ನವದೆಹಲಿ:ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವರ ಜತೆ ಸಮಾಲೋಚನೆ ಸಂದರ್ಭದಲ್ಲಿ ಈ ಮನವಿ ಸಲ್ಲಿಸಿದರು.
ಮನವಿಯ ಪ್ರಮುಖ ಅಂಶಗಳು:
ಕರ್ನಾಟಕ ರಾಜ್ಯ ಪೊಲೀಸ್ಗೆ ‘ಪ್ರೆಸಿಡೆಂಟ್ಸ್ ಕಲರ್’ (ರಾಷ್ಟ್ರಪತಿಗಳ ಅತ್ಯುನ್ನತ ಗೌರವ) ಪ್ರಶಸ್ತಿ:
ಕರ್ನಾಟಕ ರಾಜ್ಯ ಪೊಲೀಸ್ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿಯನ್ನು ನೀಡುವ ಕುರಿತಾದ ಪ್ರಸ್ತಾವನೆಯನ್ನು 08-05-2024 ರಂದು ಭಾರತ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಪ್ರಸ್ತುತ ಅದು ಪರಿಶೀಲನೆಯಲ್ಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇನ್ನು ಸಹ ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಬೇಕಾಗಿದೆ. ಈ ವಿಷಯವನ್ನು ಶೀಘ್ರವಾಗಿ ಪರಿಶೀಲಿಸಿ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ ನೀಡಲು ಅನುಮೋದನೆ ನೀಡಬೇಕು.
ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ:
ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇನ್ನೂ ಎರಡು ಹೆಚ್ಚುವರಿ ಐಆರ್ಬಿ (IRB) ಬೆಟಾಲಿಯನ್ಗಳನ್ನು ಸ್ಥಾಪಿಸಲು ಅಂದಾಜು 243.87 ಕೋಟಿ ರೂ.ಗಳ ವೆಚ್ಚದ ಹೊಸ ಪ್ರಸ್ತಾವನೆಯನ್ನು ಪತ್ರ ಸಂಖ್ಯೆ HD/133/POP/2024 ದಿನಾಂಕ 04-02-2025 ರ ಮೂಲಕ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಇದಕ್ಕೆ ಶೀಘ್ರವಾಗಿ ಮಂಜೂರಾತಿ ನೀಡಬೇಕೆಂದು ನಾನು ವಿನಂತಿಸುತ್ತೇನೆ.
ಪೊಲೀಸ್ ವ್ಯವಸ್ಥೆ ಆಧುನೀಕರಣಕ್ಕಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವು (ASUMP) – 2025-26:
ನಾಲ್ಕು ಪ್ರಮುಖ ನಗರಗಳಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ಗಳು ಹಾಗೂ ಸಂವಹನ ಉಪಕರಣಗಳ ಸ್ಥಾಪನೆಗಾಗಿ ASUMP ಯೋಜನೆಯಡಿ 280.00 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆದಷ್ಟು ಬೇಗ ಮಂಜೂರಾತಿ ನೀಡಬೇಕು.
ಕಂಪನಿಗಳ ಕಾಯ್ದೆ, 2013 ರ ಶೆಡ್ಯೂಲ್ VII ರ ಅಡಿಯಲ್ಲಿ ಪೊಲೀಸ್ ಸಂಬಂಧಿತ ಚಟುವಟಿಕೆಗಳ ಸೇರ್ಪಡೆ (CSR):
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ ಕಂಪನಿಗಳ ಕಾಯ್ದೆ, 2013 ರ ಶೆಡ್ಯೂಲ್ VII ರ ಅಡಿಯಲ್ಲಿ ಪೊಲೀಸ್ ಸಂಬಂಧಿತ ಚಟುವಟಿಕೆಗಳನ್ನು ಸೇರಿಸುವ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ಶೀಘ್ರವಾಗಿ ಅನುಮೋದನೆ ನೀಡಬೇಕು.
ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ:
BPR&D ಯ ಗ್ಯಾಪ್ ಅನಾಲಿಸಿಸ್ (GAP Analysis) ಮಾರ್ಗಸೂಚಿಗಳ ಪ್ರಕಾರ ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೆ ಏರಿಸಲು 258.53 ಕೋಟಿ ರೂ.ಗಳ ವಿವರವಾದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ನಿಮ್ಮ ಅನುಮೋದನೆ ಕೋರುತ್ತೇನೆ.
ಕಾರಾಗೃಹಗಳ (ಜೈಲುಗಳ) ಆಧುನೀಕರಣ:*
ಕಾರಾಗೃಹಗಳ ಆಧುನೀಕರಣ ಯೋಜನೆಯಡಿ 2025-26 ರ ಆರ್ಥಿಕ ವರ್ಷಕ್ಕೆ (ಸಿಸಿಟಿವಿ, ವಾಕಿ-ಟಾಕಿ ಮತ್ತು ಇತರ ಭದ್ರತಾ ಉಪಕರಣಗಳ ಖರೀದಿಗೆ) 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಮೊತ್ತವನ್ನು ಶೀಘ್ರ ಮಂಜೂರು ಮಾಡಬೇಕು.
ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1989 ರ ನಿಯಮ 52-A ಅನುಷ್ಠಾನದ ಗಡುವು ವಿಸ್ತರಣೆ:
ಕರ್ನಾಟಕದಲ್ಲಿ ನಿಯಮ 52-A ಅನ್ನು ಅನುಷ್ಠಾನಗೊಳಿಸಲು ಗಡುವನ್ನು ವಿಸ್ತರಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ದಯವಿಟ್ಟು ತಾವು ಈ ವಿಷಯವನ್ನು ಸಂಬಂಧಪಟ್ಟ ಸಚಿವಾಲಯದೊಂದಿಗೆ ಚರ್ಚಿಸಿ, ಆದಷ್ಟು ಬೇಗ ಅನುಮೋದನೆ ಕೊಡಿಸಬೇಕು.
ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ (CCTV) ಕ್ಯಾಮೆರಾಗಳ ಮೇಲ್ದರ್ಜೀಕರಣ:
ಗೌರವಾನ್ವಿತ ಭಾರತದ ಸುಪ್ರೀಂ ಕೋರ್ಟ್ ಮುಂದೆ ನಡೆದ ಚರ್ಚೆಗಳ ಅನುಸಾರ, ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ದರ್ಜೆಗೆ ಏರಿಸಲು ASUMP ಅಡಿಯಲ್ಲಿ 278.26 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಪರಿಗಣಿಸಬೇಕು.
ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್ (K4C) ಸ್ಥಾಪನೆ:
ಸೈಬರ್ ಅಪರಾಧಗಳು ಸಮಾಜ, ಆರ್ಥಿಕತೆ ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಹಾಗೂ ನಿರಂತರ ಸವಾಲನ್ನು ಒಡ್ಡುತ್ತಿವೆ. ಇವುಗಳನ್ನು ನಿಗ್ರಹಿಸಲು ಅತ್ಯಾಧುನಿಕ ಸೈಬರ್ ಭದ್ರತಾ ವ್ಯವಸ್ಥೆ ಅಗತ್ಯವಿದ್ದು, ಕರ್ನಾಟಕ ಸರ್ಕಾರವು ಅಂದಾಜು 360 ಕೋಟಿ ರೂ.ಗಳ ವೆಚ್ಚದಲ್ಲಿ ‘ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್’ (K4C) ಅನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರ ವಿವರವಾದ ಯೋಜನಾ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು. ಈ ಉಪಕ್ರಮವನ್ನು ದಯವಿಟ್ಟು ಪರಿಗಣಿಸಿ, ಯೋಜನೆಗೆ ಅನುಮೋದನೆ ನೀಡಬೇಕು ಎಂದು ಮುಖ್ಯಮಂತ್ರಿಯವರು ಮನವಿ ಸಲ್ಲಿಸಿದ್ದಾರೆ.
