ಬೆಂಗಳೂರು: ಮುಂಬರುವ ಆಗಸ್ಟ್, ಸೆಪ್ಟೆಂಬರ್ ಹಾಗೂ ನಂತರದ ತಿಂಗಳುಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 70,000 ಕ್ಕೂ ಹೆಚ್ಚು ಹುದ್ದೆಗಳಿಗೆ ಬೃಹತ್ ನೇಮಕಾತಿ ಪರೀಕ್ಷೆಗಳು ನಡೆಯಲಿದ್ದು, ಈ ಪೈಕಿ ಸರಣಿ ಪೊಲೀಸ್ ನೇಮಕಾತಿ ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.
ಪರೀಕ್ಷೆಗಳನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಭ್ರಷ್ಟಾಚಾರ ರಹಿತ ವಾತಾವರಣದಲ್ಲಿ ನಡೆಸಲು ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದು ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಲಾಯಿತು.
ಪೊಲೀಸ್ ನೇಮಕಾತಿ ಲಿಖಿತ ಪರೀಕ್ಷೆಗಳ ಪೂರ್ಣ ವೇಳಾಪಟ್ಟಿ:
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ದಿನಾಂಕ ಹಾಗೂ ಹುದ್ದೆಗಳ ವಿವರ ಕೆಳಗಿನಂತಿದೆ.
2026 ನೇ ಆಗಸ್ಟ್ 12 ರಂದು ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (Civil Police Constable) – 3991 ಹುದ್ದೆಗಳು, ಸೆಪ್ಟೆಂಬರ್ 07 ರಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (Armed Police Constable) – 1600 ಹುದ್ದೆಗಳು ಹಾಗೂ ಸೆಪ್ಟೆಂಬರ್ 20 ರಂದು ವಿಶೇಷ ಪೊಲೀಸ್ ಕಾನ್ಸ್ಟೇಬಲ್ (KSRP, IRB ಮತ್ತು KSISF) – 2314 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದು.
ಪ್ರಸ್ತುತ ಮೊದಲ ಹಂತದಲ್ಲಿ ಒಟ್ಟು 7905 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳು ನಡೆಯಲಿದ್ದು, ನಂತರದ ದಿನಗಳಲ್ಲಿ ಇತರ 62,000* ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆಗಳು ಜರುಗಲಿವೆ.
ಪರೀಕ್ಷಾ ಅಕ್ರಮಗಳಿಗೆ ಶೂನ್ಯ ಸಹಿಷ್ಣುತೆ – ಸೈಬರ್ ಕ್ರೈಂ ತೀವ್ರ ನಿಗಾ:
ಸೈಬರ್ ಕಣ್ಣು: ಪ್ರಶ್ನೆ ಪತ್ರಿಕೆ ಸೋರಿಕೆ, ಆಳುಮಾರಾಟ (Impersonation), ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಮತ್ತು ಯಾವುದೇ ಸಂಘಟಿತ ಅಕ್ರಮಗಳನ್ನು ತಡೆಯಲು ಸೈಬರ್ ಕ್ರೈಂ ಯೂನಿಟ್ ಮತ್ತು ಗುಪ್ತಚರ ವಿಭಾಗಗಳಿಗೆ ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ವೇದಿಕೆಗಳ ಮೇಲೆ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.
ಅಕ್ರಮ ಎಸಗಿದರೆ ಕಠಿಣ ಕಾಯ್ದೆಯಡಿ ಶಿಕ್ಷೆ:
ಪರೀಕ್ಷೆಯಲ್ಲಿ ಯಾವುದೇ ರೀತಿಯ ಮಾಲ್ ಪ್ರಾಕ್ಟೀಸ್ ಎಸಗುವವರ ವಿರುದ್ಧ “ಕರ್ನಾಟಕ ಸಾರ್ವಜನಿಕ ಪರೀಕ್ಷೆ (ಭ್ರಷ್ಟಾಚಾರ ಮತ್ತು ಪರೀಕ್ಷಾ ಅಕ್ರಮ ತಡೆ ಮುನ್ನೆಚ್ಚರಿಕೆ ಕ್ರಮಗಳು) ಕಾಯ್ದೆ 2023” ರ ಅಡಿಯಲ್ಲಿ ಅತ್ಯಂತ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.
ಬಿಗಿ ಭದ್ರತೆ ಮತ್ತು ಮೇಲ್ವಿಚಾರಣೆ:
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್, ಗೌಪ್ಯ ಪರೀಕ್ಷಾ ಸಾಮಗ್ರಿಗಳ ಸುರಕ್ಷಿತ ಸಾಗಣೆ, ಸಂಚಾರ ನಿರ್ವಹಣೆ ಮತ್ತು ತುರ್ತು ಸ್ಪಂದನಾ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಹಾಗೂ ಎಸ್ಪಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಈ ಉನ್ನತ ಮಟ್ಟದ ಸಭೆಯಲ್ಲಿ ಡಿ.ಜಿ.ಪಿ ಉಮೇಶ್ ಕುಮಾರ್, ಎ.ಡಿ.ಜಿ.ಪಿ ಹಿತೇಂದ್ರ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸೇರಿದಂತೆ ಹಲವು ಉನ್ನತಾಧಿಕಾರಿಗಳು ಭಾಗವಹಿಸಿದ್ದರು.
ಅರ್ಹ ಹಾಗೂ ಶ್ರಮಜೀವಿ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಂಪೂರ್ಣ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.
