ಸಮಗ್ರ ಸುದ್ದಿ

ಎಲ್ ನಿನೋ ಪರಿಣಾಮ ಎದುರಿಸಲು ಇಂಧನ ಇಲಾಖೆ ಸಜ್ಜು: ಗೌರವ್‌ ಗುಪ್ತ|ಸಮರ್ಪಕ ವಿದ್ಯುತ್ ಪೂರೈಕೆಗೆ ಕಾರ್ಯತಂತ್ರ ರೂಪಿಸಲು ಸೂಚನೆ

Share

ಬೆಂಗಳೂರು: ಎಲ್ ನಿನೋ ಪ್ರಭಾವದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವಂತೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಪ್ರಸ್ತುತ ವಿದ್ಯುತ್ ಸ್ಥಿತಿಗತಿಗಳ ಕುರಿತು ಬೆವಿಕಂನ ನಿಗಮ ಕಚೇರಿಯ ಬೆಳಕು ಭವನದಲ್ಲಿ ಪರಿಶೀಲನಾ ಸಭೆ ನಡೆಸಿದ ಅವರು, “ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆಯಲ್ಲಿ ಪರಿಣಾಮ ಬೀರಬಹುದು. ಹೀಗಾಗಿ ಸಮರ್ಪಕ ವಿದ್ಯುತ್ ಪೂರೈಕೆಗೆ ಪರ್ಯಾಯ ಕ್ರಮ ಕೈಗೊಂಡು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು,” ಎಂದು ತಿಳಿಸಿದರು.

“ಈ ಬಾರಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಸಾಕಷ್ಟು ಪ್ರಮಾಣದಲ್ಲಿ ಇಲ್ಲ. ಹಾಗಾಗಿ, ರಾಜ್ಯದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಹೆಚ್ಚು ವಿದ್ಯುತ್ ಉತ್ಪಾದಿಸಲು ಕ್ರಮ ವಹಿಸಬೇಕು. ಅದೇ ರೀತಿ ರಾಜ್ಯದಲ್ಲಿ ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆ ಹೆಚ್ಚಿಸಿ ಅದನ್ನು ಬಳಸಿಕೊಳ್ಳಬೇಕು. ಜತೆಗೆ ಕೋ-ಜನರೇಷನ್ ವಿದ್ಯುತ್ ಘಟಕಗಳಿಂದಲೂ ವಿದ್ಯುತ್ ಪಡೆಯಲು ಕ್ರಮ ವಹಿಸಬೇಕು,” ಎಂದು ಸೂಚನೆ ನೀಡಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ವಿದ್ಯುತ್ ಕಂಬ, ತಂತಿಗಳು ಹಾಗೂ ಟ್ರಾನ್ಸ್ ಫಾರ್ಮರ್ ಗಳು ಹಾನಿಗೊಳಗಾಗುತ್ತವೆ. ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯವಾಗುತ್ತಿದೆ ಇದನ್ನು ತ್ವರಿತವಾಗಿ ಬಗೆಹರಿಸಿ ಪೂರೈಕೆ ಸುಗಮಗೊಳಿಸಲು ಸಿದ್ಧತೆಗಳನ್ನು ತ್ವರಿತಗೊಳಿಸುವಂತೆ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಅವರು ಸೂಚಿಸಿದರು.

ಸಭೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ. ರಾಮ ಪ್ರಸಾತ್ ಮನೋಹರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎನ್. ಶಿವಶಂಕರ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಕೆ. ವೆಂಕಟೇಶ್, ಕೆಆರ್‌ಇಡಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಪಿ. ರುದ್ರಪ್ಪಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಲ್ಲಾ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.

