ಬೆಂಗಳೂರು: 2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ನಿಯಮಗಳನ್ನು ಸಡಿಲಿಸಿ ವಿನಾಯಿತಿ ನೀಡುವ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ರಚಿಸಲಾಗಿರುವ ವಿಶೇಷ ಸದನ ಸಮಿತಿಯ ಮಧ್ಯಂತರ ವರದಿಯನ್ನು ಸಮಿತಿಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಬುಧವಾರ ಸಲ್ಲಿಸಿದರು.
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಪುಟ್ಟಣ್ಣ ಅವರು ಮಧ್ಯಂತರ ವರದಿಯನ್ನು ಸಚಿವರಿಗೆ ಹಸ್ತಾಂತರಿಸಿದರು.
ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಇರುವ ನಿಯಮಗಳು, ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ನಿಯಮ ಸಡಿಲಿಕೆಗೆ ಸಂಬಂಧಿಸಿದ ಅಂಶಗಳನ್ನು ಸಮಿತಿ ಪರಿಶೀಲಿಸಿ ಮಧ್ಯಂತರ ವರದಿಯಲ್ಲಿ ಶಿಫಾರಸುಗಳನ್ನು ಒಳಗೊಂಡಿದೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಉಪಸ್ಥಿತರಿದ್ದರು.
