ಸಮಗ್ರ ಸುದ್ದಿ

ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಗ್ರಾ.ಪಂ ಅನುದಾನ ಪೂರ್ಣ ಬಳಕೆಯಾಗಲಿ : ಸಚಿವ ಕೃಷ್ಣ ಬೈರೇಗೌಡ

Share

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಕೂಡಲೇ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲು ಗ್ರಾಮ ಪಂಚಾಯಿತಿಯ ಅನುದಾನ ಪೂರ್ಣವಾಗಿ ಬಳಕೆ ಮಾಡಿ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೂಲಭೂತ ಸೌಕರ್ಯಗಳಲ್ಲಿ ಕುಡಿಯುವ ನೀರಿನ ಸೌಲಭ್ಯಕ್ಕೆ ಶಾಶ್ವತ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಪ್ರಥಮಾದ್ಯತೆ ನೀಡಬೇಕು ಎಂದರು.

ನೂತನ ಬೋರ್ವೆಲ್ ಕೊರೆಯಲು ಅನುದಾನ ಕೋರುವ ಹಲವಾರು ಪ್ರಸ್ತಾವನೆ ಬರುತ್ತಿವೆ. ಈಗಾಗಲೇ ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿಗೆ ಅಳವಡಿಸಿರುವ ಆರ್. ಆರ್ ಸಂಖ್ಯೆಯನ್ನೇ ನೂತನ ಸಂಪರ್ಕಗಳಿಗೆ ವರ್ಗಾವಣೆ ಮಾಡಿ ಎಂದು ಅವರು ಸೂಚಿಸಿದರು.

ಮುಂದಿನ ಸಭೆಯೊಳಗಾಗಿ ಈ ಕಾರ್ಯವನ್ನು ಪೂರ್ಣಗೊಳಸಲಾಗುವುದು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯ ನಿರ್ವಹಣಾ ಅಧಿಕಾರಿಗಳಾದ ಯತೀಶ್ .ಆರ್ ಅವರು ಭರವಸೆ ನೀಡಿದರು.

ಕಸ ನಿರ್ವಹಣೆ ವಿಚಾರದಲ್ಲಿ ಇತರೆ ರಾಜ್ಯಗಳನ್ನು ಗಮನಿಸಿದರೆ ನಮಗೆ ಬೇಸರವಾಗುತ್ತದೆ.ನಮ್ಮಲ್ಲಿ ಹಣಕ್ಕೆ ಯಾವುದೇ ಕೊರತೆ ಇಲ್ಲ, ಆದರೆ ವೈಜ್ಞಾನಿಕ ಮನಸ್ಥಿತಿಯ ಕೊರತೆಯಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿಗಳಿಗೆ ಬರುವ ಅನುದಾನದ ಒಂದು ಪಾಲನ್ನು ಕಡ್ಡಾಯವಾಗಿ ಶಾಶ್ವತ ನಿರ್ಮಾಣ ಕಾರ್ಯಗಳಿಗೆ, ವಿಶೇಷವಾಗಿ ನೀರು ಮತ್ತು ಕಸ ನಿರ್ವಹಣೆಗೆ ಮೀಸಲಿಡಬೇಕು ಎಂದರು.

ಕೇವಲ ಹಣ ಖರ್ಚು ಮಾಡುವುದರಿಂದ ಜಿಲ್ಲೆ ಅಭಿವೃದ್ಧಿ ಆಗುವುದಿಲ್ಲ ಬದಲಿಗೆ ಅದು ಜನರ ಸಮಸ್ಯೆಗಳಿಗೆ ಪರಿಹಾರವಾಗಿ ಪರಿಣಮಿಸಬೇಕು. ಇಲ್ಲದಿದ್ದರೆ ಹಣ ವೆಚ್ಚ ಮಾಡಿಯೂ ಯಾವುದೇ ಪ್ರಯೋಜನವಿಲ್ಲ ಎಂದು ಕಿವಿಮಾತು ಹೇಳಿದರು.

ಕಳೆದ ಒಂದೂವರೆ ವರ್ಷದಿಂದ ಯೋಜನೆಯನ್ನು ಮಾಡಿ ಬೆಂಗಳೂರು ಸುತ್ತ ಬಿ ಎಂ ಆರ್ ಡಿ ವ್ಯಾಪ್ತಿಯಲ್ಲಿ ಹೊಸ ರಸ್ತೆಗಳನ್ನು ಗುರುತಿಸಲಾಗಿದೆ. ಕೆಲವು ರಸ್ತೆಗಳನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು. ಈ ಕಾರ್ಯದಲ್ಲಿ ಅಧಿಕಾರಿಗಳ ನಿರ್ಲಕ್ಷ ಅಥವಾ ನಿಯಮ ಉಲಂಘನೆ ಕಂಡು ಬಂದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಗ್ರಾಮೀಣ ಭಾಗದಲ್ಲಿ ಉದ್ಯಾನವನ , ಆಟದ ಮೈದಾನ ಮತ್ತು ಕ್ರೀಡಾಂಗಣದ ಅವಶ್ಯಕತೆ ಇದ್ದು ಪಂಚಾಯಿತಿ ಭಾಗದಲ್ಲಿ ಖಾಲಿ ಇರುವ ನಿವೇಶನವನ್ನು ಹಸ್ತಾಂತರಿಸಿ ಆದ್ಯತೆ ಮೇರೆಗೆ ತಡೆಗೋಡೆಯನ್ನು ನಿರ್ಮಿಸಿ ಅನುದಾನದ ಲಭ್ಯತೆ ಆಧರಿಸಿ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು

ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ತಾಲೂಕು ಶಾಸಕರಾದ ಎಂ ಕೃಷ್ಣಪ್ಪ, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಋತ್ವಿಕ್ ರಂಜನ್ ಪಾಂಡೆ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ ಎಸ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಯತೀಶ್ ಆರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page