ಮಂಗಳೂರು:ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಅಧ್ಯಾಯ ಬರೆದಿರುವ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಬೆಳ್ಳಂ ಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರ ಮನದ ಮಾತುಗಳಿಗೆ, ಅವರ ಸಮಸ್ಯೆಗಳಿಗೆ ಕಿವಿಗೊಟ್ಟರು.
ಬೆಳಗ್ಗೆ 6 ಗಂಟೆಗೆ ಬಂದರಿಗೆ ಭೇಟಿ ನೀಡಿದ ಸಿಎಂ, ಬಂದರು ಪ್ರದೇಶದ ಪರಿಸ್ಥಿತಿಯನ್ನು ಕಣ್ಣಾರೆ ಕಂಡರು. ಜತೆಗೆ ಮೀನುಗಾರಿಕೆ ಬೋಟ್ ನಲ್ಲಿ ಪ್ರಯಾಣ ಮಾಡಿ ಬಂದರು ಅಭಿವೃದ್ಧಿಗೆ ಈಗಾಗಲೇ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳು ಹಾಗೂ ಮೀನುಗಾರರ ಮುಖಂಡರಿಂದ ಮಾಹಿತಿ ಪಡೆದರು.
“ಸದ್ಯ 200 ಬೋಟ್ ಗಳಿಗೆ ಡಾಕ್ ವ್ಯವಸ್ಥೆ ಇದ್ದು, ಪಾಲ್ಗುಣಿ, ನೇತ್ರಾವತಿ ನದಿ ಹಾಗೂ ಅರಬ್ಬಿ ಸಮುದ್ರ ಸೇರುವ ತ್ರಿವೇಣಿ ಸಂಗಮ ಜಾಗದಲ್ಲಿ ಬೋಟ್ ಗಳಿಗೆ ಹೊಸ ಡಾಕ್ ಗಳನ್ನು ಮಾಡಿದರೆ ಹೆಚ್ಚಿನ ಬೋಟ್ ಗಳ ನಿಲ್ದಾಣಕ್ಕೆ ಅವಕಾಶವಾಗುತ್ತದೆ. ಇದಕ್ಕಾಗಿ ಡಜ್ಜಿಂಗ್ ಮಾಡಬೇಕಾಗಿದೆ. 25 ವರ್ಷಗಳಿಂದ ಡಜ್ಜಿಂಗ್ ಆಗಿಲ್ಲ, ಎರಡು ನದಿ ಹಾಗೂ ಅಳಿವೆ ಬಾಗಿಲಲ್ಲಿ ಡಜ್ಜಿಂಗ್ ಮಾಡಬೇಕಾಗಿದೆ” ಎಂದು ಮೀನುಗರರ ಸಂಘದ ಮಾಜಿ ಅಧ್ಯಕ್ಷ ಚೇತನ್ ಬೆಂಗ್ರೆ ಹಾಗೂ ಮೋಹನ್ ಬೆಂಗ್ರೆ ಅವರು ಸಿಎಂಗೆ ವಿವರಿಸಿದರು.
“ಬಂದರಿನ ತಟದಲ್ಲಿ ಮರಳು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ಅವುಗಳನ್ನು ತೆಗೆಯಬೇಕು. ಈ ಭಾಗದಲ್ಲಿ ಎಲ್ಲಿ ಆಳವಾದ ಜಾಗ ಇದೆ ಎಂದು ಚಾನಲ್ ಮಾರ್ಕಿಂಗ್ ಬಾಯ್ಸ್ ಗಳನ್ನು ಹಾಕಿದರೆ ಬೋಟ್ ಗಳ ಸುಗಮ ಸಾಗಣೆಗೆ ನೆರವಾಗುತ್ತದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವ್ಯಾಪಾರ ಸ್ಥಗಿತ; ಸಿಎಂ ಸಿಡಿಮಿಡಿ
ಇನ್ನು ಸಿಎಂ ಭೇಟಿ ಹಿನ್ನೆಲೆಯಲ್ಲಿ ಬಂದರಿನಲ್ಲಿ ವ್ಯಾಪಾರ ಮಾಡಲು ಮೀನುಗಾರರಿಗೆ ಅವಕಾಶ ನೀಡದಿರುವುದನ್ನು ಗಮನಿಸಿದ ಸಿಎಂ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು. ಯಾವುದೇ ಕಾರಣಕ್ಕೂ ವ್ಯಾಪಾರ ನಿಲ್ಲಬಾರದು, ಇದರಿಂದ ಮೀನುಗಾರರು ಹಾಗೂ ವ್ಯಾಪಾರಿಗಳ ಜೀವನಕ್ಕೆ ತೊಂದರೆಯಾಗಬಾರದು. ತಕ್ಷಣ ವ್ಯಾಪಾರ ಪ್ರಾರಂಭಿಸಿ” ಎಂದು ಸೂಚಿಸಿದರು.
