ಬೆಂಗಳೂರು:ನಗರದಲ್ಲಿ ಹೊಸ ಜಾಹೀರಾತು ನೀತಿ ಜಾರಿಗೆ ಬಂದ ನಂತರ ಅನಧಿಕೃತವಾಗಿ ಡಿಜಿಟಲ್ ಜಾಹೀರಾತುಗಳನ್ನು ಅಳವಡಿಸಲಾಗುತ್ತಿದೆ. ಪರವಾನಗಿ ಇಲ್ಲದೆ ಅಳವಡಿಸಿರುವ ಜಾಹೀರಾತುಗಳನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಅವರು ಮಹತ್ವದ ಸಭೆ ನಡೆಸಿದ ಅವರು, ಪರವಾನಗಿ ಪಡೆದು ಜಾಹೀರಾತು ಅಳವಡಿಸಿರುವವರೂ ಸಹ, ಅನುಮೋದಿತ ಉದ್ದೇಶಕ್ಕಿಂತ ಭಿನ್ನವಾಗಿ ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದರು.
ಜಿಬಿಎ ವ್ಯಾಪ್ತಿಯಲ್ಲಿರುವ ಸುಮಾರು 23 ಲಕ್ಷ ಆಸ್ತಿಗಳಿಗೆ ಸರ್ಕಾರದಿಂದಲೇ ಮನೆ-ಮನೆಗೆ ಇ-ಖಾತೆಗಳನ್ನು ವಿತರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಲು ಕ್ರಮವಹಿಸಬೇಕು ಎಂದು ನಿರ್ದೇಶಿಸಿದರು.
ಕಡಿಮೆ ಆಸ್ತಿ ತೆರಿಗೆ ಪಾವತಿಸುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ತೆರಿಗೆ ಪರಿಷ್ಕರಣೆ ಮಾಡಿ ಸಮರ್ಪಕವಾಗಿ ಆಸ್ತಿ ತೆರಿಗೆ ಸಂಗ್ರಹಿಸಬೇಕು.
ಜಿಬಿಎ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಖಾತೆ ಮಾಡಿಕೊಟ್ಟು, ಆಸ್ತಿ ತೆರಿಗೆಯನ್ನು ಪರಿಣಾಮಕಾರಿಯಾಗಿ ಸಂಗ್ರಹಿಸುವ ಕೆಲಸ ಮಾಡಬೇಕು.
ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಪ್ರಕ್ರಿಯೆಗೆ ವೇಗ:
ಜಿಐಎಸ್, ಡ್ರೋನ್ ಹಾಗೂ ಇತರೆ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೆಸ್ಕಾಂ, ಜಲಮಂಡಳಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಆಸ್ತಿಗಳ ಮಾಹಿತಿಯನ್ನು ಏಕೀಕರಿಸಿ, ವ್ಯಾಪ್ತಿಗೆ ಒಳಪಡದಿರುವ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಕಟ್ಟಡ ಭಗ್ನಾವಶೇಷಗಳನ್ನು ವಿಲೇವಾರಿ ಮಾಡುವ ವಾಹನಗಳ ನೋಂದಣಿ ಕಡ್ಡಾಯ:
ಕಟ್ಟಡ ಭಗ್ನಾವಶೇಷಗಳನ್ನು ವಿಲೇವಾರಿ ಮಾಡುವ ಎಲ್ಲಾ ವಾಹನಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಜೊತೆಗೆ, ವಾಹನಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿರಬೇಕು.
“ಕಸದಿಂದ ಸ್ವಾತಂತ್ರ್ಯ” ಅಭಿಯಾನ:
ಜಿಬಿಎ ವ್ಯಾಪ್ತಿಯಲ್ಲಿ ಕಸ, ತ್ಯಾಜ್ಯ, ಕಟ್ಟಡ ಭಗ್ನಾವಶೇಷಗಳು, ಮಣ್ಣಿನ ಗುಡ್ಡೆಗಳು, ಕಳೆ ಸೇರಿದಂತೆ ಇತರೆ ತ್ಯಾಜ್ಯಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಉದ್ದೇಶದಿಂದ ಆಗಸ್ಟ್ ತಿಂಗಳ ಪೂರ್ತಿ l“ಕಸದಿಂದ ಸ್ವಾತಂತ್ರ್ಯ”(Freedom from waste)* ಅಭಿಯಾನ ಹಮ್ಮಿಕೊಳ್ಳಲು ಯೋಜನೆ ರೂಪಿಸಬೇಕು.
