ಸಮಗ್ರ ಸುದ್ದಿ

ಎಸ್.ಐ.ಆರ್: ಕಾಂಗ್ರೆಸ್ ನಿಂದ ಬೂತ್ ಮಟ್ಟದ ಏಜೆಂಟರ ನೇಮಕ- ಈಶ್ವರ ಖಂಡ್ರೆ

Share

ಬೀದರ್ : ಭಾರತೀಯ ಚುನಾವಣಾ ಆಯೋಗವು ಜೂನ್ 30, 2026 ರಿಂದ ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಿಸುತ್ತಿದ್ದು, ಜನರಿಗೆ ಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಬೂತು ಮಟ್ಟದ ಏಜೆಂಟರನ್ನು ನೇಮಕ ಮಾಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಹಲವು ಬಾರಿ ಮತದಾರರ ಪಟ್ಟಿಯ ಪರಿಷ್ಕರಣೆ ಆಗಿದೆ. ಆದರೆ ಈಗ ನಡೆಯುತ್ತಿರುವ ಪರಿಷ್ಕರಣೆಯ ವೇಳೆ ಹಾಲಿ ಮತದಾರರು ಕೂಡ ಎನ್ಯುಮರೇಷನ್ ನಮೂನೆ ತುಂಬಿ ಸಹಿ ಮಾಡುವುದು ಕಡ್ಡಾಯ ಮಾಡಲಾಗಿದೆ. ಇದು ನಿಜಕ್ಕೂ ದುರ್ದೈವ. ಯಾವುದೇ ಮತದಾರರ ಹಕ್ಕು ಕಸಿದಂತೆ ಸೂಕ್ತ ಮಾಹಿತಿ ನೀಡಲು ಪಕ್ಷ ಈ ಕ್ರಮ ಕೈಗೊಂಡಿದೆ ಎಂದರು.

ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಹೋಗಿ ಮಾಹಿತಿ ಪಡೆಯುತ್ತಾರೆ. ಈ ಸಂದರ್ಭದಲ್ಲಿ ಮತದಾರರಿಗೆ ನೆರವಾಗಲು ನಮ್ಮ ಪಕ್ಷದ ಬಿಎಲ್.ಎ.ಗಳಿಗೂ ಸೂಕ್ತ ತರಬೇತಿ ನೀಡಲಾಗುತ್ತಿದೆ. ಯಾವುದೇ ಅರ್ಹ ಮತದಾರ ತನ್ನ ಸಂವಿಧಾನದತ್ತ ಹಕ್ಕಿನಿಂದ ವಂಚಿತರಾಗಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಕೇಂದ್ರ ಚುನಾವಣಾ ಆಯೋಗ ಈಗ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಈ ಹಿಂದೆ ಹಲವು ಚುನಾವಣೆಗಳಲ್ಲಿ ಮತದಾನ ಮಾಡಿರುವವರೂ, ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಭಾಗಿಯಾಗದಿದ್ದರೆ ತಮ್ಮ ಹಕ್ಕು ಕಳೆದುಕೊಳ್ಳುತ್ತಾರೆ. ಹೀಗಾಗಿ ಪಕ್ಷ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ ಎಂದರು.


Share

You cannot copy content of this page