ಬೆಂಗಳೂರು: ಇಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನವಾಗಿದ್ದರ ಬಗ್ಗೆ ಪಕ್ಷ ಪರಿಶೀಲನೆ ಮಾಡಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಭಿನಂದಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಬಿಜೆಪಿಯ ಅಭ್ಯರ್ಥಿಗಳಾದ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ್ ಅವರು, ಜಯಶೀಲರಾಗಿದ್ದು ಅವರಿಗೆ ಅಭಿನಂದನೆಗಳು. ಲಿಂಗರಾಜ ಪಾಟೀಲ್ ಅವರ ಮೂರು ಮತಗಳು ಅಡ್ಡ ಮತದಾನ ಆಗಿದೆ. ರಘು ಅವರ ಮೂವತ್ತು ಮತಗಳಲ್ಲಿ ಒಂದು ಮತ ಅಸಿಂಧು ಆಗಿದೆ. ಇದನ್ನು ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಎಂಬುದನ್ನು ಮುಂದೆ ಪರಿಶೀಲನೆ ನಡೆಸಲಾಗುವುದು ಹಾಗೂ ಸೂಕ್ತ ತೀರ್ಮಾನವನ್ನು ಪಕ್ಷ ಕೈಗೊಳ್ಳಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಸಂಸದ ಎಸ್. ಮುನಿಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಉಪಸ್ಥಿತರಿದ್ದರು.
