ಬೆಂಗಳೂರು: ಕರ್ನಾಟಕದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳನ್ನು ಸಬಲೀಕರಣಗೊಳಿಸುವ ಹಾಗೂ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಬಹುತೇಕ ಈ ವರ್ಷಾಂತ್ಯದೊಳಗೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಸಭಾನಾಯಕರು ಹಾಗೂ ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ, ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಮಂಜುನಾಥ ಭಂಡಾರಿ ಅವರು ನಿಯಮ-72ರ ಅಡಿಯಲ್ಲಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರವಾಗಿ ಉತ್ತರಿಸಿದ ಸಚಿವರು, ನಗರಾಭಿವೃದ್ಧಿ ಇಲಾಖೆಯು ಕೆಲವು ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿ/ಪುರಸಭೆ/ನಗರಸಭೆಗಳಾಗಿ ಮೇಲ್ದರ್ಜೆಗೇರಿಸಿರುವುದರಿಂದ 10 ಜಿಲ್ಲೆಗಳ ಹಾಗೂ 14 ತಾಲೂಕುಗಳ ವ್ಯಾಪ್ತಿಯಲ್ಲಿ ಕ್ಷೇತ್ರಗಳನ್ನು ಮರುವಿಂಗಡಿಸಲಾಗಿದೆ.
ಪ್ರಸ್ತುತ 31 ಜಿಲ್ಲಾ ಪಂಚಾಯತಿ ಮತ್ತು 239 ತಾಲೂಕು ಪಂಚಾಯತಿಗಳ ಕ್ಷೇತ್ರಗಳ ಗಡಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ. ತಾ.ಪಂ ಮತ್ತು ಜಿ.ಪಂ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿ ವರ್ಷಾಂತ್ಯದೊಳಗೆ ಚುನಾವಣೆ ನಡೆಸಲಾಗುವುದು.
2026ರ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಮತ್ತು ಸದಸ್ಯ ಸ್ಥಾನಗಳನ್ನು ನಿಗದಿಪಡಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಅವಧಿ ಮುಗಿದ ಗ್ರಾ.ಪಂ.ಗಳಿಗೂ ವರ್ಷಾಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.
ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳಿಗೆ ಪಕ್ಷದ ಚಿಹ್ನೆಯಡಿ ಚುನಾವಣೆ ನಡೆಯಲಿದೆ. ಗ್ರಾಮ ಪಂಚಾಯತಿಗಳಿಗೆ ಅಧಿನಿಯಮದ ಪ್ರಕರಣ 7ರಂತೆ ಪಕ್ಷೇತರ ಆಧಾರದಲ್ಲಿ (ಪಕ್ಷದ ಚಿಹ್ನೆ ರಹಿತ) ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ‘ಕನಿಷ್ಠ ವೇತನ ಕಾಯ್ದೆ’ಯಡಿ ವೇತನ ನೀಡಲಾಗುತ್ತಿದ್ದು, 2020ರ ಸೇವಾ ನಿಯಮಗಳ ಅಡಿಯಲ್ಲಿ ಅನುಕಂಪದ ನೇಮಕಾತಿ, ನಿವೃತ್ತಿ ಉಪದಾನ ಹಾಗೂ ಸೇವಾ ಷರತ್ತುಗಳನ್ನು ನಿಗದಿಪಡಿಸಲಾಗಿದೆ.
ಗ್ರಾಮ ಪಂಚಾಯತಿಗಳು ಸ್ಥಳೀಯ ಪ್ರಾಧಿಕಾರಗಳಾಗಿರುವುದರಿಂದ, ಆಡಳಿತಾತ್ಮಕವಾಗಿ ಗ್ರಾ.ಪಂ. ಸಿಬ್ಬಂದಿಗಳನ್ನು ನೇರವಾಗಿ ‘ಸಿ’ ಮತ್ತು ‘ಡಿ’ ದರ್ಜೆಯ ಸರ್ಕಾರಿ ನೌಕರರೆಂದು ಪರಿಗಣಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
