ಬೆಳಗಾವಿ: ಜನರು ಸರಕಾರವನ್ನು ಹುಡುಕಬಾರದು; ಜನರ ಬಳಿಗೆ ಸರಕಾರ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ, ತಾಲ್ಲೂಕುಮಟ್ಟದ ಪ್ರತಿ ಅಧಿಕಾರಿಯು ಕೇಂದ್ರಸ್ಥಾನದಲ್ಲಿರುವ ಬಗ್ಗೆ ಡಿಸಿ, ಸಿಇಓಗಳು ಖಚಿತಪಡಿಸಿಕೊಳ್ಳಬೇಕು. ಚಲನವಲನ ವಹಿ ಮೇಲೆಯೂ ನಿರಂತರ ನಿಗಾ ವಹಿಸಬೇಕು. ಸರಕಾರವನ್ನು ಜನರು ಹುಡುಕಬಾರದು. ಜನರ ಬಳಿ ಸರಕಾರ ಇರಬೇಕು ಎಂಬುದು ನನ್ನ ಮೊದಲ ಆದ್ಯತೆ. ಜನರನ್ನು ಕಚೇರಿಗೆ ಅಲೆಸುವುದು ನಿಲ್ಲಬೇಕು. ಅಧಿಕಾರಿಗಳು ಘನತೆಯಿಂದ ಇರಬೇಕು ಎಂದರು.
ಪ್ರಜಾಸೇವೆಗಾಗಿ ಪ್ರತ್ಯೇಕ ಇಲಾಖೆ:
ಜನರ ಅಹವಾಲು ಪರಿಹರಿಸಲು ಪ್ರಜಾಸೇವಾ ಇಲಾಖೆ ಆರಂಭಿಸಲಾಗಿದ್ದು, ಈ ಇಲಾಖೆಗೆ ಒಬ್ಬ ಪ್ರತ್ಯೇಕ ಮಂತ್ರಿಯೊಬ್ಬರನ್ನು ನಿಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ಮೊದಲ ಹಾಗೂ ಮೂರನೇ ಶನಿವಾರ ತಿಂಗಳಲ್ಲಿ ಎರಡು ದಿನ ಆಯ್ದ ತಾಲ್ಲೂಕುಗಳಲ್ಲಿ ಪ್ರಜಾಸೇವಾ ಇಲಾಖೆಯಿಂದ ಜನಸಂಪರ್ಕ ಸಭೆಗಳನ್ನು ನಡೆಸಿ ಜನರ ಸಮಸ್ಯೆ ಬಗೆಹರಿಸಬೇಕು ಎಂದು ನಿರ್ದೇಶನ ನೀಡಿದರು.
ಜನಸಂಪರ್ಕ ಸಭೆಯಲ್ಲಿ ಅರ್ಜಿಗಳ ಸ್ವೀಕಾರ, ವಿಲೇವಾರಿ ಸೇರಿದಂತೆ ಪ್ರತಿಯೊಂದರ ನಿಗದಿತ ವಿನ್ಯಾಸವನ್ನು ನೀಡಲಾಗುವುದು. ಕಾನೂನು ಚೌಕಟ್ಟಿನೊಳಗೆ ಜನರ ಸಮಸ್ಯೆ ಬಗೆಹರಿಸಬೇಕು.
ಸಿಎಸ್ಆರ್ ನಿಧಿಯಲ್ಲಿ ಶಾಲೆಗಳ ಸ್ಥಾಪನೆ:
ಜನರು ಮಕ್ಕಳ ವಿದ್ಯಾಭ್ಯಾಸ ಹಾಗೂ ಉದ್ಯೋಗ ಅರಸಿ ಜನರು ಪಟ್ಟಣಗಳಿಗೆ ಬರುತ್ತಾರೆ. ಇದನ್ನು ತಡೆಯಲು ಸಿ.ಎಸ್.ಆರ್. ನೀತಿಯಡಿ 8000 ಕೋಟಿ ರೂಪಾಯಿಗಳನ್ನು ಮೂರು ಪಂಚಾಯಿತಿ ಸೇರಿಸಿ 10-15 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಸರಕಾರಿ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಈ ರೀತಿ ಕನಿಷ್ಠ 2000 ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಇದಲ್ಲದೇ ಆಯಾ ಜಿಲ್ಲೆಯ ದೊಡ್ಡ ಶಿಕ್ಷಣ ಸಂಸ್ಥೆಗಳು ಮೂರು ಶಾಲೆಗಳನ್ನು ದತ್ತು ಪಡೆದುಕೊಳ್ಳುವಂತೆ ಕ್ರಮ ವಹಿಸಲಾಗುವುದು. ಎಲ್ಲರಿಗೂ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ಒದಗಿಸಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.
