ಬೆಂಗಳೂರು: ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅವರ ನೇತೃತ್ವದ ಸರ್ಕಾರವು ಇಂದಿಗೆ 100 ದಿನಗಳನ್ನು ಪೂರೈಸಿದೆ. ಅದರ ಜ್ಞಾಪಕಾರ್ಥವಾಗಿ ಸರ್ಕಾರ ಈ ಆಚರಣೆಯನ್ನು ಮಾಡುತ್ತಿದೆ. 100 ದಿನಗಳು, ಇದೊಂದು ಸಂಭ್ರಮಾಚರಣೆಯಲ್ಲ; ಈ 100 ದಿನಗಳಲ್ಲಿ ನಾವು ಸರಿಯಾದ ದಾರಿಯಲ್ಲಿ ನಡೆಯುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಜನರ ಮುಂದಿಡುವಂತಹ ಒಂದು ಜವಾಬ್ದಾರಿಯಾಗಿದೆ. ಆ ಜವಾಬ್ದಾರಿಯನ್ನು ಈ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಆಯೋಜಿಸಿದ್ದ “ದೃಢ ಕರ್ನಾಟಕದ ಸಂಕಲ್ಪ – 100 ದಿನಗಳ ಯಶಸ್ವಿ ಪೂರೈಕೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿದ್ದೇವೆ. ಜನರು ಇಲ್ಲಿ ಮಾಲೀಕರು, ನಾವು ಜನರಿಗೆ ಏನು ವಾಗ್ದಾನಗಳನ್ನು ಕೊಟ್ಟಿದ್ದೇವೆ, ಆ ವಾಗ್ದಾನಗಳನ್ನು ಜಾರಿ ಮಾಡುತ್ತಿದ್ದೇವೆಯೋ? ಇಲ್ಲವೋ? ಎನ್ನುವುದು ಅದು ಬಹಳ ಮುಖ್ಯ. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಸಮ ಸಮಾಜವನ್ನು ನಿರ್ಮಾಣ ಮಾಡಬೇಕು. ನಾವು ಸಮ ಸಮಾಜ ನಿರ್ಮಾಣ ಮಾಡದೆ ಹೋದರೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆಯುತ್ತಿದ್ದೇವೆ ಎಂಬ ಭಾವನೆಯನ್ನು ವ್ಯಕ್ತವಾಗುತ್ತದೆ ಎಂದರು.
ಸಮಾಜದಲ್ಲಿ ಇರುವ ಅಸಮಾನತೆ, ಬಡತನ, ನಿರುದ್ಯೋಗ, ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಹೆಚ್ಚು ಮಾಡುವಂತಹ ಪ್ರಯತ್ನವನ್ನು ಮಾಡಬೇಕು. ನಾವು ಅಧಿಕಾರಕ್ಕೆ ಬಂದು ಸೆಪ್ಟೆಂಬರ್ 14ಕ್ಕೆ 3 ವರ್ಷ 4 ತಿಂಗಳು ಪೂರೈಸುತ್ತದೆ. ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಇಂದಿಗೆ 100 ದಿನಗಳು ಆಗುತ್ತದೆ. 100 ದಿನದಲ್ಲಿ ಏನು ಮಾಡಿದ್ದೇನೆ ಎಂಬ ಕೈಪಿಡಿ ಇಂದು ಬಿಡುಗಡೆಯಾಗಿದೆ. ಮುಖ್ಯವಾದಂತಹ ಇಲಾಖೆಗಳಲ್ಲಿ ಮಾಡಿರುವಂತಹ ಸಾಧನೆಗಳಳನ್ನು ಒಳಗೊಂಡಿರುವಂತಹ ಕೈಪಿಡಿಯನ್ನು ಜನರ ಮುಂದಿಟ್ಟಿದ್ದಾರೆ ಎಂದರು.