ವ್ಯಾಪಾರ ನಿಲ್ಲಿಸಿದವರ ವಿರುದ್ಧ ಕ್ರಮ
‘ನಾನು ಭೇಟಿ ನೀಡಿರುವ ಸಂದರ್ಭದಲ್ಲಿ ಮಂಗಳೂರಿನ ಬಂದರು ಚಟವಟಿಕೆಗಳು ಸ್ಥಬ್ದವಾಗಿವೆ. ಇದಕ್ಕೆ ಕಾರಣ ಏನು ಎಂಬುದನ್ನು ಅರಿಯಲು ವರದಿ ನೀಡುವಂತೆ ಡಿಸಿ ಹಾಗೂ ಆಯುಕ್ತರಿಗೆ ನಿರ್ದೇಶನ ನೀಡಿದ್ದೇನೆ. ಇದಕ್ಕೆ ಅಧಿಕಾರಿಗಳು ಕಾರಣರಾಗಿದ್ದರೆ ಅವರನ್ನು ಅಮಾನತು ಮಾಡುತ್ತೇನೆ. ಅಕ್ರಮಗಳನ್ನು ಮುಚ್ಚಿಡುವ ದೃಷ್ಟಿಯಿಂದ ಈ ಕೆಲಸ ಮಾಡಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ನನಗೆ ಯಾವ ಭದ್ರತೆಯ ಅಗತ್ಯವಿಲ್ಲ. ನಾನು ಮೀನುಗಾರರು, ವರ್ತಕರು ಹಾಗೂ ದೋಣಿಯನ್ನೇ ನಂಬಿರುವ ಬೆಸ್ತ ಸಮುದಾಯದ ಬದುಕಿನ ವಾಸ್ತವ ಸ್ಥಿತಿಗತಿಯನ್ನು ಅರಿಯಲು ಬಂದಿದ್ದೇನೆ’ ಎಂದರು.
ಅಕ್ರಮ, ಕಾನೂನು ಉಲ್ಲಂಘಿಸಿದರೆ ಕ್ರಮ
“ದೇಶದ ವಿವಿಧ ಮೂಲೆಗಳಿಂದ ಇಲ್ಲಿಗೆ ಬಂದು ವ್ಯಾಪಾರ ವಹಿವಾಟು ನಡೆಸುತ್ತಾರೆ. ಅವರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಮೂಲ ಸೌಕರ್ಯಗಳು ದೊರೆಯಬೇಕು, ವಾಹನ ಸಂಚಾರ ಸುಗಮವಾಗಿರಬೇಕು.
ಇಲ್ಲಿ ರಸ್ತೆಯನ್ನು ನಿರ್ಬಂದಿಸಿರುವುದು, ಅಕ್ರಮವಾಗಿ ಕಾಂಪೌಂಡ್ ಹಾಕಿರುವುದೆಲ್ಲವೂ ನನ್ನ ಗಮನಕ್ಕೆ ಬಂದಿದೆ.