ಅರ್ಹ ವ್ಯಕ್ತಿಯ ಮತದಾನ ಹಕ್ಕು ರಕ್ಷಣೆ:
ಪ್ರತಿಯೊಬ್ಬ ಅರ್ಹ ವ್ಯಕ್ತಿಗೆ ಮತದಾನ ಹಕ್ಕು ನೀಡಬೇಕು ಎಂಬುದು ನಮ್ಮ ಉದ್ಧೇಶವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಯಾವುದೇ ಪಕ್ಷದ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿಯದೇ ಎಲ್ಲ ಬಿ.ಎಲ್.ಓ.ಗಳು ನಿಯಮಾನುಸಾರ ಮನೆಮನೆಗೆ ಹೋಗಿ ಗಣತಿ ನಮೂನೆಗಳನ್ನು ವಿತರಿಸಬೇಕು.
ಜಾತಿ, ವಾಸಸ್ಥಳ ದೃಢೀಕರಣ ಪ್ರಮಾಣಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕೂಡ ಕಲ್ಪಿಸಲಾಗಿದೆ. ಮತದಾನದ ಹಕ್ಕು ಪಡೆದುಕೊಳ್ಳಲು ಪ್ರತಿಯೊಬ್ಬರು ಅಗತ್ಯ ಕ್ರಮ ವಹಿಸಬೇಕು ಎಂದು ನಾಗರಿಕರಿಗೆ ಸಲಹೆ ನೀಡಿದರು. ಯಾರೂ ಮತದಾನ ಹಕ್ಕುಗಳಿಂದ ವಂಚಿತರಾಗಬಾರದು ಎಂದು ಹೇಳಿದರು.
ಭಾರತ ಜೋಡೋ ಯುವಕ ಸಂಘ:
ದೇಶದ ಸಮಗ್ರತೆ, ಐಕ್ಯತೆ ಕಾಪಾಡಲು ಭಾರತ ಜೋಡೋ ಯುವಕ ಸಂಘ ಸ್ಥಾಪಿಸಿ ಪ್ರತಿ ಪಂಚಾಯಿತಿಗೆ ಹತ್ತು ಲಕ್ಷ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಹತ್ತು ಸಾವಿರ ಯುವಕರ ಸಂಘಗಳನ್ನು ಸ್ಥಾಪಿಸಲಾಗುವುದು. ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಗೆ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಹೇಳಿದರು.
ಪ್ರತಿ ಕ್ಷೇತ್ರದಲ್ಲಿ ಬಡವರಿಗೆ ಐದರಿಂದ ಹತ್ತು ಸಾವಿರ ನಿವೇಶನಗಳನ್ನು ನೀಡಲು ಕ್ರಮ ವಹಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ.
