂಡ್  ಭೇಟಿಗಾಗಿ ಸಮಯಾವಕಾಶ ನೀಡಿದಾಗ ಅವರನ್ನು ಭೇಟಿ ಮಾಡಲಾಗುವುದು. ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರನ್ನು ನಾಳೆ ಮಂಗಳೂರಿನಲ್ಲಿ ನಡೆಯಲಿರುವ  ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು

ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು.

ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ:

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ.ಒಗ್ಗಟ್ಟಿನಿಂದ ಇದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.  ಸಿಎಲ್. ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು.

ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು:

ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು,  ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028 ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದರು. 


Share

You cannot copy content of this page