ಸಮಗ್ರ ಸುದ್ದಿ

ತಿದ್ದುಪಡಿಗೊಂಡ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ಒಂದು ತಿಂಗಳೊಳಗೆ ಅಧಿಸೂಚನೆ: ಸಚಿವ ಕೃಷ್ಣ ಬೈರೇಗೌಡ |ಭೂ ಪರಿವರ್ತನೆ ಈಗ ಮತ್ತಷ್ಟು ಸುಲಭ, ಸರಳ, ಲಂಚಮುಕ್ತ

Share

ಬೆಳಗಾವಿ, ಸುವರ್ಣ ವಿಧಾನಸೌಧ: ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ವಿಧಾನ ಪರಿಷತ್‌ ನಲ್ಲಿಂದು ಪ್ರಶ್ನೋತ್ತರ ಅವಧಿಯ ವೇಳೆ ಪರಿಷತ್ ಸದಸ್ಯ ರಾಮೋಜಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಲ್ಲಿ ಜಾರಿಯಾಗಿದ್ದರೂ ಈ ಹಿಂದೆ ಅಗತ್ಯ ತಿದ್ದುಪಡಿಗಳಾಗಿರಲಿಲ್ಲ. ಆದರೆ, ಪ್ರಸ್ತುತ ಅತ್ಯಧಿಕ ಹಾಗೂ ಅಗತ್ಯ ತಿದ್ದುಪಡಿಗಳನ್ನು ತರಲಾಗುತ್ತಿದೆ.

ಕಲಂ 95ಕ್ಕೆ ಸಾಕಷ್ಟು ತಿದ್ದುಪಡಿ ಮಾಡಿದ್ದು, ಕಳೆದ ಅಕ್ಟೋಬರ್ 20 ರಂದೇ ಕರಡು ರಚಿಸಲಾಗಿದೆ. ಈ ಪೈಕಿ ಬಹುಮುಖ್ಯವಾಗಿ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಭೂ ಪರಿವರ್ತನೆಯನ್ನು ಮತ್ತಷ್ಟು ಸರಳೀಕರಣಗೊಳಿಸಲಾಗಿದೆ. ಬಹು ಕಾಲದಿಂದಲೂ ಭೂ ಪರಿವರ್ತನೆ ಎಂಬುದೇ ಹಗರಣ ಎಂಬಂತಹ ಪರಿಸ್ಥಿತಿ ಇತ್ತು. ಹೀಗಾಗಿ ಈ ಭೂ ಪರಿವರ್ತನೆ ದಂಧೆಗೆ ಸಂಪೂರ್ಣ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ ಎಂದರು.

ಮಾಸ್ಟರ್ ಪ್ಲಾನ್ ಪ್ರಕಾರ ಉದ್ಯಮ ನಡೆಸುವವರಿಗೆ ಆಟೋ ಕನ್ವರ್ಷನ್ ಗೆ ಅವಕಾಶ ನೀಡಲಾಗಿದೆ. ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಡೀಮ್ಡ್ ಕನ್ವರ್ಷನ್ ಗೂ ಸಹ ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ಆಗುತ್ತಿತ್ತು. ಆದರೆ, ಪ್ರಸ್ತುತ 30 ದಿನಗಳಲ್ಲಿ ಭೂ ಪರಿವರ್ತನೆಗೆ ಅವಕಾಶ ನೀಡಲಾಗುತ್ತಿದೆ.

ಭೂ ಪರಿವರ್ತನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಆಟೋಮೇಟಿಕ್ ಆಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

ಸಣ್ಣ ಕೈಗಾರಿಕೆಗಳು ಎರಡು ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ. ಭಾರತ ದೇಶದಲ್ಲಿ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆ ಬೇಕಿಲ್ಲ. ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಪ್ಲಾಂಟ್ ನಿರ್ಮಿಸಲು ಭೂ ಪರಿವರ್ತನೆ ಅಗತ್ಯ ಇಲ್ಲ. ಹೀಗೆ ಭೂ ಪರಿವರ್ತನೆಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ ಎಂದು ತಿಳಿಸಿದರು.

ಇದಲ್ಲದೆ, ಉಪ ವಿಭಾಗಾಧಿಕಾರಿಗಳ ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮ ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳು ಕೋರ್ಟ್ ನಲ್ಲಿ ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಅದಕ್ಕೂ ನಿಯಮಗಳನ್ನು ರೂಪಿಸಿ ಸರಿಪಡಿಸಿದ್ದೇವೆ.

ಈ ಅನೇಕ ಸೆಕ್ಷನ್ ಗಳಿಗೆ ಹೊಸ ನಿಯಮಗಳನ್ನು ತಿದ್ದುಪಡಿ ಮೂಲಕ ಜಾರಿಗೊಳಿಸುತ್ತಿದ್ದೇವೆ. ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.


Share

You cannot copy content of this page