ಬೆಂಗಳೂರು:ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಕರ್ನಾಟಕವನ್ನು ದೇಶದ ಪ್ರಮುಖ ಕ್ರೀಡಾ ರಾಜ್ಯವನ್ನಾಗಿ ರೂಪಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.
ಇಂದು ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಸಂಸ್ಥೆಯು ಕಂಠೀರವ ಕ್ರೀಡಾಂಗಣದ ಕರ್ನಾಟಕ ಒಲಂಪಿಕ್ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಚಾಂಪಿಯನ್ಶಿಪ್ಗಳಲ್ಲಿ ಸಾಧನೆ ಮಾಡಿದ ಕಿರಿಯ, ಯುವಕರ ಬಾಸ್ಕೆಟ್ಬಾಲ್ ತಂಡಗಳಿಗೆ ಅಭಿನಂದಿಸಿ ಮಾತನಾಡಿದ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ತದನಂತರ ಅದನ್ನು ಶೇ. 3ಕ್ಕೆ ಹೆಚ್ಚಿಸಲಾಗಿದೆ. ಹಲವು ಕ್ರೀಡಾಪಟುಗಳು ಪಿಎಸ್ಐ, ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕವಾಗಿದ್ದಾರೆ. ಪದಕ ವಿಜೇತ ಕ್ರೀಡಾಪಟುಗಳನ್ನು ನೇರ ನೇಮಕಾತಿ ಮಾಡಿಕೊಳ್ಳುವ ಪದ್ಧತಿಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಸರ್ಕಾರ 72,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಈ ನೇಮಕಾತಿಗಳಲ್ಲಿಯೂ ಕ್ರೀಡಾಪಟುಗಳಿಗೆ ಶೇಕಡಾ 2ರಷ್ಟು ಮೀಸಲಾತಿ ಸೌಲಭ್ಯ ಸಿಗಲಿದೆ. ದೇಶದ ಎಲ್ಲ ರಾಜ್ಯಗಳಲ್ಲೂ ಇಂತಹ ಅವಕಾಶವಿಲ್ಲ. ಕರ್ನಾಟಕದಲ್ಲಿ ಕ್ರೀಡಾಪಟುಗಳಿಗೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ:
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ತಲಾ ರೂ 5 ಲಕ್ಷ ಪ್ರೋತ್ಸಾಹ ಧನ ನೀಡಲಾಗಿದೆ. ಪದಕ ವಿಜೇತರಿಗೆ ರೂ.15 ಲಕ್ಷ ಪ್ರೋತ್ಸಾಹ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು. ಪ್ಯಾರಾ ಒಲಿಂಪಿಕ್ಸ್ನಲ್ಲಿ ಮೈಸೂರು ಮೂಲದ ಶಿಲ್ಪಾ ಅವರು ಭಾಗವಹಿಸಿ ಕಂಚಿನ ಪದಕ ಗೆದ್ದಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಸರ್ಕಾರ ಹಾಗೂ ಕ್ರೀಡಾ ಸಂಸ್ಥೆಗಳು ಪ್ರೋತ್ಸಾಹ ನೀಡುವುದು ಒಂದು ಭಾಗವಾಗಿದ್ದು, ಅದಕ್ಕೆ ಪೂರಕವಾಗಿ ಕ್ರೀಡಾಪಟುಗಳು ಶ್ರದ್ಧೆ, ಪರಿಶ್ರಮ ಮತ್ತು ಬದ್ಧತೆಯಿಂದ ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಶ್ರದ್ಧೆಯಿಂದ ಪ್ರಯತ್ನಿಸಿದರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಬಹುದು. ಒಬ್ಬ ಕ್ರೀಡಾಪಟುವಿನ ಬದ್ಧತೆ ಇಡೀ ತಂಡಕ್ಕೆ ಸ್ಪೂರ್ತಿಯಾಗಲಿದೆ ಎಂದು ಕಿವಿಮಾತು ಹೇಳಿದರು.