ಯಾವುದೇ ಸರ್ಕಾರ ಜನರಿಗೆ ಉತ್ತರದಾಯಿಯಾಗಿ ನಡೆದುಕೊಳ್ಳಬೇಕು. ಅದು ಸರ್ಕಾರದ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೂಲ ಆಶಯ. ನಾವು 2023ರ ಮೇ 20ರಂದು ಅಧಿಕಾರಕ್ಕೆ ಬಂದೆವು. ಅದಕ್ಕಿಂತ ಮುಂಚೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ ಶಿವಕುಮಾರ್ ಹಾಗೂ ನಾವೆಲ್ಲರೂ ಜನತೆಯ ಮುಂದೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೆವು. ಈ ವೇಳೆ ವಿರೋಧ ಪಕ್ಷದವರು ಟೀಕೆ ಮಾಡಿದ್ದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ, ಒಂದು ವೇಳೆ ಜಾರಿ ಮಾಡಿದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗುತ್ತದೆ ಎಂದಿದ್ದರು. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇರುವುದಿಲ್ಲ ಎಂದು ಬಹಳ ಟೀಕೆಗಳನ್ನು ಮಾಡಿದ್ದರು. ಪ್ರಧಾನ ಮಂತ್ರಿ ಆದಿಯಾಗಿ ಎಲ್ಲರೂ ಕೂಡ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದರು.
ನಾನು ಮುಖ್ಯಮಂತ್ರಿಯಾಗಿ, ಡಿ.ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ 3 ವರ್ಷಕ್ಕೂ ಹೆಚ್ಚು ಕಾಲ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ಮೊದಲನೇ ವರ್ಷದಲ್ಲಿಯೇ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಪ್ರತಿವರ್ಷ ಸುಮಾರು 52 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ಅಷ್ಟೊಂದು ಹಣವನ್ನು ಭರಿಸಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದರು. 52 ಸಾವಿರ ಕೋಟಿ ರೂ. ಹಣವನ್ನು ಸರ್ಕಾರವೇ ಭರಿಸಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ತಲುಪಿಸುವಂತ ಕೆಲಸವನ್ನು ಮಾಡಿತ್ತು ಎಂದು ತಿಳಿಸಿದರು.
ಸರ್ಕಾರ ಸಮಾಜದಲ್ಲಿ ಇರುವಂತಹ ಎಲ್ಲ ಜಾತಿಯ ಬಡವರನ್ನು ಗುರುತಿಸಿ 5 ಗ್ಯಾರಂಟಿ ಯೋಜನೆಗಳನ್ನು ಅವರಿಗೆ ತಲುಪಿಸುವ ಕೆಲಸವನ್ನು ಮಾಡಿದೆ. ಅದರ ಜೊತೆಗೆ ನಮ್ಮ ಪ್ರಣಾಳಿಕೆ ಮೂಲಕ ಇನ್ನೂ ಬೇರೆ ವಾಗ್ದಾನಗಳನ್ನು ಮಾಡಿದ್ದೆವು. ಅವುಗಳನ್ನು ಕೂಡ ಪೂರೈಸುವ ಕೆಲಸವನ್ನು ಮಾಡಲಾಯಿತು. ಅಭಿವೃದ್ಧಿ ಕೆಲಸಗಳಿಗೆ ಕೂಡ ಹಣವನ್ನು ಒದಗಿಸುವ ಕೆಲಸವನ್ನು ಮಾಡಿದ್ದೇವೆ. ಅಭಿವೃದ್ಧಿ ಕೆಲಸಗಳು ಯಾವುದೂ ಕುಂಠಿತವಾಗಿಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಬಜೆಟ್ ಅನ್ನು ರೂಪಿಸುತ್ತದೆ. ಉಳಿದ ಎಲ್ಲ ರಾಜಕೀಯ ಪಕ್ಷಗಳು ಪ್ರಣಾಳಿಕೆಯನ್ನು ಹೊರಡಿಸುತ್ತವೆ. ಆದರೆ ಅವುಗಳನ್ನು ಕಣ್ಣೆತ್ತಿಯೂ ನೋಡುವುದಿಲ್ಲ ಎಂದು ಟೀಕಿಸಿದರು.
