ಬೆಂಗಳೂರು: ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾರ್ಯ ಆರಂಭಿಸಲಿದ್ದಾರೆ.
ಅಧಿವೇಶನದ ಮೊದಲ ದಿನವಾದ ಗುರುವಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್, ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.
ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ ಸಂದರ್ಭದಲ್ಲಿ ಅವರೊಂದಿಗೆ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರುಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಕಳೆದ ಸೋಮವಾರ ನಡೆದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವರಾದ 19 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಬೇಕಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸಚಿವರುಗಳಿಗೆ ಖಾತೆಗಳನ್ನು ಹಂಚುವ ಸಂಭವವಿದೆ.
ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ವಿಧೇಯಕಗಳ ಮಂಡನೆ, ನೂತನ ವಿಧಾನಸಭಾ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ಪ್ರಸ್ತಾವ , ಅರ್ಧ ಗಂಟೆ ಕಾಲಾವಧಿ ಚರ್ಚೆ, ಶೂನ್ಯ ವೇಳೆ, ನಿಯಮ 69 ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ, ಅಧಿಕೃತ ನಿರ್ಣಯಗಳು, ವರದಿಗಳನ್ನು ಒಪ್ಪಿಸುವುದು ಸೇರಿದಂತೆ ಕಾರ್ಯಕಲಾಪಗಳ ಪಟ್ಟಿ ಸಿದ್ಧಪಡಿಸಲು ಜಯಚಂದ್ರ ಅವರು ಗಮನ ವಹಿಸಲಿದ್ದಾರೆ.
ಮುಂಗಾರು ಮಳೆ ಸಕಾಲಕ್ಕೆ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ, ಬಿಡದಿ ಟೌನ್ ಷಿಪ್ ವಿಷಯಗಳು ಸದನಗಳಲ್ಲಿ ತೀವ್ರ ಚರ್ಚೆಯಾಗುವ ನಿರೀಕ್ಷೆಗಳಿವೆ.
16ನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನ ಸೋಮವಾರದಿಂದ ಆರಂಭಿಸುವುದಾಗಿ ಟಿ.ಬಿ ಜಯಚಂದ್ರ ಅವರು ತಿಳಿಸಿದ್ದಾರೆ.
1978ರಲ್ಲಿ ಮೊದಲ ಬಾರಿಗೆ ಶಾಸಕರಾದ ಅವರು, 7 ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ, ವಿಧಾನಸಭೆಯ ಉಪನಾಯಕರಾಗಿ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
