ಬೆಂಗಳೂರು: ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದ್ದು, ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ.
ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್ ಸಿಗ್ನಲ್ ಜಾಮರ್ಗಳು ಹಾಗೂ ಕೈದಿಗಳ ದೂರವಾಣಿ ಕರೆ ವ್ಯವಸ್ಥೆ (Prisoner Calling System) ಸೇರಿದಂತೆ ಹಲವು ಆಧುನಿಕ ಉಪಕರಣಗಳನ್ನು ಅಳವಡಿಸಲಾಗುವುದು. ಇದರಿಂದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಭದ್ರತಾ ಮೇಲ್ವಿಚಾರಣೆಯನ್ನು ಪರಿಣಾಮಕಾರಿಗೊಳಿಸಲು ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
“ಬದಲಾಗುತ್ತಿರುವ ಸವಾಲುಗಳಿಗೆ ಅನುಗುಣವಾಗಿ ಕಾರಾಗೃಹ ಇಲಾಖೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವುದು ಅಗತ್ಯ. ಸುರಕ್ಷತೆ ಮತ್ತು ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ,” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
