ಸಮಗ್ರ ಸುದ್ದಿ

ಗ್ರಾಮಾಭಿವೃದ್ಧಿ ಆಗದಿದ್ದರೆ ನಗರದ ಮೇಲೆ ಒತ್ತಡ ಹೆಚ್ಚಳ: ಈಶ್ವರ ಖಂಡ್ರೆ

Share

ಬೆಂಗಳೂರು: ಇಂದಿನ ಆಧುನಿಕ ಯುಗಮಾನದಲ್ಲಿ ಗ್ರಾಮಗಳ ಅಭಿವೃದ್ಧಿ ಆಗದಿದ್ದರೆ, ಮೂಲಭೂತ ಸೌಕರ್ಯ ಕೊರತೆಯಾದರೆ ನಗರಗಳ ಮೇಲೆ ಒತ್ತಡ ಹೆಚ್ಚುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ, ಕರ್ನಾಟಕ ಪಂಚಾಯತ್ ಪರಿಷತ್ ಗಾಂಧೀ ಭವನದಲ್ಲಿ ಆಯೋಜಿಸಿದ್ದ ವಿಕೇಂದ್ರೀಕರಣ ಯೋಜನೆ ಕುರಿತ 2 ದಿನಗಳ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಗ್ರಾಮೀಣ ಯುವಜನರು ಉದ್ಯೋಗ ಅರಸಿ ನಗರ, ಪಟ್ಟಣಗಳಿಗೆ ಬರುತ್ತಿದ್ದು, ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿವೆ. ಹೀಗಾಗಿ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ, ಸಂಪರ್ಕ ರಸ್ತೆ, ಜಲ ಮೂಲಗಳ ಸಂರಕ್ಷಣೆ ಮಾಡಿ, ಯುವಜನರಿಗೆ ಕೌಶಲ್ಯ ತರಬೇತಿ ನೀಡಿ ಇರುವಲ್ಲಿಯೇ ಉದ್ಯೋಗ ಒದಗಿಸಿದರೆ ಆಗ ಗ್ರಾಮಗಳಿಗೆ ಜೀವಕಳೆ ಇರುತ್ತದೆ ಎಂದರು.

ಕರ್ನಾಟಕ ಅಧಿಕಾರ ವಿಕೇಂದ್ರೀಕರಣದಲ್ಲಿ ಮುಂಚೂಣಿಯಲ್ಲಿದೆ ಎಂದ ಅವರು ರಾಮಕೃಷ್ಣ ಹೆಗಡೆ ಮತ್ತು ನಸೀರ್ ಸಾಬ್ ಅವರ ಕೊಡುಗೆಯನ್ನು ಸ್ಮರಿಸಿದರು. ದೇಶಾದ್ಯಂತ ಅಧಿಕಾರ ವಿಕೇಂದ್ರೀಕರಣ ಆಗಬೇಕು, ಮಹಾತ್ಮಾ ಗಾಂಧೀ ಅವರು ಗ್ರಾಮ ಸ್ವರಾಜ್ಯದ ಕಲ್ಪನೆ ಸಾಕಾರವಾಗಬೇಕು ಎಂದು ದಿವಂಗತ ಪ್ರಧಾನಿ ರಾಜೀವ್ ಗಾಂಧೀ ಮತ್ತು ಪಿ.ವಿ. ನರಸಿಂಹರಾವ್ ಶ್ರಮಿಸಿದರು ಎಂದರು.

ಕೇರಳ ಮತ್ತು ಕರ್ನಾಟಕದ ಪಂಚಾಯತಿ ವ್ಯವಸ್ಥೆಗಳ ಬಗ್ಗೆಯೂ ಬೆಳಕು ಚೆಲ್ಲಿದ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಎಂಬ ಮೂರು ಹಂತದ ಪಂಚಾಯತಿ ವ್ಯವಸ್ಥೆ ಯಶಸ್ವಿಯಾಗಿದೆ ಎಂದು ತಿಳಿಸಿದರು.

ದೇಶದಲ್ಲಿ 2.68 ಗ್ರಾಮ ಪಂಚಾಯತಿಗಳಿದ್ದು, ಇವುಗಳ ಅಭಿವೃದ್ಧಿಗೆ ಕೇಂದ್ರ ಹಣಕಾಸು ಆಯೋಗಗಳು ಹೆಚ್ಚಿನ ಅನುದಾನ ನೀಡಬೇಕು. ಗ್ರಾಮೀಣರು ತಮ್ಮ ಗ್ರಾಮದ ಅಭಿವೃದ್ಧಿಯನ್ನು ತಾವೇ ಮಾಡಿಕೊಳ್ಳಬೇಕು. ಇದಕ್ಕಾಗಿ ಗ್ರಾಮಸಭೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಿ.ಆರ್. ಪಾಟೀಲ್, ಕೇರಳಂನ ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್, ಕೇರಳಂ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ಎಂ. ವಿಜಯಾನಂದ್ ಮತ್ತಿತರರು ಪಾಲ್ಗೊಂಡಿದ್ದರು.


Share

You cannot copy content of this page