ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ತಿಳಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು ಸಚಿವರು ಸಮಗ್ರವಾಗಿ ಚರ್ಚಿಸಿದರು.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳು ಕಡಲತೀರ, ಧಾರ್ಮಿಕ ಹಾಗೂ ಸಾಂಸ್ಕೃತಿಕ ತಾಣಗಳು, ಪ್ರಕೃತಿ ಪ್ರವಾಸೋದ್ಯಮ ಸೇರಿದಂತೆ ವೈವಿಧ್ಯಮಯ ಪ್ರವಾಸೋದ್ಯಮ ಸಂಪನ್ಮೂಲಗಳನ್ನು ಹೊಂದಿವೆ. ಈ ಸಾಮರ್ಥ್ಯವನ್ನು ಬಳಸಿಕೊಂಡು ಸ್ಥಳೀಯ ಆರ್ಥಿಕತೆ, ಹೂಡಿಕೆ ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ನೀತಿ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಹೂಡಿಕೆಗೆ ಸಿಂಗಲ್ ವಿಂಡೋ ವ್ಯವಸ್ಥೆಗೆ ಸಲಹೆ
ಸಭೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮುಂದಾಗುವವರಿಗೆ ವಿವಿಧ ಇಲಾಖೆಗಳ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅಗತ್ಯವನ್ನು ಜನಪ್ರತಿನಿಧಿಗಳು ಪ್ರಸ್ತಾಪಿಸಿದರು.
ಶಾಸಕರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಕರಾವಳಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತೇಜನ ನೀಡಲು ಸಿಂಗಲ್ ವಿಂಡೋ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದರು. ವಿವಿಧ ಅನುಮತಿಗಳು ಮತ್ತು ಇಲಾಖೆಗಳ ಸಮನ್ವಯಕ್ಕೆ ಸರಳ ವ್ಯವಸ್ಥೆ ರೂಪಿಸುವುದು ಹೊಸ ಹೂಡಿಕೆಗಳನ್ನು ಆಕರ್ಷಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
CRZ, ಪರಿಸರ ಹಾಗೂ ಅರಣ್ಯ ನಿಯಮಗಳ ಕುರಿತು ಚರ್ಚೆ
ಮಂಗಳೂರು ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿದ್ದರೂ, CRZ, ಪರಿಸರ ಸೂಕ್ಷ್ಮ ವಲಯ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ನಿಯಮಗಳಿಂದಾಗಿ ಕೆಲವು ಪ್ರವಾಸೋದ್ಯಮ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಎದುರಾಗುತ್ತಿವೆ ಎಂದು ತಿಳಿಸಿದರು.
ಕರಾವಳಿ ಪ್ರದೇಶದ ಪರಿಸರ ಸಂರಕ್ಷಣೆಯನ್ನು ಖಚಿತಪಡಿಸಿಕೊಂಡೇ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗುವ ರೀತಿಯಲ್ಲಿ ಸಂಬಂಧಿತ ನಿಯಮಗಳು ಮತ್ತು ಅನುಮತಿ ಪ್ರಕ್ರಿಯೆಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.
ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಜಿಲ್ಲೆಯಲ್ಲಿ ಹೋಟೆಲ್ಗಳು ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳನ್ನು ವಿಸ್ತರಿಸಲು ಅನುಕೂಲಕರ ವಾತಾವರಣ ನಿರ್ಮಿಸುವ ಅಗತ್ಯವನ್ನು ಪ್ರಸ್ತಾಪಿಸಿದರು. ಪ್ರವಾಸಿಗರ ಬೇಡಿಕೆ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆಗೆ ಅಗತ್ಯವಿರುವ ಸಮಯ ಮತ್ತು ಸಂಬಂಧಿತ ವ್ಯವಸ್ಥೆಗಳ ಕುರಿತು ನೀತಿಯಲ್ಲಿ ಸೂಕ್ತ ಅವಕಾಶ ಕಲ್ಪಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳಾದ ಡಾ. ರಾಮ್ ಪ್ರಸಾತ್ ಮನೋಹರ್ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಹರೀಶ್ ಪೂಂಜಾ, ಉಮಾನಾಥ್ ಎ. ಕೋಟ್ಯಾನ್, ಭರತ್ ಶೆಟ್ಟಿ ವೈ., ಡಿ. ವೇದವ್ಯಾಸ ಕಾಮತ್, ರಾಜೇಶ್ ನಾಯಕ್ ಯು., ಶ್ರೀಮತಿ ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ, ಯಶ್ಪಾಲ್ ಸುವರ್ಣ ಹಾಗೂ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಿ ತಮ್ಮ ಕ್ಷೇತ್ರಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಸಲಹೆಗಳನ್ನು ನೀಡಿದರು.
ಸೆಪ್ಟೆಂಬರ್ 7ರೊಳಗೆ ಕರಡು ನೀತಿ
ಸಭೆಯಲ್ಲಿ ವ್ಯಕ್ತವಾದ ಸಲಹೆಗಳನ್ನು ಪರಿಗಣಿಸಿ ಕರಡು ನೀತಿಯನ್ನು ಸಿದ್ಧಪಡಿಸಲಾಗುವುದು ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.
“ಕರಾವಳಿ ಮತ್ತು ಮಲೆನಾಡು ಕರ್ನಾಟಕದ ಪ್ರವಾಸೋದ್ಯಮದ ಪ್ರಮುಖ ಆಸ್ತಿಗಳಾಗಿವೆ. ಇಲ್ಲಿನ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸ್ಥಳೀಯ ಅಗತ್ಯತೆಗಳು ಮತ್ತು ಜನಪ್ರತಿನಿಧಿಗಳ ಸಲಹೆಗಳನ್ನು ಒಳಗೊಂಡ ಸಮಗ್ರ ನೀತಿ ಅಗತ್ಯವಿದೆ. ಇಂದು ನಡೆದ ಸಭೆಯಲ್ಲಿ ಹಲವು ಪ್ರಮುಖ ಸಲಹೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿ ನೀತಿಯಲ್ಲಿ ಅಳವಡಿಸಲಾಗುವುದು. ಸೆಪ್ಟೆಂಬರ್ 7ರೊಳಗೆ ಕರಡು ನೀತಿಯನ್ನು ಸಿದ್ಧಪಡಿಸುವ ಗುರಿ ಹೊಂದಿದ್ದೇವೆ,” ಎಂದು ಸಚಿವರು ತಿಳಿಸಿದರು.
ಮುಂದಿನ ಹಂತದಲ್ಲಿ ಕರಡು ನೀತಿಯ ಕುರಿತು ಮತ್ತಷ್ಟು ಸಮಾಲೋಚನೆ ನಡೆಸಿ ಅಂತಿಮ ರೂಪ ನೀಡಲಾಗುವುದು. ಮಂಗಳೂರಿನಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ನೀತಿಗೆ ಸಂಬಂಧಿಸಿದ ಅಂತಿಮ ನಿರ್ಧಾರ ಕೈಗೊಳ್ಳುವ ಕುರಿತು ಪರಿಶೀಲಿಸಲಾಗುವುದು ಎಂದು ಸಚಿವರು ಹೇಳಿದರು.