ಕ್ರಿಯಾ ಯೋಜನೆ ಪ್ರಮುಖ ಕ್ರಮಗಳು:

*ಕೆಪಿಸಿಎಲ್ ವತಿಯಿಂದ ಉಷ್ಣ ವಿದ್ಯುತ್ ಸ್ಥಾವರಗಳ ಗರಿಷ್ಠ ಕಾರ್ಯನಿರ್ವಹಣೆ ಖಚಿತಪಡಿಸುವುದು, ಅಗತ್ಯ ಕಲ್ಲಿದ್ದಲು ದಾಸ್ತಾನು ಲಭ್ಯತೆ ನೋಡಿಕೊಳ್ಳುವುದು ಹಾಗೂ ಉಷ್ಣ ಮತ್ತು ಜಲ ವಿದ್ಯುತ್ ಸ್ಥಾವರಗಳ ನಿರ್ವಹಣಾ ಕಾರ್ಯಗಳನ್ನು ಆದ್ಯತೆ ಮತ್ತು ವ್ಯವಸ್ಥೆಯ ಅಗತ್ಯತೆಗೆ ಅನುಗುಣವಾಗಿ ಯೋಜಿಸುವುದು.

ಕೆಪಿಟಿಸಿಎಲ್ ವತಿಯಿಂದ 500 ಮೆ.ವ್ಯಾ. ಬ್ಯಾಟರಿ ಎನರ್ಜಿ ಸ್ಟೋರೇಜ್‌ ಸಿಸ್ಟೆಮ್‌ ಹಾಗೂ ಕ್ರೆಡಲ್‌ ಮೂಲಕ ಜೆಎಸ್‌ಡಬ್ಲ್ಯೂನ 300 ಮೆ.ವ್ಯಾ. ಸೌರ ವಿದ್ಯುತ್ ಯೋಜನೆಗಳ ತ್ವರಿತ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳುವುದು.

ಎಸ್ಕಾಂಗಳು ಮತ್ತು ಕ್ರೆಡಲ್‌ ವತಿಯಿಂದ ಕುಸುಮ್-ಬಿ ಮತ್ತು ಕುಸುಮ್-ಸಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತಗೊಳಿಸಿ ಶೀಘ್ರ ಅನುಷ್ಠಾನಗೊಳಿಸುವುದು.

ಸಹ-ಉತ್ಪಾದನಾ ಘಟಕಗಳಿಂದ 500–700 ಮೆ.ವ್ಯಾ. ವಿದ್ಯುತ್ ಖರೀದಿ ಪ್ರಕ್ರಿಯೆಯನ್ನು ಪಿಸಿಕೆಎಲ್ ಮೂಲಕ ಪೂರ್ಣಗೊಳಿಸುವುದು.

2026ರ ಅಕ್ಟೋಬರ್‌ಗೂ ಮುನ್ನ ಇತರೆ ರಾಜ್ಯಗಳೊಂದಿಗೆ ವಿದ್ಯುತ್ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಆರಂಭಿಸುವುದು. ಇದರಲ್ಲಿ ರೌಂಡ್‌ ದ ಕ್ಲಾಕ್‌ (ಆರ್‌ಟಿಸಿ) ಹಾಗೂ ಪೀಕ್ ಅವರ್ ವಿದ್ಯುತ್ ಖರೀದಿಗೆ ಕ್ರಮವಹಿಸುವುದು.

ಕೋಟ್‌:

ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ.ಜಾರ್ಜ್,
“ಪ್ರಕೃತಿ ವಿಕೋಪದ ನಡುವೆಯೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಈಗಾಗಲೇ ನಿರ್ದೇಶನ ನೀಡಿದ್ದಾರೆ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಮಂದಿನ ವರ್ಷದ ಮೇ ಅಂತ್ಯದವರೆಗೆ ಸಮರ್ಪಕ ವಿದ್ಯುತ್ ಪೂರೈಸಲು ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸಾಧ್ಯವಾದಷ್ಟು ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದಗಳನ್ನು ಮಾಡಿಕೊಂಡು ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಬೇಕು.”


Share

You cannot copy content of this page