ಸಮಗ್ರ ಸುದ್ದಿ

ಕೆಪಿಎಸ್‌ಸಿ ಹಗರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು – ಬಿ.ವೈ. ವಿಜಯೇಂದ್ರ

Share

ಬೆಂಗಳೂರು: ಕೆಪಿಎಸ್‌ಸಿ ಮೂಲಕ ನಡೆದ 400 ಪಶುವೈದ್ಯರ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಆಡಿಯೋ ಲೀಕ್ ಪ್ರಕರಣ ಗಂಭೀರ

ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಡಿಯೋ ಲೀಕ್ ಆಗಿರುವುದು ಅತ್ಯಂತ ಗಂಭೀರ ಬೆಳವಣಿಗೆಯಾಗಿದೆ. ಅಭ್ಯರ್ಥಿಗಳು ಹಣ ನೀಡಿದರೆ ಹೆಚ್ಚಿನ ಅಂಕಗಳನ್ನು ಕೊಡಿಸುವುದಾಗಿ ಅದರಲ್ಲಿ ಹೇಳಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನೇಮಕಾತಿ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಧಕ್ಕೆ ತಂದಿದೆ ಎಂದು ಅವರು ಹೇಳಿದರು.

ದೂರು ದಾಖಲಿಸುವಲ್ಲಿಯೂ ವಿಳಂಬ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಿಗ್ಗೆಯೇ ದೂರು ನೀಡಲು ಹೋದರೂ, ಮಧ್ಯರಾತ್ರಿ ಸುಮಾರು 3 ಗಂಟೆಗೆ ಮಾತ್ರ ಪ್ರಕರಣ ದಾಖಲಿಸಲಾಗಿದೆ. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ವಿಜಯೇಂದ್ರ ಟೀಕಿಸಿದರು.

ಉದ್ಯೋಗಾಕಾಂಕ್ಷಿಗಳೊಂದಿಗೆ ಚರ್ಚೆ

ಕೆಪಿಎಸ್‌ಸಿ ಅಕ್ರಮದ ಬಗ್ಗೆ ಉದ್ಯೋಗಾಕಾಂಕ್ಷಿಗಳು ಭೇಟಿ ನೀಡಿ ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ್ದು, ಅವರ ಸಮಸ್ಯೆಗಳಿಗೆ ನ್ಯಾಯ ದೊರಕಿಸಲು ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು.

ಸರ್ಕಾರದ ವಿರುದ್ಧ ವಾಗ್ದಾಳಿ

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕಾಗಿತ್ತು. ಆದರೆ ಸರ್ಕಾರ ಕೈಕಟ್ಟಿ ಕುಳಿತಿರುವುದರಿಂದ ಕೆಪಿಎಸ್‌ಸಿಯ ವಿಶ್ವಾಸಾರ್ಹತೆ ಕುಸಿದಿದೆ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ

ಕೆಪಿಎಸ್‌ಸಿ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ತೊಂದರೆಗೆ ಒಳಗಾದ ವಿದ್ಯಾರ್ಥಿಗಳ ಪರವಾಗಿ ನಿಲ್ಲುವುದಾಗಿ ವಿಜಯೇಂದ್ರ ಭರವಸೆ ನೀಡಿದರು.

ನಮ್ಮಿಂದಲೂ ತಪ್ಪಾಗಿದೆ

ವಿದ್ಯಾರ್ಥಿಗಳ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಮ್ಮ ಕಡೆಯಿಂದಲೂ ತಪ್ಪಾಗಿದೆ ಎಂಬುದನ್ನು ನೇರವಾಗಿ ಒಪ್ಪಿಕೊಳ್ಳುತ್ತೇನೆ. ಯುವಕರು ಬೀದಿಗಿಳಿದು ಹೋರಾಟ ನಡೆಸುವಾಗ ಅದನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ವಿದ್ಯಾರ್ಥಿಗಳೊಂದಿಗೆ ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವಿಷಯಕ್ಕೆ ಹೆಚ್ಚಿನ ಗಮನ ಹರಿಸುತ್ತೇವೆ” ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಬಗ್ಗೆ ಎಚ್ಚರಿಕೆ

ಕಾಂಗ್ರೆಸ್ ನಾಯಕರು ಹೇಳಿದಂತೆ ಬಂಧನ ನಡೆಸಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದರ ಹೊಣೆ ಸರ್ಕಾರವೇ ಹೊತ್ತುಕೊಳ್ಳಬೇಕು. “ಪಾಕ್ ಜಿಂದಾಬಾದ್” ಘೋಷಣೆ ಕೂಗಿದ ಸಂದರ್ಭದಲ್ಲಿ ಏನು ಕ್ರಮ ಕೈಗೊಂಡಿದ್ದೀರಿ? ಈಗ ಕ್ರಮ ಕೈಗೊಂಡರೆ ಅದರ ಪರಿಣಾಮವನ್ನು ನೀವೇ ಎದುರಿಸಬೇಕಾಗುತ್ತದೆ. ಯಾವುದೇ ವಿಚಾರವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದರು.

ಕೆಪಿಎಸ್‌ಸಿ ಅಧ್ಯಕ್ಷರ ನೇಮಕದ ಕುರಿತು

ಬಿಜೆಪಿ ಆಡಳಿತಾವಧಿಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷರ ನೇಮಕವಾಗಿತ್ತು ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, “ಯಾವ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದರೂ ಅಕ್ರಮಕ್ಕೆ ಯಾರಿಗೂ ಬೆಂಬಲ ನೀಡುವುದಿಲ್ಲ. ಹಗರಣ ನಡೆದಿದ್ದರೆ ಸಮಗ್ರ ತನಿಖೆಯಾಗಬೇಕು. ಬ್ರೋಕರ್‌ಗಳು ಬಹಿರಂಗವಾಗಿ ಮಾತನಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಗಂಭೀರ ವಿಷಯ” ಎಂದು ಹೇಳಿದರು.

ವಿದ್ಯಾರ್ಥಿಗಳ ಹೋರಾಟದಲ್ಲಿ ಭಾಗವಹಿಸುವೆ

ಸೋಮವಾರ ಮತ್ತು ಮಂಗಳವಾರ ವಿದ್ಯಾರ್ಥಿಗಳು ಕೆಪಿಎಸ್‌ಸಿ ಅಕ್ರಮದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಈ ಕುರಿತು ವಿದ್ಯಾರ್ಥಿಗಳೊಂದಿಗೆ ಮತ್ತಷ್ಟು ಚರ್ಚೆ ನಡೆಸಿ, ಅವರ ಹೋರಾಟಕ್ಕೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು


Share

You cannot copy content of this page