ಸಮಗ್ರ ಸುದ್ದಿ

ಯಕ್ಷಗಾನ ಆರ್ಕೈವ್ಸ್‌ ಸ್ಥಾಪನೆಗೆ ಸರ್ಕಾರದ ಮಹತ್ವದ ತೀರ್ಮಾನ | ಕರಾವಳಿಯಲ್ಲಿ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗೆ ಮತ್ತು ಅಧ್ಯಯನಕ್ಕೆ ಹೊಸ ದಿಕ್ಕು- ಡಾ. ಪುರುಷೋತ್ತಮ್ ಬಿಳಿಮಲೆ

Share

ಬೆಂಗಳೂರು: ಮಂಗಳೂರಿನಲ್ಲಿ ಯಕ್ಷಗಾನ ವಿದ್ಯುನ್ಮಾನ ದಾಖಲೆಗಳ ಸಂಗ್ರಹಾಲಯ (ಯಕ್ಷಗಾನ ಡಿಜಿಟಲ್‌ ಆರ್ಕೈವ್ಸ್) ಸ್ಥಾಪಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿರುವುದು ಮುಖ್ಯಮಂತ್ರಿಗಳ ಸಾಂಸ್ಕೃತಿಕ ಕಾಳಜಿ ಹಾಗೂ ಜನಪರ ಆಡಳಿತದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ತಾವು ಕಳೆದ ಒಂದು ವಾರದ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಗಣಿಸಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಈ ಐತಿಹಾಸಿಕ ನಿರ್ಧಾರವು ಇಡೀ ಕರಾವಳಿಯ ಸಾಂಸ್ಕೃತಿಕ ಅಸ್ಮಿತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೊಸ ಆಯಾಮವನ್ನು ನೀಡಿದೆ ಎಂದಿರುವ ಬಿಳಿಮಲೆ, ಇದು ಯಕ್ಷಗಾನದ ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳನ್ನು ದಾಖಲಿಸಿ ಮುಂದಿನ ತಲೆಮಾರುಗಳಿಗೆ ಅದನ್ನು ಉಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದಿದ್ದಾರೆ.

ಸರ್ಕಾರದ ಈ ತೀರ್ಮಾನವು ಯಕ್ಷಗಾನ ಕ್ಷೇತ್ರದಲ್ಲಿ ದೀರ್ಘಕಾಲದಿಂದ ಕೆಲಸ ಮಾಡುತ್ತಿರುವ ಕಲಾವಿದರು, ಸಂಶೋಧಕರು, ಲೇಖಕರು, ಕಲಾಸಕ್ತರುಗಳಲ್ಲಿ ಹೊಸ ಭರವಸೆ ಮೂಡಿಸಿದೆ ಎಂದಿರುವ ಬಿಳಿಮಲೆ, ಇದರಿಂದ ಯಕ್ಷಗಾನದಂತಹ ಜೀವಂತ ಪರಂಪರೆಯನ್ನು ಪೋಷಿಸುವ ನಿಟ್ಟಿನಲ್ಲಿ ಈ ಎಲ್ಲಾ ಸಮುದಾಯಗಳು ಒಟ್ಟಾರೆಯಾಗಿ ಕೆಲಸ ಮಾಡುವ ಅವಕಾಶ ಸೃಷ್ಟಿಯಾಗಲಿದೆ ಎಂದಿದ್ದಾರೆ.

ಯಕ್ಷಗಾನ ಆರ್ಕೈವ್ಸ್‌ ಸ್ಥಾಪನೆಯ ಸರ್ಕಾರದ ನಿರ್ಧಾರಕ್ಕೆ ಸಹಕರಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ ಅವರಿಗೆ ಬಿಳಿಮಲೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.


Share

You cannot copy content of this page