ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದ ಮಹಾ ಸಂಕಲ್ಪ: ಸಚಿವ ಟಿ. ರಘುಮೂರ್ತಿ

Share

ಬಳ್ಳಾರಿ: ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಮುಕ್ತಿ ಪಡೆದ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಪ್ರಗತಿ, ಸಾಮಾಜಿಕ ನ್ಯಾಯ ಹಾಗೂ ಜನರ ಏಳಿಗೆಯೇ ನಮ್ಮ ಸರ್ಕಾರದ ಅಚಲ ಸಂಕಲ್ಪವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಅವರು ಹೇಳಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಪದವಿಪೂರ್ವ (ಮಾ.ಪು) ಕಾಲೇಜು ಮೈದಾನದಲ್ಲಿ ಗುರುವಾರ ಆಯೋಜಿಸಲಾಗಿದ್ದ 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

1947ರ ಆಗಸ್ಟ್ 15ರಂದು ಇಡೀ ಭಾರತಕ್ಕೆ ಸ್ವಾತಂತ್ರ್ಯ ಬಂದರೂ, ಹೈದರಾಬಾದ್ ನಿಜಾಮ ಮೀರ್ ಉಸ್ಮಾನ್ ಅಲಿ ಖಾನ್ ಭಾರತ ಒಕ್ಕೂಟಕ್ಕೆ ಸೇರಲು ನಿರಾಕರಿಸಿ ಸ್ವತಂತ್ರವಾಗಿರಲು ನಿರ್ಧರಿಸಿದ್ದರಿಂದ ಕಲ್ಯಾಣ ಕರ್ನಾಟಕದ ಆಗಿನ ಕಲ್ಬುರ್ಗಿ, ಬೀದರ್, ರಾಯಚೂರು ಸೇರಿದಂತೆ ಇಂದಿನ ಏಳು ಜಿಲ್ಲೆಗಳಿಗೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಕಾಸಿಂ ರಜ್ವಿ ನೇತೃತ್ವದ ರಜಾಕಾರರ ದೌರ್ಜನ್ಯದ ವಿರುದ್ಧ ಹೋರಾಟಗಾರರು ರಣಕಹಳೆ ಊದಿದರು. ಅಂತಿಮವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಜವಾಹರಲಾಲ್ ನೆಹರೂ ಅವರ ದಿಟ್ಟ ನಿರ್ಧಾರದ ಫಲವಾಗಿ ನಡೆದ ಐದು ದಿನಗಳ ಸೈನಿಕ ಕಾರ್ಯಾಚರಣೆಯಿಂದ 1948ರ ಸೆಪ್ಟೆಂಬರ್ 17ರಂದು ಈ ಭಾಗಕ್ಕೆ ಮುಕ್ತಿ ದೊರೆಯಿತು. ಈ ಐತಿಹಾಸಿಕ ಹೋರಾಟದಲ್ಲಿ ತ್ಯಾಗ ಬಲಿದಾನ ಮಾಡಿದ ಎಲ್ಲ ಮಹನೀಯರನ್ನು ಸ್ಮರಿಸಬೇಕಿದೆ ಎಂದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ದಿವಂಗತ ಧರ್ಮಸಿಂಗ್ ಅವರ ಪ್ರಯತ್ನದಿಂದಾಗಿ ಸಂವಿಧಾನದ 371 (ಜೆ) ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಲಭಿಸಿತು. ಇದರಿಂದಾಗಿ ಶಿಕ್ಷಣ, ಉದ್ಯೋಗ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಮೀಸಲಾತಿ ಮತ್ತು ಅನುದಾನ ಒದಗಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಈವರೆಗೆ ಸುಮಾರು 18,000 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಪ್ರಮುಖ ವಲಯಗಳಿಗೆ ಆದ್ಯತೆ ನೀಡಲಾಗಿದೆ. ಶಿಕ್ಷಣಕ್ಕೆ 2,202 ಕೋಟಿ, ಆರೋಗ್ಯಕ್ಕೆ 2,071 ಕೋಟಿ, ಉದ್ಯೋಗಾವಕಾಶಕ್ಕೆ 974 ಕೋಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 498 ಕೋಟಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕೆ 638 ಕೋಟಿ, ಅಲ್ಪಸಂಖ್ಯಾತರ ಅಭಿವೃದ್ಧಿಗೆ 313 ಕೋಟಿ, ಅಂತರ್ಜಲ ಅಭಿವೃದ್ಧಿಗೆ 425 ಕೋಟಿ, ಕಲ್ಯಾಣ ಪಥಕ್ಕೆ 1,000 ಕೋಟಿ, ಪ್ರಜಾಸೌಧಗಳ ನಿರ್ಮಾಣಕ್ಕೆ 166 ಕೋಟಿ ರೂ. ವ್ಯಯಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬರ ಪರಿಸ್ಥಿತಿ ಹಾಗೂ ಸರ್ಕಾರದ ಸಿದ್ಧತೆ:

