ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ತಿನ ದ್ವಿ-ವಾರ್ಷಿಕ ಚುನಾವಣೆಯ ಹಿನ್ನೆಲೆಯಲ್ಲಿ ಜೂನ್ 16 ರ ಮಂಗಳವಾರ, ಸಂಜೆ 6:00 ಗಂಟೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ, ರಾಮನಗರ ತಾಲೂಕಿನ ಬಿಡದಿ ಬಳಿಯಿರುವ “ವಂಡರ್ಲಾ ರೆಸಾರ್ಟ್ ನಲ್ಲಿ ಕಾಂಗ್ರೆಸ್ ತನ್ನ ಎಲ್ಲಾ ಶಾಸಕರ ತುರ್ತು ಸಭೆಯನ್ನು ಕರೆದಿದೆ.
ಜೂನ್ 18 ರ ಗುರುವಾರದಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವ ಕುರಿತು ಚರ್ಚಿಸಲು ಈ ಸಭೆ ಆಯೋಜಿಸಲಾಗಿದೆ.
ಪ್ರಮುಖ ನಾಯಕರ ಉಪಸ್ಥಿತಿ:
ಈ ಮಹತ್ವದ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರ್ ಅವರು ವಹಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಸೇರಿದಂತೆ
ಪಕ್ಷದ ಎಲ್ಲಾ ಮಾನ್ಯ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರಲಿದ್ದಾರೆ.
ಕಡ್ಡಾಯ ಹಾಜರಾತಿಗೆ ಸೂಚನೆ:
ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಎಲ್ಲಾ ವಿಧಾನಸಭಾ ಸದಸ್ಯರು ಹಾಗೂ ಬಾಹ್ಯ ಬೆಂಬಲಿತ ವಿಧಾನಸಭಾ ಸದಸ್ಯರು ತಪ್ಪದೇ ಈ ಸಭೆಯಲ್ಲಿ ಭಾಗವಹಿಸಬೇಕೆಂದು ಪಕ್ಷದ ನಾಯಕತ್ವದಿಂದ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾದ ಅಲ್ಲಮಪ್ರಭು ಪಾಟೀಲ್ ಅವರು ಈ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಸಭೆಯ ನಂತರ ಎಲ್ಲಾ ಸದಸ್ಯರಿಗೆ ಭೋಜನ ಕೂಟವನ್ನು ಸಹ ಏರ್ಪಡಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