ಬೆಂಗಳೂರಿನ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪಾಲಿಕೆ, ಕೆ-ರೈಡ್, ರೈಲ್ವೆ, ಮೆಟ್ರೋ ಸೇರಿದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಆಗಸ್ಟ್ ತಿಂಗಳಲ್ಲಿ ಅಭಿಯಾನ ನಡೆಸಲು ಕ್ರಮವಹಿಸಬೇಕು.
ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವತಿಯಿಂದ 1,616 ಸ್ಥಳಗಳಲ್ಲಿ ಸುಮಾರು 22,732 ಟನ್ ತ್ಯಾಜ್ಯ ಗುರುತಿಸಲಾಗಿದ್ದು, ಅದನ್ನು ತೆರವುಗೊಳಿಸಲು ಸಮಗ್ರ ಯೋಜನೆ ರೂಪಿಸಲು ಸೂಚನೆ ನೀಡಿದರು.
ಖಾಲಿ ಜಾಗಗಳನ್ನು ಸ್ವತಃ ಸ್ವಚ್ಛಗೊಳಿಸಿಕೊಳ್ಳಲು ಅವಕಾಶ:
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಖಾಲಿ ಜಾಗಗಳಲ್ಲಿ ಬೆಳೆದಿರುವ ಕಳೆ, ಗಿಡ-ಗಂಟಿಗಳು ಹಾಗೂ ತ್ಯಾಜ್ಯವನ್ನು ಸ್ವತ್ತಿನ ಮಾಲೀಕರೇ ತೆರವುಗೊಳಿಸಿಕೊಳ್ಳಲು ಆಗಸ್ಟ್ 15ರವರೆಗೆ ಕಾಲಾವಕಾಶ ನೀಡಲಾಗುವುದು. ಬಳಿಕವೂ ತೆರವುಗೊಳಿಸದಿದ್ದರೆ, ಪಾಲಿಕೆಯಿಂದ ತೆರವುಗೊಳಿಸಿ ಅದರ ವೆಚ್ಚವನ್ನು ಆಸ್ತಿ ತೆರಿಗೆಗೆ ಸೇರಿಸಿ ವಸೂಲಿ ಮಾಡಲಾಗುವುದು.
ಸ್ವತ್ತಿನ ಮಾಲೀಕರು ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 15ರೊಳಗೆ ತಮ್ಮ ಖಾಲಿ ನಿವೇಶನಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಪಾದಚಾರಿ ಮಾರ್ಗ ಒತ್ತುವರಿ ಪುನರಾವರ್ತಿಸುವವರಿಗೆ ದುಪ್ಪಟ್ಟು ದಂಡ:
ಜಿಬಿಎ ವ್ಯಾಪ್ತಿಯಲ್ಲಿ ಸುಮಾರು 1,500 ಬೀದಿ ವ್ಯಾಪಾರಿಗಳಿಗೆ ಮಾತ್ರ ಸ್ಥಳಾಂತರದ ಅಗತ್ಯ ಉಂಟಾಗಿದ್ದು, 10,000ಕ್ಕೂ ಹೆಚ್ಚು ಅಂಗಡಿಗಳ ವಿವಿಧ ರೀತಿಯ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.
ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸಿದ ರಸ್ತೆಗಳಲ್ಲಿ ಮತ್ತೆ ಒತ್ತುವರಿ ಮಾಡಿದರೆ ದುಪ್ಪಟ್ಟು ದಂಡ ವಿಧಿಸಲಾಗುವುದು.
ಈ ಸಂದರ್ಭದಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಹಾಗೂ ನಿತೀಶ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ್ ಸುನೀಲ್ ಕುಮಾರ್, ಜಿ. ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಅಪರ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