ಸಾಂಪ್ರದಾಯಿಕ ಮಾಧ್ಯಮಗಳ ನಡುವೆ ಸಾಮಾಜಿಕ ಜಾಲತಾಣಗಳ ಭರಾಟೆ ಹೆಚ್ಚಾಗಿದೆ. ಆಧುನಿಕ ತಂತ್ರಜ್ಞಾನದಿಂದ ಅನುಕೂಲ ಹೆಚ್ಚಾಗಿದೆ. ನಕಲಿ ಸುದ್ದಿ ತಡೆಗೆ ಸರಕಾರ ಕ್ರಮ ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸಭೆಯ ಆರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಹೊಸ ಆಲೋಚನೆ ಹೊಂದಿರುವ ಮುಖ್ಯಮಂತ್ರಿಗಳ ಆಶಯದಂತೆ ತ್ವರಿತವಾಗಿ ಕೆಲಸಗಳಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಲ್ಲ ಜಿಲ್ಲೆಗಳ ಡಿಸಿ, ಸಿಇಓ, ಎಸ್.ಪಿ. ಅವರು ಅಭಿವೃದ್ಧಿಯ ಜತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜತೆಗೆ ಜನರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಬೇಕು.
ಗ್ಯಾರಂಟಿ ಅಭಿವೃದ್ಧಿಗೆ ಪೂರಕವಾಗಿವೆ. ಗ್ಯಾರಂಟಿ ಅನುಷ್ಠಾನದಿಂದ ಅಭಿವೃದ್ಧಿ ಕುಂಠಿತ ಎಂಬುದು ಸತ್ಯಕ್ಕೆ ದೂರವಾದ ಮಾತು. ಈ ಬಾರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣದಲ್ಲಿ ಕುಂಠಿತವಾಗಿರುವುದು ಕಂಡುಬಂದಿದೆ.
ಒಟ್ಟಾರೆ ಶೇ.17 ಮಳೆಯ ಪ್ರಮಾಣ ಕಡಿನೆಯಾಗಿದೆ. ಹಿಂದಿನ ಒಂದೆರಡು ದಿನಗಳಲ್ಲಿ ಸ್ವಲ್ಪ ಮಳೆಯಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ-ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಗಳು ನಿಯಮಿತವಾಗಿ ಸಭೆ ನಡೆಸಿ ಸರಕಾರಕ್ಕೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.
ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು.
ಜಲಮೂಲಗಳಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು.
ಮೇವಿನ ಕೊರತೆ ಆಧರಿಸಿ ಮೇವಿನ ಕಿಟ್ ಗಳನ್ನು ನೀಡಬೇಕು. ಮಳೆ ಪ್ರಮಾಣ ನಿಖರವಾಗಿ ತಿಳಿಯಲು ಮಳೆ ಮಾಪನಾ ಕೇಂದ್ರಗಳನ್ನು ಆಧುನಿಕರಣಗೊಳಿಸಬೇಕು. ಕೇಂದ್ರ ಸರಕಾರ ಇದಯವರೆಗೆ ಕೇವಲ ಶೇ.50 ರಷ್ಟು ಗೊಬ್ಬರವನ್ನು ಪೂರೈಕೆ ಮಾಡಿರುತ್ತದೆ. ಉಳಿದ ಪ್ರಮಾಣವನ್ನು ಒದಗಿಸುವಂತೆ ಪತ್ರ ಬರೆಯಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.
ಮನೆ ಮನೆಗೆ ತೆರಳಿ ಹಕ್ಕುಪತ್ರ ನೀಡುವ ಕೆಲಸವನ್ನು ಕಂದಾಯ ಇಲಾಖೆ ಆರಂಭಿಸಿದೆ. ಜಮೀನು ದಾಖಲೆಗಳ 140 ಕೋಟಿ ಪುಟಗಳನ್ನು ಡಿಜಿಟಲೀಕರಣ ಮಾಡುವ ಕೆಲಸವನ್ನು ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕ ಕಂದಾಯ ಇಲಾಖೆ ಕೈಗೆತ್ತಿಕೊಂಡಿದೆ. ಮುಂಬರುವ ದಿನಗಳಲ್ಲಿ ದೇಶಕ್ಕೆ ಮಾದರಿಯಾಗಲಿದೆ ಎಂದು ಹೇಳಿದರು.
ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಸಚಿವರಾದ ಎಂ.ಬಿ.ಪಾಟೀಲ, ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್, ಈಶ್ಚರ್ ಖಂಡ್ರೆ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮತ್ತಿತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
