ಬೆಂಗಳೂರು:ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ಸ್ಪಂದಿಸದೆ, ಅಧಿಕಾರ ಮದ ಹಾಗೂ ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಕಸಿದುಕೊಳ್ಳಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು.
ರೈತರ ಭೂಮಿ ಸ್ವಾಧೀನಕ್ಕೆ ತೀವ್ರ ವಿರೋಧ:
ಪ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಬಿಡದಿ ಭಾಗದಲ್ಲಿ ರೈತರ ಫಲವತ್ತಾದ ಜಮೀನನ್ನು ಕಿತ್ತುಕೊಂಡು ಟೌನ್ ಶಿಪ್ ಮಾಡಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಸರ್ಕಾರಿ ಜಮೀನುಗಳು ಲಭ್ಯವಿದ್ದರೂ ಕೇವಲ ರಿಯಲ್ ಎಸ್ಟೇಟ್ ದಂಧೆ ಹಾಗೂ ಹೈಕಮಾಂಡ್ಗೆ ಕಪ್ಪ ಕಾಣಿಕೆ ಸಲ್ಲಿಸಲು ಬಡ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿದರು.
ವಿಮಾನ ನಿಲ್ದಾಣದ ರಾಜಕೀಯ
ಎರಡನೇ ವಿಮಾನ ನಿಲ್ದಾಣವನ್ನು ಪೂರ್ವ ಭಾಗದಲ್ಲಿ ನಿರ್ಮಿಸಿದರೆ ಮಧ್ಯ ಹಾಗೂ ಉತ್ತರ ಕರ್ನಾಟಕದ ಜನರಿಗೆ ಅನುಕೂಲವಾಗುತ್ತದೆ. ಅಲ್ಲಿ ಸರ್ಕಾರಿ ಜಮೀನು ಲಭ್ಯವಿದ್ದರೂ, ಕೇವಲ ರಿಯಲ್ ಎಸ್ಟೇಟ್ ಲಾಭಕ್ಕಾಗಿ ಅದನ್ನು ಕನಕಪುರ ಕಡೆಗೆ ಕೊಂಡೊಯ್ಯಲು ಸರ್ಕಾರ ಸಂಚು ರೂಪಿಸುತ್ತಿದೆ.
ಬರ ಪರಿಹಾರದಲ್ಲಿ ವಿಫಲ:
ರಾಜ್ಯದ ಜಲಾಶಯಗಳು ಬತ್ತಿ ಹೋಗಿ, ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದ್ದರೂ ಮುಖ್ಯಮಂತ್ರಿ ಹಾಗೂ ಸಚಿವರು ಜನರ ಕಷ್ಟ ಕೇಳುವ ಬದಲು ಮಂತ್ರಿಮಂಡಲ ವಿಸ್ತರಣೆಗಾಗಿ ದೆಹಲಿ ವಾರಕ್ಕೆರಡು ಬಾರಿ ಓಡಾಡುತ್ತಿದ್ದಾರೆ.
ಕೇಸುಗಳನ್ನು ಹಿಂಪಡೆಯಲು ಒತ್ತಾಯ:
ಪ್ರತಿಭಟನೆ ನಡೆಸಿದ ರೈತರು ಹಾಗೂ ಮಹಿಳೆಯರ ಮೇಲೆ ದರ್ಪದಿಂದ ದಾಖಲಿಸಿರುವ ಸುಳ್ಳು ಮೊಕದ್ದಮೆಗಳನ್ನು ಮುಂದಿನ 24 ಗಂಟೆಗಳಲ್ಲಿ ವಾಪಸ್ ಪಡೆಯಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಭ್ರಷ್ಟ ಹಾಗೂ ರೈತ ವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ಭಾರತೀಯ ಜನತಾ ಪಾರ್ಟಿ ಮತ್ತು ಜನತಾ ದಳ (ಜಾತ್ಯತೀತ) ಪಕ್ಷದ ಹೆಚ್.ಡಿ. ಕುಮಾರಸ್ವಾಮಿ ಅವರು ಒಟ್ಟಾಗಿ ಹೋರಾಟಕ್ಕೆ ಸಿದ್ಧರಾಗಿದ್ದೇವೆ. ಜನರ ಹಿತವನ್ನು ಮರೆತು ತೊಘಲಕ್ ದರ್ಬಾರ್ ನಡೆಸುತ್ತಿರುವ ಈ ಸರ್ಕಾರಕ್ಕೆ ಸಾರ್ವಜನಿಕರು ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಯಡಿಯೂರಪ್ಪ ಗುಡುಗಿದರು.
ಇದೇ ಸಂದರ್ಭದಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಜನಪರ ಆಡಳಿತವನ್ನು ಶ್ಲಾಘಿಸಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಜಂಟಿಯಾಗಿ ಹಮ್ಮಿಕೊಂಡಿರುವ ಈ ಹೋರಾಟ ಕೇವಲ ಬೆಂಗಳೂರಿಗೆ ಸೀಮಿತವಾಗಿರದೆ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
