ಬೆಂಗಳೂರು: ಗ್ರಾಮ ಪಂಚಾಯತಿಗಳನ್ನು ಆರ್ಥಿಕ ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಲು ಪಿಡಿಒಗಳು ಶ್ರಮಿಸಬೇಕು, ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿನ ಆರ್ಥಿಕ ಸುಧಾರಣೆಯ ಸಾಧ್ಯತೆಗಳನ್ನು ಅಧ್ಯಯನ ಮಾಡಿ ಪಂಚಾಯತಿಗಳನ್ನು ಆರ್ಥಿಕವಾಗಿ ಸದೃಢವಾಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ಬೇಡಿಕೆಗಳ ಕುರಿತಂತೆ ನಡೆದ ಸಭೆಯಲ್ಲಿ ಸಚಿವರು ಮಾತನಾಡುತ್ತಿದ್ದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ ವೃಂದವರು ಸಚಿವರನ್ನು ಭೇಟಿ ಮಾಡಿ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುತ್ತಿದ್ದು, ಇದರಲ್ಲಿ ಇಲಾಖಾ ಅಧಿಕಾರಿಗಳಿಗೆ ಆದ್ಯತೆ ಕಲ್ಪಿಸುವುದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯ್ಕೆ ಶ್ರೇಣಿ ಅಧಿಕಾರಿಗಳನ್ನು ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳ ಬಗ್ಗೆ ಚರ್ಚಿಸಿದರು.
ಈ ಬೇಡಿಕೆಗಳ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.
ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಸಮೀರ್ ಶುಕ್ಲ, ರಣ್ದೀಪ್, ಡಾ.ಅರುಂಧತಿ ಚಂದ್ರಶೇಖರ್ ಭಾಗವಹಿಸಿದ್ದರು
