ಬೆಂಗಳೂರು: ನಾನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವನಾಗುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ ಎಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಸುರೇಶ್ ಹೇಳಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರತಿಕ್ರಿಯೆ ನೀಡಿರುವ ಅವರು, ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಇತರ ನಾಯಕರು ನನ್ನ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಸಚಿವನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದರು.
ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಈ ಹೊಣೆಗಾರಿಕೆ ಮೂಲಕ ರಾಜ್ಯದ ಜನರ ಸೇವೆಯನ್ನು ಮಾಡುತ್ತೇನೆ. ವಿಶೇಷವಾಗಿ ನನ್ನನ್ನು ಎರಡು ಬಾರಿ ವಿಧಾನಸಭೆಗೆ ಆಯ್ಕೆ ಮಾಡಿರುವ ಹೆಬ್ಬಾಳ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಖುದ್ದು ದೂರವಾಣಿ ಕರೆ ಮಾಡಿ ಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಪ್ರಮಾಣ ವಚನ ಸ್ವೀಕರಿಸುವಂತೆ ತಿಳಿಸಿದರು. ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ಯಾವುದೇ ಖಾತೆ ನೀಡಿದರೂ ಸಂತಸದಿಂದ ಸ್ವೀಕರಿಸಿ ಆ ಮೂಲಕ ರಾಜ್ಯದ ಜನತೆಯ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಈ ಮೂಲಕ ಜನರ ಪರವಾಗಿರುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್. ನಮ್ಮ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಒಳ್ಳೆಯ ಹೆಸರನ್ನು ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದೂ ಅವರು ತಿಳಿಸಿದರು.