ಪ್ರಣಾಳಿಕೆಯಲ್ಲಿ ಇರುವ ಭರವಸೆಗಳನ್ನು ಒಂದೇ ವರ್ಷದಲ್ಲಿ ಜಾರಿ ಮಾಡಬೇಕು ಎಂದೇನಿಲ್ಲ. 5 ವರ್ಷಗಳು ಅವಕಾಶವಿದೆ. ಆ 5 ವರ್ಷಗಳಲ್ಲಿ ಎಲ್ಲ ಭರವಸೆಗಳನ್ನು ಈಡೇರಿಸುವಂತಹ ಕೆಲಸವನ್ನು ಮಾಡಬೇಕು. ಉದಾಹರಣೆಗೆ 2013ರಲ್ಲಿ ನಾವು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ, ಪ್ರಣಾಳಿಕೆಯ ಮೂಲಕ ಜನರಿಗೆ 165 ವಾಗ್ದಾನಗಳನ್ನು ಕೊಟ್ಟಿದ್ದೇವು. ಅವುಗಳ ಪೈಕಿ 158ಕ್ಕೂ ಹೆಚ್ಚು ವಾಗ್ದಾನಗಳನ್ನು ಜಾರಿ ಮಾಡಿದ್ದೇವೆ. ಯಾವುದಾದರೂ ಪಕ್ಷ ಅಥವಾ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿಯವರು, ಜೆಡಿಎಸ್ನವರು ಸೇರಿದಂತೆ ಬೇರೆ ಯಾವ ಪಕ್ಷದವರೂ ಕೂಡ ಇದನ್ನು ಮಾಡಿಲ್ಲ. ನಾವು ಎಲ್ಲ ಭರವಸೆಗಳನ್ನು ಈಡೇರಿಸುವ ಜೊತೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಕೃಷಿಭಾಗ್ಯ, ಶೂ ಭಾಗ್ಯ, ಪಂಚ ಗ್ಯಾರಂಟಿ ಯೋಜನೆಗಳು ಹೀಗೆ ಅನೇಕ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆಎಂದು ನುಡಿದರು.
ಎಷ್ಟೇ ಟೀಕೆಗಳು ಬಂದರೂ, ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಯಾಕೆಂದರೆ ಗ್ಯಾರಂಟಿ ಯೋಜನೆಗಳು ಅಸಮಾನತೆಯನ್ನು ತೊಲಗಿಸುವಂತಹ ಕಾರ್ಯಕ್ರಮಗಳಾಗಿವೆ. ಹೀಗಾಗಿ ಅವುಗಳು ಮುಂದುವರಿಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ‘ಎಲ್ಲಿಯವರೆಗೆ ಈ ದೇಶದಲ್ಲಿ ಅಸಮಾನತೆ ಹೋಗುವುದಿಲ್ಲವೋ ಅಲ್ಲಿಯವರೆಗೆ ಸಮ ಸಮಾಜವನ್ನು ನಿರ್ಮಾಣವನ್ನು ಮಾಡಲು ಸಾಧ್ಯವಿಲ್ಲ’ ಎಂದಿದ್ದರು. ಸ್ವಾತಂತ್ರ್ಯ ಬಂದು ಇನ್ನೇನೂ 80 ವರ್ಷಗಳಾಗಲಿವೆ, ಸಂವಿಧಾನ ಬಂದು 76 ವರ್ಷಗಳಾಗಿ ಹೋಗಿದೆ. ಸಂವಿಧಾನದ ಆಶಯಗಳನ್ನು ಪೂರೈಸುವಂತದ್ದು ಯಾವುದೇ ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕಾಗುತ್ತದೆ ಎನ್ನುವ ಎಚ್ಚರಿಕೆಯ ನುಡಿಗಳನ್ನಾಡಿದರು.
ಎಲ್ಲ ಜನರಿಗೆ ಕೂಡ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಶಕ್ತಿಯನ್ನು ತುಂಬಬೇಕು. ಬಹುಶಃ ಕಾಂಗ್ರೆಸ್ ಪಕ್ಷದ ಧ್ಯೇಯ, ಸಿದ್ಧಾಂತ ಕಟ್ಟಕಡೆಯ ಜನರಿಗೂ ನ್ಯಾಯವನ್ನು ಒದಗಿಸಿಕೊಡುವಂತದ್ದಾಗಿದೆ. ಎಲ್ಲರಿಗೂ ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಮಾಡುವಂತದ್ದು ಸರ್ಕಾರದ ಕರ್ತವ್ಯ. ಸಂವಿಧಾನದ ಕರ್ತೃಗಳು ಈ ಕನಸನ್ನು ಕಂಡಿದ್ದರು, ಆ ಕನಸನ್ನು ನನಸಾಗಿ ಮಾಡುವಂತಹದ್ದು ನಮ್ಮ ಕರ್ತವ್ಯವಾಗಿದೆ ಎಂದರು.