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು,
ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಮಳೆಯ ಕೊರತೆ ಹಾಗೂ 3 ವಾರಗಳ ಸತತ ಒಣ ಹವೆ/ಡ್ರೈ ಸ್ಪೆಲ್ ಆಧಾರದ ಮೇಲೆ ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಅರ್ಹ ತಾಲೂಕುಗಳನ್ನೂ ಪಟ್ಟಿಗೆ ಸೇರಿಸಿ, ಕೇಂದ್ರ ಸರ್ಕಾರಕ್ಕೆ ಪರಿಹಾರ ಪ್ರಸ್ತಾವನೆ ಸಲ್ಲಿಸಲಾಗುವುದು. ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದರ ಜೊತೆಗೆ, ವಿಬಿಜಿ ರಾಮ್‌ಜಿ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಜನರಿಗೆ ಉದ್ಯೋಗ ನೀಡಿ ಗುಳೆ ಹೋಗುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಯುವಜನತೆ ಮತ್ತು ಸಾಮಾಜಿಕ ಕಲ್ಯಾಣಕ್ಕೆ ಆದ್ಯತೆ:

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಸಮಾನತೆಯ ಆಶಯದಂತೆ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಜಾರಿಯಲ್ಲಿರುವ ಐದು ಗ್ಯಾರಂಟಿ ಯೋಜನೆಗಳಿಗೆ 1,41,210 ಕೋಟಿಗಳನ್ನು ವಿನಿಯೋಗಿಸಿ 2.70 ಕೋಟಿ ಕುಟುಂಬಗಳಿಗೆ ಆಸರೆಯಾಗಲಾಗಿದೆ ಎಂದು ವಿವರಿಸಿದರು.

ಜೊತೆಗೆ, ಗ್ರಾಮೀಣ ಹಾಗೂ ನಗರ ಪ್ರದೇಶದ ಯುವಕರಲ್ಲಿ ನಾಯಕತ್ವ ಗುಣ ಬೆಳೆಸಲು 10,000 ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ, 1,000 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ ಹಾಗೂ ಬೆಂಗಳೂರಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆಯಂತಹ ಮುನ್ನೋಟದ ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಜನಪ್ರತಿನಿಧಿಗಳು ಕೇವಲ ಟೀಕೆ, ಆರೋಪಗಳಿಗೆ ಸೀಮಿತವಾಗದೆ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಸಮಾರಂಭದಲ್ಲಿ ಸಂಸದ ಈ.ತುಕಾರಾಮ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ಗೌರವಾಧ್ಯಕ್ಷ ಸಿರಿಗೇರಿ ಪನ್ನರಾಜ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ .ಕೆ., ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಡಾ.ಪಿ.ಎಸ್ ಹರ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಇನ್ನಿತರರು ಉಪಸ್ಥಿತರಿದ್ದರು.


Share

You cannot copy content of this page