ಸಮಗ್ರ ಸುದ್ದಿ

ʼಹುಬ್ಬಳ್ಳಿ-ವಾರಣಾಸಿ’ ರೈಲು ಸಂಚಾರ ವಾರದಲ್ಲಿ 3 ದಿನ ವಿಸ್ತರಣೆ ಭರವಸೆ | ಹೆಚ್ಚಿನ ರೈಲು ಸೇವೆಗಾಗಿ ಕೇಂದ್ರ ರೈಲ್ವೆ ಸಚಿವರಿಗೆ ಪ್ರಲ್ಹಾದ ಜೋಶಿ ಮನವಿ

Share

ನವದೆಹಲಿ: ಉತ್ತರ ಕರ್ನಾಟಕ ಭಾಗದ ಜನತೆಗೆ ಅನುಕೂಲವಾಗುವಂತೆ ನಿರಂತರವಾಗಿ ವಾರದಲ್ಲಿ ಮೂರು ದಿನಗಳ ಕಾಲ ʼಹುಬ್ಬಳ್ಳಿ-ವಾರಣಾಸಿ’ ರೈಲು ಸಂಚಾರ ವಿಸ್ತರಣೆಗೆ ಕೇಂದ್ರ ರೈಲ್ವೆ ಸಚಿವರಿಂದ ಭರವಸೆ ಸಿಕ್ಕಿದೆ.

ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ, ಉತ್ತರ ಕರ್ನಾಟಕ ಹಾಗೂ ಕಾಶಿ (ವಾರಣಾಸಿ) ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ‘ಹುಬ್ಬಳ್ಳಿ-ವಾರಣಾಸಿ’ ರೈಲು ಸೇವೆಯನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು.

ಪ್ರಸ್ತುತ ಹುಬ್ಬಳ್ಳಿ-ವಾರಣಾಸಿ ರೈಲು ವಾರದಲ್ಲಿ ಒಂದು ದಿನ ಸಂಚರಿಸುತ್ತಿದ್ದು, ಇದನ್ನು ವಾರದಲ್ಲಿ ಮೂರು ದಿನ ವಿಸ್ತರಿಸಿದರೆ ಕಾಶಿ, ವಾರಣಾಸಿಗೆ ಧಾರ್ಮಿಕ ಯಾತ್ರೆ ಕೈಗೊಳ್ಳುವ ಉತ್ತರ ಕರ್ನಾಟಕ ಭಾಗದ ಭಕ್ತಾದಿಗಳಿಗೆ, ಪ್ರವಾಸಿಗರಿಗೆ ಹಾಗೂ ಉದ್ಯೋಗ-ವ್ಯಾಪಾರ ನಿಮಿತ್ತ ಪ್ರಯಾಣಿಸುವ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವರು ಗಮನ ಸೆಳೆದರು.

ಹುಬ್ಬಳ್ಳಿ ನಿಲ್ದಾಣ ಹೈಟೆಕ್ ಗೊಳಿಸಿ: ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಆಧುನಿಕ ಹಾಗೂ ಹೈಟೆಕ್ ಸೌಲಭ್ಯಗಳೊಂದಿಗೆ ಮತ್ತಷ್ಟು ಉತ್ತಮಪಡಿಸುವಂತೆಯೂ ಜೋಶಿ ವಿನಂತಿಸಿದರು. ರೈಲ್ವೆ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಶಾಪಿಂಗ್ ಮಾಲ್, ಮಲ್ಟಿಪ್ಲೆಕ್ಸ್, ರೆಸ್ಟೋರೆಂಟ್‌ಗಳು, ವಾಣಿಜ್ಯ ಮಳಿಗೆಗಳು ಸೇರಿದಂತೆ ಪ್ರಯಾಣಿಕರಿಗೆ ಅಗತ್ಯವಿರುವ ಹಲವು ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿದರು.

ಅಶ್ವಿನಿ ವೈಷ್ಣವ ಭರವಸೆ: ಪ್ರಲ್ಹಾದ ಜೋಶಿ ಅವರ ಕೋರಿಕೆಗೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ-ವಾರಣಾಸಿ ರೈಲು (ಸಂಖ್ಯೆ 07323/24) ಸೇವೆಯನ್ನು ಇನ್ನು ಮುಂದೆ ವಾರಕ್ಕೆ ಮೂರು ದಿನಗಳಿಗೆ ವಿಸ್ತರಿಸುವುದಾಗಿ ಭರವಸೆ ನೀಡಿದ್ದಾರೆ.‎‎ ಅಲ್ಲದೇ, ಮುಂಬರುವ ದಿನಗಳಲ್ಲಿ ಹುಬಳ್ಳಿ ರೈಲ್ವೆ ನಿಲ್ದಾಣದ ಉನ್ನತಿಕರಣಕ್ಕೂ ಅಶ್ವಿನಿ ವೈಷ್ಣವ ಸಮ್ಮತಿಸಿದ್ದಾರೆ.

‎ಕರ್ನಾಟಕದ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಯಾತ್ರಾರ್ಥಿಗಳ ಮತ್ತು ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹಾಗೂ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸ್ಪಂದಿಸುತ್ತಿದ್ದು, ಇದಕ್ಕಾಗಿ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.


Share

You cannot copy content of this page