ಕಾನೂನು ಉಲ್ಲಂಘಿಸಿರುವವರು ಎಷ್ಟೇ ದೊಡ್ಡವರಾಗಿದ್ದರೂ, ಪ್ರಭಾವಶಾಲಿಗಳಾದರು ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು. ಖಾಸಗಿ ಆಸ್ತಿಯಾಗಿದ್ದರೆ ದಾಖಲೆಗಳನ್ನು ನೋಡಿ ಸರ್ಕಾರದ ವಶಕ್ಕೆ ಪಡೆಯುತ್ತೇವೆ. ಅಭಿವೃದ್ಧಿಯನ್ನು ಮಾಡುತ್ತೇವೆ” ಎಂದು ಖಡಕ್ ಎಚ್ಚರಿಕೆ ನೀಡಿದರು.
“ಸಣ್ಣ ಮೀನುಗಾರರು ಬೋಟ್ ಗಳನ್ನು ನಿಲ್ಲಿಸುವ ವಿಚಾರವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾ ಮಾಡುತ್ತೇವೆ” ಎಂದು ಹೇಳಿದರು.
“ಮೀನುಗಾರರದ್ದು ದೊಡ್ಡ ಸಮುದಾಯ. ಎಲ್ಲಾ ವರ್ಗದ ಜನ ಸೌಹಾರ್ದತೆಯಿಂದ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಶಕ್ತಿ ಕೇಂದ್ರ. ಈ ಸಮುದಾಯಕ್ಕೆ ಪ್ರೋತ್ಸಾಹ ಕೊಡಬೇಕು. ಹೀಗಾಗಿ, ಇಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗುವುದು. ನಾವು ಈಗ ಇರುವ 40-50 ಸೀಟುಗಳನ್ನು 200ಕ್ಕೆ ಏರಿಕೆ ಮಾಡಲಾಗುವುದು, ವಿದ್ಯಾಭ್ಯಾಸ, ಸಮುದ್ರ ಮೆಟ್ರೋ, ನೀಲಿ ಆರ್ಥಿಕತೆಗೆ ಒತ್ತು ನೀಡುವ ಕುರಿತು ನಮ್ಮ ಸರ್ಕಾರ ತೀರ್ಮಾನಿಸಿದೆ” ಎಂದರು.
16 ಸಾವಿರ ಕೋಟಿ ನಿಮ್ಮ ಮೂಲಸೌಕರ್ಯಕ್ಕೆ
“ಈಗಾಗಲೇ 32 ಸಾವಿರ ಕೋಟಿ ಮೊತ್ತವನ್ನು ಅಭಿವೃದ್ಧಿಗಾಗಿ ಘೋಷಣೆ ಮಾಡಿದ್ದೇವೆ. ಇದರಲ್ಲಿ 16 ಸಾವಿರ ಕೋಟಿ ಇಲ್ಲಿನ ಗ್ರಾಮೀಣ ಭಾಗದ ರಸ್ತೆ, ನೀರಿನಂಥ ಮೂಲ ಸೌಕರ್ಯಕ್ಕೆ ನೀಡಲಾಗಿದೆ. ಮಂಗಳೂರು, ಕಾರವಾರಗಳಲ್ಲಿ ಎಲ್ಲೆಲ್ಲಿ ವಹಿವಾಟು ನಡೆಯುತ್ತದೆ ಎಂಬುದರ ಬಗ್ಗೆ ಸಮಗ್ರ ವರದಿ ಪಡೆದು, ಸಮುದ್ರ ಪಕ್ಕದ ಮೀನುಗಾರ ಕುಟುಂಬಕ್ಕೆ ಅಗತ್ಯ ತಾಂತ್ರಿಕ ನೆರವನ್ನು ನೀಡಲು ಯೋಜನೆ ರೂಪಿಸುತ್ತೇವೆ. ಕೆಲವೊಂದು ಸಮಸ್ಯೆಗಳನ್ನು ಮೀನುಗಾರರು ನೇರವಾಗಿ ಹಂಚಿಕೊಳ್ಳಲು ಸಾಧ್ಯವಾಗದೇ ಇರಬಹುದು. ಚಿಂತೆ ಇಲ್ಲ, ಗುಪ್ತ ವರದಿ ತರಿಸಿಕೊಳ್ಳುತ್ತೇನೆ. ಮಾಫಿಯಾಗಳು ಇದೆಯಾ. ತೊಂದರೆ ಆಗುತ್ತಿದೆಯಾ ಎನ್ನುವುದನ್ನು ಗಮನಿಸುತ್ತೇನೆ. ಒಟ್ಟಾರೆ, ನ್ಯಾಯ ಬದ್ಧವಾಗಿ ವ್ಯಾಪಾರ ವಹಿವಾಟು ನಡೆಯಬೇಕು. ಮೀನುಗಾರರ ಸಮುದಾಯ ಅಭಿವೃದ್ಧಿಯಾಗಬೇಕು ಎನ್ನುವುದು ನಮ್ಮ ಗುರಿ” ಎಂದರು.