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಅನೇಕ ಹೊಸ ಚಿಂತನೆಗಳು ಹಾಗೂ ಹೊಸ ಕಾರ್ಯಕ್ರಮಗಳನ್ನು ಜನರಿಗೆ ನೀಡುವ ಕೆಲಸ ಮಾಡುತ್ತಿದೆ. ಈ ಸರ್ಕಾರ ಸರಿಯಾದ ದಾರಿಯಲ್ಲಿ ನಡೆಯುತ್ತಿದೆ ಎಂದು ನನಗೆ ಅನಿಸುತ್ತಿದೆ ಎಂದ ಅವರು ಅದಕ್ಕಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಅವರ ಸಂಪುಟದ ಎಲ್ಲ ಸಚಿವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಇನ್ನೂ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲಾವಕಾಶವಿದೆ. ಉಳಿದಿರುವ ಅವಧಿಯಲ್ಲಿ ಸರ್ಕಾರ ಜನರಿಗೆ ನೀಡಿರುವ ಎಲ್ಲಾ ಭರವಸೆಗಳು ಹಾಗೂ ವಾಗ್ದಾನಗಳನ್ನು ಈಡೇರಿಸುವ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಕಾಂಗ್ರೆಸ್ನ ಇತಿಹಾಸವೇ ಬಡವರಿಗೆ ಶಕ್ತಿ ನೀಡುವಂತಹದ್ದು. ಸಮಾಜದಲ್ಲಿನ ದೌರ್ಜನ್ಯ ಮತ್ತು ಶೋಷಣೆಯನ್ನು ನಿಲ್ಲಿಸುವುದು, ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸುವುದು ಕಾಂಗ್ರೆಸ್ನ ಮೂಲ ಆಶಯವಾಗಿದೆ ಎಂದು ಪಕ್ಷದ ಧ್ಯೇಯೋದ್ದೇಶಗಳನ್ನು ಸ್ಮರಿಸಿದರು.
ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಈ ರಾಜ್ಯದ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದಾರೆ. ಹಾಗಾಗಿ ವಿರೋಧ ಪಕ್ಷಗಳು ಮಾಡುವ ಟೀಕೆಗಳಿಗೆ ಯಾವುದೇ ಕಾರಣಕ್ಕೂ ತಲೆಕೆಡಿಸಿಕೊಳ್ಳಬೇಡಿ ಎಂದು ಸಿದ್ದರಾಮಯ್ಯ ಅವರು ಸಿಎಂಗೆ ವಿಶ್ವಾಸ ತುಂಬಿದರು.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಮಾಡಿರುವ ಭ್ರಷ್ಟಾಚಾರ ನಮ್ಮ ಕಣ್ಣ ಮುಂದೆಯೇ ಇದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದು ವಿಪರ್ಯಾಸ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸರ್ಕಾರದಲ್ಲಿ ವಿಜಯೇಂದ್ರ ಅವರು ತಾವೇ ಮುಖ್ಯಮಂತ್ರಿ ಎಂಬಂತೆ ವರ್ತಿಸುತ್ತಿದ್ದರು. ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಅಂಥವರು ಇಂದು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದನ್ನು ನೋಡಿದಾಗ ನಗಬೇಕೋ, ಅಳಬೇಕೋ ಗೊತ್ತಾಗುವುದಿಲ್ಲ ಎಂದು ಇತಿಹಾಸವನ್ನು ನೆನಪಿಸಿದರು.