ಕ್ರೀಡಾ ಮೂಲಸೌಕರ್ಯಕ್ಕೆ ಆದ್ಯತೆ:
ರಾಜ್ಯದಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಉತ್ತಮ ತರಬೇತಿ ಪಡೆಯಲು ಕ್ರೀಡಾಪಟುಗಳನ್ನು ವಿದೇಶಗಳಿಗೆ ಕಳುಹಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಕೇಂದ್ರ ಸರ್ಕಾರದ ‘ಖೇಲೋ ಇಂಡಿಯಾ’ ಕಾರ್ಯಕ್ರಮವೂ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುತ್ತಿದೆ ಎಂದರು.
ದೇವನಹಳ್ಳಿ ಸಮೀಪ ಸುಮಾರು 60 ಎಕರೆ ಪ್ರದೇಶದಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ವಿವಿಧ ಕ್ರೀಡೆಗಳನ್ನು ಒಂದೇ ಸಮಗ್ರ ಕ್ರೀಡಾ ಮೂಲಸೌಕರ್ಯದಲ್ಲಿ ನಡೆಸಲು ಅನುಕೂಲವಾಗುವಂತೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಕರ್ನಾಟಕವನ್ನು ದೇಶದ ಪ್ರಮುಖ ಕ್ರೀಡಾ ರಾಜ್ಯವಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.
ರಾಜ್ಯದಲ್ಲಿ ಯಾವ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಾಗುತ್ತಿದೆಯೋ ಅಂತಹ ಕ್ರೀಡೆಗಳಿಗೆ ವಿಶೇಷ ಉತ್ತೇಜನ ನೀಡಲಾಗುವುದು. ಬ್ಯಾಸ್ಕೆಟ್ಬಾಲ್ನಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡುತ್ತಿದೆ. ಈಜು ಕ್ರೀಡೆಯಲ್ಲಿಯೂ ಕರ್ನಾಟಕವೂ ರಾಷ್ಟ್ರೀಯ ಮಟ್ಟದಲ್ಲಿ ಕಳೆದ 33 ವರ್ಷಗಳಿಂದ ಚಾಂಪಿಯನ್ ಆಗಿರುವುದು ರಾಜ್ಯದ ಕ್ರೀಡಾ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಕಂಠೀರವ ಕ್ರೀಡಾಂಗಣ ಮೇಲ್ದರ್ಜೆಗೆ:
ನಾನು ಕ್ರೀಡಾಪಟುವಾಗಿ ಮತ್ತು ಕ್ರೀಡಾ ಸಚಿವನಾಗಿ ರಾಜ್ಯದ ಕ್ರೀಡಾ ಅಭಿವೃದ್ಧಿಗೆ ನನ್ನದೇ ಆದ ದೂರದೃಷ್ಟಿ ಇಟ್ಟುಕೊಂಡು, ನೀಲನಕ್ಷೆಯನ್ನು ರೂಪಿಸಿಕೊಂಡಿದ್ದೇನೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದ್ದು, ಸುಮಾರು ರೂ. 5,000 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಬ್ಯಾಸ್ಕೆಟ್ಬಾಲ್ ಕ್ರೀಡೆಯ ಅಭಿವೃದ್ಧಿಗಾಗಿ ಸರ್ಕಾರ 5 ಎಕರೆ ಜಾಗವನ್ನು ನೀಡಿದೆ. ಕತಾರ್ನಲ್ಲಿ ವಿಶ್ವಕಪ್ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಶಿಪ್ಗಾಗಿ ಎಂಟು ಕ್ರೀಡಾಂಗಣಗಳನ್ನು ನಿರ್ಮಿಸಿದ್ದಾರೆ. ಎಲ್ಲವೂ ಅತ್ಯುತ್ತಮ ಗುಣಮಟ್ಟದ ಮೂಲಸೌಕರ್ಯವನ್ನು ಹೊಂದಿವೆ. ಅದೇ ರೀತಿಯ ಆಧುನಿಕ ಮೂಲಸೌಕರ್ಯವನ್ನು ಕರ್ನಾಟಕದಲ್ಲಿಯೂ ನಿರ್ಮಿಸಿದರೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ಶಿಪ್ಗಳನ್ನು ರಾಜ್ಯದಲ್ಲಿ ಆಯೋಜಿಸಲು ಸಾಧ್ಯವಾಗಲಿದೆ ಎಂದರು.
ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸಿದ್ಧತೆ:
ಗುಜರಾತ್ನ ಅಹಮದಾಬಾದ್ನಲ್ಲಿ ಕಾಮನ್ವೆಲ್ತ್ ಗೇಮ್ಸ್ ನಡೆಯಲಿದ್ದು, ಈವೇಳೆ ಕಂಠೀರವ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸಲು ಸಾಧ್ಯವಾದರೆ ಕೆಲವು ಕ್ರೀಡಾ ಸ್ಪರ್ಧೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸುವ ಅವಕಾಶ ದೊರೆಯಲಿದೆ. ಇದರಿಂದ ಕರ್ನಾಟಕದ ಕ್ರೀಡಾ ಸಾಮರ್ಥ್ಯವನ್ನು ದೇಶ-ವಿದೇಶಗಳಿಗೆ ಪರಿಚಯಿಸಲು ಸಾಧ್ಯವಾಗಲಿದೆ ಎಂದರು.
ಕರ್ನಾಟಕದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ, ಮೂಲಸೌಕರ್ಯ, ಉದ್ಯೋಗದಲ್ಲಿ ಮೀಸಲಾತಿ ಹಾಗೂ ಆರ್ಥಿಕ ಪ್ರೋತ್ಸಾಹ ಸೇರಿದಂತೆ ಅಗತ್ಯ ಎಲ್ಲ ರೀತಿಯ ನೆರವು ಒದಗಿಸುವ ಮೂಲಕ ರಾಜ್ಯವನ್ನು ದೇಶದ ಪ್ರಮುಖ ಕ್ರೀಡಾ ಕೇಂದ್ರಸ್ಥಾನವಾಗಿ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಸಮಯ ಮತ್ತು ಶ್ರಮವನ್ನು ಗೋವಿಂದರಾಜ್ ಅವರು ಮೀಸಲಿಟ್ಟು ಕೆಲಸ ಮಾಡುತ್ತಿದ್ದಾರೆ. ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೂ ಅದನ್ನು ಪ್ರಾಮಾಣಿಕವಾಗಿ ಮತ್ತು ಸಂಪೂರ್ಣವಾಗಿ ಮಾಡದಿದ್ದರೆ ಅವರಿಗೆ ಸಮಾಧಾನವಿರುವುದಿಲ್ಲ. ಕರ್ನಾಟಕದಲ್ಲಿ ಬ್ಯಾಸ್ಕೆಟ್ಬಾಲ್ ಕ್ರೀಡೆ ಬೆಳೆದಿರುವುದಕ್ಕೆ ಗೋವಿಂದರಾಜ್ ಅವರ ಹಲವು ವರ್ಷಗಳ ನಿರಂತರ ಪ್ರಯತ್ನ ಮತ್ತು ಪರಿಶ್ರಮ ಇದೆ ಎಂದರು.
ಬ್ಯಾಸ್ಕೆಟ್ಬಾಲ್ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶದಿಂದ ಒಳಾಂಗಣ ಕ್ರೀಡಾಂಗಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಅವರ ಮನವೊಲಿಸಿ ರಾಜ್ಯದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಯ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜು, ಕ್ರೀಡಾ ಇಲಾಖೆಯ ಆಯುಕ್ತರಾದ ಎಂ.ಎನ್.ಅನುಚೇತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