ಅಳಿವೆಬಾಗಿಲಲ್ಲಿ 35 ವರ್ಷದಿಂದ ಹೂಳು ಎತ್ತಿಲ್ಲ ಅಪಾಯಕಾರಿಯಾಗಿದೆ ಎಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಅಲ್ಲಿ ದೋಣಿಯೊಂದು ನಿಂತಿದೆ. ಅದು ಇದೇ ಕಾರಣಕ್ಕೆ ಎನ್ನುವುದು ಸಚಿವ ಖಾದರ್ ಅವರು ವಿವರಿಸಿದ್ದಾರೆ.
ಹೂಳನ್ನು ಸಮುದ್ರಕ್ಕೆ ಬಿಡಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ. ಇನ್ನೂ ಕೆಲವರು ಆ ಪ್ರದೇಶವನ್ನು ಮತ್ತಷ್ಟು ವಿಸ್ತಾರ ಮಾಡಿ ಎಂದೂ ಹೇಳಿದ್ದಾರೆ. ಕೇಂದ್ರದ ತಾಂತ್ರಿಕ ಸಮಿತಿ ಇದಕ್ಕೆ ಸಲಹೆ ಕೊಡಬೇಕಂತೆ. ಈ ಬಗ್ಗೆ ಸೂಕ್ತ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳುತ್ತೇವೆ.
ಹೂಳು ತೆಗೆಯುವ ಪ್ರಕ್ರಿಯೆಗೆ ಲೀಸ್ ಪಡೆಯಬೇಕೆ ಅಥವಾ ಯಂತ್ರ, ದೋಣಿಗಳನ್ನು ಖರೀದಿಸಿ ಹೂಳು ತೆಗೆಸಬೇಕೆ ಎನ್ನುವುದನ್ನು ತೀರ್ಮಾನಿಸುತ್ತೇನೆ. ಈ ಹಿಂದೆ ಸರ್ಕಾರದಿಂದಲೇ ಹೂಳು ತೆಗೆಸುವ ವ್ಯವಸ್ಥೆ ಇತ್ತು. ಈಗಿಲ್ಲ” ಎಂದರು.
ಕರಾವಳಿ ರಾಜ್ಯ ಮಾತ್ರವಲ್ಲ, ದೇಶದ ಸಂಪತ್ತು
ನಿನ್ನೆ ಸಚಿವ ಸಂಪುಟಕ್ಕೆ ಈ ಭಾಗದ ಜನರಿಂದ ಬೆಂಬಲ ವ್ಯಕ್ತವಾಗಿದೆಯೇ ಎಂದು ಕೇಳಿದಾಗ “ಕರಾವಾಳಿ ರಾಜ್ಯದ ಸಂಪತ್ತು ಮಾತ್ರವಲ್ಲ ರಾಷ್ಟ್ರದ ಸಂಪತ್ತು ಕೂಡ ಆಗಿದೆ. ಇದನ್ನು ನಾವು ಕಾಪಾಡಬೇಕು. ಮಂಗಳೂರಿಗಾಗಿ ಅಭಿವೃದ್ಧಿಯ ಪಥ ಚಿಂತನೆ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಕರವಾಳಿ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಿದೆ. ಇದಕ್ಕಾ 3-4 ಹೊಸ ನೀತಿಗಳನ್ನು ಜಾರಿ ಮಾಡಲು ಚಿಂತನೆ ನಡೆಸಿದ್ದೇವೆ. ಕರಾವಳಿಯಲ್ಲಿ ಹೂಡಿಕೆದಾರರಿಗೆ ಪ್ರೋತ್ಸಾಹ ಕೊಡಬೇಕು. ಹೊಸದಾಗಿ ಹೂಡಿಕೆ ಮಾಡುವವರಿಗೆ ಮೂಲಸೌಕರ್ಯಗಳನ್ನು ಒದಗಿಸಬೇಕು. ಅವರು ಬಂದಾಗ ಇಳಿದುಕೊಳ್ಳುವುದಕ್ಕೆ ಒಳ್ಳೆಯ ಹೋಟೆಲ್ ಗಳ ನಿರ್ಮಾಣ ಮಾಡಬೇಕು. ಇರುವ ಜಾಗವನ್ನು ಗುರಿತಿಸಿ ಕಾನೂನಿನ ಚೌಕಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುತ್ತೇವೆ” ಎಂದು ವಿವರಿಸಿದರು.