ಹತ್ತು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ನಡೆಯಿತು. ಈ ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇತ್ತು. ಆದರೆ ಅದರ ಬಗ್ಗೆ ಸಮರ್ಪಕವಾಗಿ ಚರ್ಚೆ ಮಾಡಲಿಲ್ಲ. ನಾಗೇಂದ್ರ ಅವರ ರಾಜೀನಾಮೆಗೆ ಪಾದಯಾತ್ರೆ ಮಾಡಿದರು. ಆದರೆ ರಾಜ್ಯ ಎದುರಿಸುತ್ತಿದ್ದ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಲ್ಲ. ಈಗ ಮತ್ತೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ರಾಜಕೀಯ ಗಿಮಿಕ್ ಅಷ್ಟೇ. ಯಾವ ಸಮಸ್ಯೆಗಾಗಿ ಈ ಪಾದಯಾತ್ರೆ? ಕೇವಲ ರಾಜಕೀಯ ಕಾರಣಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಸರ್ಕಾರವಾಗಲಿ, ಮುಖ್ಯಮಂತ್ರಿಗಳಾಗಲಿ ಇದಕ್ಕೆ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ಈ ಹಿಂದೆ ನಾನು, ಪರಮೇಶ್ವರ್ ಅವರು ಅನೇಕ ಬಾರಿ ಪಾದಯಾತ್ರೆ ಮಾಡಿದ್ದೇವೆ. ಕೂಡಲ ಸಂಗಮದವರೆಗೂ ಪಾದಯಾತ್ರೆ ಮಾಡಿದ್ದೇವೆ. ನಮ್ಮ ಪಾದಯಾತ್ರೆಗಳು ಜನರ ಸಮಸ್ಯೆಗಳಿಗಾಗಿ, ಜನರ ಹಿತಕ್ಕಾಗಿ ನಡೆದವು. ಆದರೆ ಬಿಜೆಪಿಯವರು ಇಂದು ಯಾವುದೇ ಜನಪರ ವಿಚಾರವಿಲ್ಲದೆ ಕೇವಲ ರಾಜಕೀಯಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಯಾವುದೇ ಜನಪರ ಕೆಲಸ ಮಾಡಲಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿದ್ದರು. ಈಗ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಯ ನಾಲ್ಕು ವರ್ಷಗಳ ಆಡಳಿತದಲ್ಲಿ ಇಬ್ಬರು ಮುಖ್ಯಮಂತ್ರಿಗಳು ಬದಲಾದರು. ಹಿಂದುಳಿದ ಜಾತಿಗಳಿಗಾಗಿ ಕೇವಲ ಐದು ಹಾಸ್ಟೆಲ್ಗಳನ್ನು ನಿರ್ಮಿಸಿದರು. ನಾವು ಅಧಿಕಾರದಲ್ಲಿದ್ದಾಗ 500ಕ್ಕೂ ಹೆಚ್ಚು ಹಾಸ್ಟೆಲ್ಗಳನ್ನು ನಿರ್ಮಿಸಿದ್ದೇವೆ. ಬಡವರಿಗೆ, ರೈತರಿಗೆ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ ಅವರು ಏನು ಮಾಡಲಿಲ್ಲ. ಇದೇ ನೋಡಿ ಅವರ ಇತಿಹಾಸ.
ಈಗಾಗಲೇ ರಾಜ್ಯದ ಬರಗಾಲದ ವಿಚಾರವಾಗಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. ಈ ಹಿಂದೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಕೇಂದ್ರದ ತಂಡ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿಲ್ಲ. ಕೊನೆಗೆ ನಾವು ಸುಪ್ರೀಂ ಕೋರ್ಟ್ನ ಮೆಟ್ಟಿಲೇರಬೇಕಾಯಿತು. ಅದರ ನಂತರ ಸುಮಾರು ಮೂರೂವರೆ ಸಾವಿರ ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿತ್ತು ಎಂದು ಕೇಂದ್ರದ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಆಕ್ರೋಶ ಹೊರಹಾಕಿದರು.
