ಬೆಂಗಳೂರು:ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಅಲ್ಲದೆ, 1,252 ಕೋಟಿ ರೂ. ಖರ್ಚು ಮಾಡಿ, 8,355 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ರಾಜ್ಯದ ಯಾವುದೇ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ ಎಂದಾದರೆ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇಲಾಖೆಯ ಬಿಇಒ, ಡಿಡಿಪಿಐ ಮತ್ತಿತರ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರು ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಪಾಯಕಾರಿ ಸ್ಥಿತಿಯಲ್ಲಿರುವ ಶಾಲೆಗಳ ಕಟ್ಟಡದ ದುರಸ್ತಿಗೆ ತುರ್ತು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಕ್ಕಳು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿಗದಿತವಾಗಿ ಶಾಲೆಗಳ ಗುಣಮಟ್ಟದ ಬಗ್ಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.
ಕಲ್ಬುರ್ಗಿ ಜಿಲ್ಲೆ ಸಂಗೋಳಗಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ತಾರಸಿಯ ಗಾರೆ ಕುಸಿದಿರುವುದು ಮತ್ತು ಕಲ್ಬುರ್ಗಿ ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನ ಚಾವಣಿ ಕುಸಿದಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈಗಾಲೇ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಸಚಿವರು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
2026-27 ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 59 ಸರ್ಕಾರಿ ಶಾಲೆಗಳನ್ನು ದುರಸ್ತಿ ಪಡಿಸಲಾಗುತ್ತಿದೆ. ₹121.07 ಕೋಟಿ ವೆಚ್ಚದಲ್ಲಿ 55 ತರಗತಿ ಕೊಠಡಿಗಳ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.
2024-25ನೇ ಸಾಲಿನಲ್ಲಿ 248 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 978 ತರಗತಿ ಕೂರಠಡಿಗಳ ದುರಸ್ತಿಗಾಗಿ ರೂ.30.21 ಕೋಟಿಗಳನ್ನು ಬಿಡುಗಡ ಮಾಡಲಾಗಿತ್ತು. 2024-25ನೇ ಸಾಲಿಗೆ 118 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ತಲಾ 01 ರಂತೆ ಒಟ್ಟು 118 ಶೌಚಾಲಯ ಬ್ಲಾಕ್ ನಿರ್ಮಾಣ ಮಾಡಲು ರೂ.10.00 ಕೋಟಿಗಳನ್ನು ಬಿಡುಗಡೆ ಮಾಡಲಾಗಿತ್ತು.
2025-26ನೇ ಸಾಲಿನಲ್ಲಿ 117 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 266 ತರಗತಿ ಕೂಠಡಿ ನಿರ್ಮಾಣ ಮಾಡಲು ರೂ.75.98 ಕೋಟಿ , 96 ಸರ್ಕಾರಿ ಪದವಿ. ಪೂರ್ವ ಕಾಲೇಜುಗಳಿಗೆ 267 ತರಗತಿ ಕೂಠಡಿ ದುರಸ್ತಿಗಾಗಿ ರೂ 5.24 ಕೋಟಿ ಹಾಗೂ 67 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 123 ಶೌಚಾಲಯ ಬ್ಲಾಕ್ಗಳ ನಿರ್ಮಾಣಕ್ಕಾಗಿ 12.60
ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಶ್ರೀ ಮಧು ಬಂಗಾರಪ್ಪ ಸದನಕ್ಕೆ ವಿವರಿಸಿದ್ದಾರೆ.