‘ನಾವು ಕರಾವಳಿ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ವಿರೋಧ ಪಕ್ಷಗಳು ನಮ್ಮ ಅಭಿವೃದ್ಧಿಯ ಪ್ರವಾಸದ ಬಗ್ಗೆ ಕುಹಕದ ಮಾತುಗಳನ್ನು ಆಡುತ್ತಿವೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ’ ಎಂದರು.
ತುಳು ಭಾಷೆ ಈ ಭಾಗದ ಜನರ ಹೆಮ್ಮೆ:
ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿರುವ ಬಗ್ಗೆ ಕೇಳಿದಾಗ, “ತುಳು ಭಾಷೆ ಈ ಭಾಗದ ಜನರ ಹೆಮ್ಮೆ. ಇದು ಈ ಭಾಗದ ಜನರ ನಿರೀಕ್ಷೆಯಗಿತ್ತು. ಎಲ್ಲಾ ಪಕ್ಷದ ನಾಯಕರು ಇದನ್ನು ಬಯಸಿದ್ದರು. ಹೀಗಾಗಿ ನಮ್ಮ ಸರ್ಕಾರ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ತೀರ್ಮಾನ ಮಾಡಿದ್ದೇವೆ” ಎಂದು ತಿಳಿಸಿದರು.
ಕಸ್ತೂರಿ ರಂಗನ್ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿರುವೆ:
ಕಸ್ತೂರಿ ರಂಗನ್ ವಿಚಾರವಾಗಿ ತೀರ್ಥಹಳ್ಳಿ ಸೇರಿದಂತೆ ಇತರ ಭಾಗಗಳಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಲಾಗಿದೆ. ಅಲ್ಲಿ ಚರ್ಚೆ ಮಾಡುವ ಮುನ್ನ ಈ ಭಾಗದ ಜನರ ಅಭಿಪ್ರಾಯ ಸಂಗ್ರಹಿಸಲು ಭೇಟಿ ನೀಡುತ್ತಿರುವೆ. ಅವರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ನಾವು ಕೇಂದ್ರದ ಅಧಿಸೂಚನೆ ವಿರುದ್ಧ ಕಠಿಣ ನಿಲುವು ತಾಳಬೇಕಾಗುತ್ತದೆಯೇ ಎಂದು ತೀರ್ಮಾನ ಮಾಡಲಾಗುವುದು. ನಮಗೆ ನಮ್ಮ ಜನರ ಬದುಕು ಮುಖ್ಯ ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಏನೆಲ್ಲಾ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇವೆ” ಎಂದರು.
ಗ್ಯಾರಂಟಿ ಯೋಜನೆಗಳಿಗೆ ಹಣ ಇಲ್ಲ, ಸಚಿವ ಸಂಪುಟ ಯೋಜನೆಗಳಿಗೆ ಹಣ ಹೇಗೆ ಹೊಂದಿಸುತ್ತಾರೆ ಎಂಬ ಪ್ರಶ್ನೆ ಬಗ್ಗೆ ಕೇಳಿದಾಗ, “ನಾವು ನುಡಿದಂತೆ ನಡೆಯುತ್ತೇವೆ. ಅದೇ ನಮ್ಮ ಶಕ್ತಿ” ಎಂದರು.