ಈಗಲೂ ನಾವು 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದೇವೆ. ಕೇಂದ್ರಕ್ಕೆ ಮನವಿ ಸಲ್ಲಿಸಬೇಕು. ಕೇಂದ್ರದ ತಂಡ ಬಂದು ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡಬೇಕು. ಆದರೆ ಕೇಂದ್ರದ ತಂಡ ಬಂದು ವರದಿ ನೀಡಿದ ನಂತರವೂ ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ ಎಂಬ ನಂಬಿಕೆ ನಮಗಿಲ್ಲ. ಕೊಟ್ಟರೂ ಕೂಡ 2000ನೇ ಇಸವಿಯಲ್ಲಿ ರೂಪಿಸಿದ ನಿಯಮಾವಳಿಗಳ ಪ್ರಕಾರವೇ ಅನುದಾನ ನೀಡಲಾಗುತ್ತದೆ. ಆ ನಿಯಮಾವಳಿಗಳನ್ನು ಬದಲಾಯಿಸಬೇಕು, ಇಲ್ಲವಾದರೆ ರಾಜ್ಯಕ್ಕೆ ಸಿಗುವ ಅನುದಾನ ಬಹಳ ಕಡಿಮೆಯಾಗುತ್ತದೆ ಎಂದು ನಾನು ಅನೇಕ ಬಾರಿ ಪ್ರಧಾನಮಂತ್ರಿಗಳಿಗೆ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೇನೆ. ಆದರೆ ಈವರೆಗೂ ಆ ನಿಯಮಾವಳಿಗಳನ್ನು ಬದಲಾವಣೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹೀಗಾಗಿ ಕೇಂದ್ರ ಸರ್ಕಾರ ನಿಮ್ಮ ನೆರವಿಗೆ ಧಾವಿಸುತ್ತದೆ ಎಂಬ ನಂಬಿಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಬೇಡಿ. ಕೇಂದ್ರದ ನೆರವಿಗಾಗಿ ಕಾಯುತ್ತಾ ಕುಳಿತುಕೊಳ್ಳಬೇಡಿ. ನೀವು ಈಗಾಗಲೇ ಯಾವ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೀರೋ, ಇನ್ನೂ ಯಾವುದಾದರೂ ತಾಲೂಕುಗಳನ್ನು ಘೋಷಣೆ ಮಾಡಬೇಕಿದ್ದರೆ ಅದನ್ನೂ ಮಾಡಿ. ಸೆಪ್ಟೆಂಬರ್ ತಿಂಗಳು ಮುಗಿದ ನಂತರ ಮಳೆ ಬರುವ ಸಾಧ್ಯತೆ ಕಡಿಮೆ. ನಮ್ಮ ಕೆರೆ-ಕಟ್ಟೆಗಳು ತುಂಬುವುದಿಲ್ಲ. ಆದ್ದರಿಂದ ಈ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಈಗಾಗಲೇ ನೀವು ರೂಪಿಸಿರುವ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತನ್ನಿ. ಹಳೆಯ ಕಾರ್ಯಕ್ರಮಗಳನ್ನೂ ಸಮರ್ಪಕವಾಗಿ ಜಾರಿಗೆ ತನ್ನಿ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿ ಎನ್ನುವ ಕಿವಿಮಾತು ಹೇಳಿದರು.
ನನಗೆ ಸಂಪೂರ್ಣ ವಿಶ್ವಾಸವಿದೆ. ನಿಮ್ಮ ಸರ್ಕಾರ ಜನಪರ ಸರ್ಕಾರ ಎಂಬ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಜನರಲ್ಲಿ ಈ ಭಾವನೆ ಮೂಡಿಸುವ ಕೆಲಸವನ್ನು ನೀವು ಮಾಡಬೇಕು. ಈ ನಾಡನ್ನು ದೃಢ ಕರ್ನಾಟಕವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನೀವು ಹೊರಟಿದ್ದೀರಿ. ಅದರ ಕೈಪಿಡಿಯನ್ನೂ ಬಿಡುಗಡೆ ಮಾಡಲಾಗಿದೆ. ಯಾರು ಏನೇ ಮಾಡಿದರೂ, ಜನರ ಮುಂದೆ ಹೋಗುವಂತಹ ಕೆಲಸವನ್ನು ಮಾಡಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಮ್ಮ ಮಾಲೀಕರು. ಅವರ ಮುಂದೆ ಸರ್ಕಾರದ ಕೆಲಸಗಳನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡಿ. ‘ಪ್ರಜಾ ಸೇವೆ’ ಎಂಬ ಹೊಸ ಕಾರ್ಯಕ್ರಮ ತುಂಬಾ ಒಳ್ಳೆಯ ಕಾರ್ಯಕ್ರಮ. ಅದನ್ನು ಕಾಟಾಚಾರಕ್ಕೆ ಮಾಡಬೇಡಿ. ಪರಿಣಾಮಕಾರಿಯಾಗಿ ಮುಂದುವರಿಸಿ. ಪ್ರತಿಯೊಬ್ಬ ಸಚಿವರೂ ತಮ್ಮ ತಮ್ಮ ಜಿಲ್ಲೆಗಳಲ್ಲಿ ಜನಸಂದರ್ಶನ ನಡೆಸುವ ಕೆಲಸ ಮಾಡಬೇಕು. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಒದಗಿಸುವ ಮೂಲಕ ನಿಜವಾದ ಪ್ರಜಾ ಸೇವೆ ಮಾಡಬೇಕು ಎಂದು ತಿಳಿಸಿದರು.
ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಕಾರ್ಮಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಇದನ್ನು ಸರ್ಕಾರ ಮಾಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
