ಬೆಳಗಾವಿ, ಸುವರ್ಣ ವಿಧಾನಸೌಧ: ರಾಜ್ಯದ 2025-30 ಕೈಗಾರಿಕಾ ನೀತಿಯು ರಾಜ್ಯದ ಸಮಗ್ರ ಅಭಿವೃದ್ಧಿ ಗುರಿಯೊಂದಿಗೆ ಬೆಂಗಳೂರಿನಿಂದ ಹೊರಗಡೆ ಕೈಗಾರಿಕೆಯಲ್ಲಿ ಹಿಂದುಳಿದ ಪ್ರದೇಶವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.
ವಿಧಾನ ಪರಿಷತ್ ನಲ್ಲಿಂದು ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಹಿಂದುಳಿದ ತಾಲ್ಲೂಕುಗಳಲ್ಲಿ ಹೂಡಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೈಗಾರಿಕಾ ನೀತಿಯಲ್ಲಿ ರಾಜ್ಯದ ಜಿಲ್ಲೆಗಳನ್ನು ಮೂರು ವಲಯಗಳಾಗಿ ವರ್ಗಿಕರಿಸಿದೆ. ಕೈಗಾರಿಕೆಯಲ್ಲಿ ಹಿಂದುಳಿದ ತಾಲ್ಲೂಕುಗಳು/ಜಿಲ್ಲೆಗಳನ್ನು ವಲಯ-1 ಮತ್ತು ವಲಯ-2 ರಲ್ಲಿ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ವಲಯ-3 ರಲ್ಲಿ ವರ್ಗೀಕರಿಸಲಾಗಿದೆ.
ರಾಜ್ಯದ ಸಮತೋಲಿನ ಕೈಗಾರಿಕಾ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೈಗಾರಿಕೆಯಲ್ಲಿ ಹಿಂದುಳಿದ ಜಿಲ್ಲೆಗಳು/ತಾಲ್ಲೂಕುಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುತ್ತಿದೆ.
ದೇಶ ವಿದೇಶಗಳ ಹಲವಾರು ಪತಿಷ್ಠಿತ ಬಂಡವಾಳ ಕಂಪನಿಗಳೊಂದಿಗೆ ಕರ್ನಾಟಕದಲ್ಲಿ ಹೂಡಲು ಸಭೆಗಳನ್ನು ನಡೆಸಲಾಗುತ್ತಿದೆ.
ಕೈಗಾರಿಕೆಗಳನ್ನು ಪ್ರಾರಂಭಿಸಲು ಬೇಕಾಗಿರುವ ಭೂಮಿ ಖರೀದಿ ಪ್ರಕ್ರಿಯೆ ಸರಳೀಕರಣಗೊಳಿಸಲಾಗಿದೆ.
ಕೈಗಾರಿಕೆಗಳನ್ನು ಪ್ರಾರಂಭಿಸಲು ಬೇಕಾಗಿರುವ ರಾಜ್ಯ ಎನ್.ಒ.ಸಿ/ಒಪ್ಪಿಗೆಗಳನ್ನು ಸ್ವಯಂಘೋಷಣ ಪತ್ರದ ಆಧಾರದ ಮೇಲೆ ಪಡೆಯಲು 3 ವರ್ಷಗಳವರೆಗೆ ವಿಸ್ತರಿಸಿ ಕರ್ನಾಟಕ ಕೈಗಾರಿಕೆಗಳ (ಸೌಲಭ್ಯ) ಅಧಿನಿಯಮ 2002ಕ್ಕೆ ತಿದ್ದುಪಡಿ ತರಲಾಗಿದೆ.
ಅಲ್ಲದೆ, ಕರ್ನಾಟಕ ಕ್ಲೀನ್ ಮೊಬಿಲಿಟಿ ಪಾಲಿಸಿ 2025-30 ಹಾಗೂ ಕರ್ನಾಟಕ ಏರೋಸ್ಪೇಸ್ & ಡಿಫೆನ್ಸ್ ಪಾಲಿಸಿ 2022-27 ನ್ನು ಸಹ ಹೊರತಂದಿದ್ದು, ಈ ನೀತಿಗಳಡಿ ವಲಯವಾರು ಕೈಗಾರಿಕೆಗಳಿಗೆ ಆಕರ್ಷಕ ರಿಯಾಯಿತಿ ಹಾಗೂ ಉತ್ತೇಜಗಳನ್ನು ಒದಗಿಸಲಾಗುತ್ತಿದೆ. ಅನುಮೋದಿತ ಕೈಗಾರಿಕೆಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅನುಷ್ಠಾನಗೊಳ್ಳುತ್ತಿವೆ.
ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ (2022-23 ರಿಂದ ಅಕ್ಟೋಬರ್ -2025ರ ಅಂತ್ಯದವರೆಗೆ) ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಹಾಗೂ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಗಳಲ್ಲಿ ಒಟ್ಟು 1888 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ರೂ. 5,03,539 ಕೋಟಿ ಮೊತ್ತದ ಬಂಡವಾಳ ಹೂಡಿಕೆಯಾಗಲಿದ್ದು ಮತ್ತು 6,92,591 ಜನರಿಗೆ ಉದ್ಯೋಗಾವಕಾಶಗಳನ್ನು ನಿರೀಕ್ಷಿಸಲಾಗಿದೆ.
ಇವುಗಳ ಪೈಕಿ 67 ಯೋಜನೆಗಳು ಅನುಷ್ಠಾನಗೊಂಡಿದ್ದು ಇವುಗಳಿಂದ ರೂ. 66435.09 ಕೋಟಿ ಮೊತ್ತದ ಬಂಡವಾಳ ಹೂಡಿಕೆಯಾಗಿದೆ ಹಾಗೂ 93,925 ಸಂಖ್ಯೆಯ ಉದ್ಯೋಗ ಸೃಜನೆಯಾಗಿದೆ.
ಉಳಿದ ಯೋಜನೆಗಳು ವಿವಿಧ ಅನುಷ್ಠಾನ ಹಂತಗಳಲ್ಲಿದ್ದು, ಇವೆಲ್ಲವೂ ಬೃಹತ್ ಕೈಗಾರಿಕೆಗಳಾಗಿರುವುದರಿಂದ, ಅನುಷ್ಠಾನಕ್ಕೆ ಕನಿಷ್ಠ 3-5 ವರ್ಷಗಳು ಬೇಕಾಗಿರುತ್ತದೆ ಎಂದರು.
